ಚಿಕ್ಕನಾಯಕನಹಳ್ಳಿ: ಲಾರಿ ಹಾಗೂ ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ನವದಂಪತಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಪಟ್ಟಣದ ಹುಳಿಯಾರು ಗೇಟ್ ಬಳಿ ಶನಿವಾರ ನಡೆದಿದೆ.
ಪಟ್ಟಣದ ಅಂಬೇಡ್ಕರ್ ನಗರದ ಬಳಿಯ ಹೆದ್ದಾರಿಯಲ್ಲಿ ಹುಳಿಯಾರು ಕಡೆಯಿಂದ ವೇಗವಾಗಿ ಬರುತ್ತಿದ್ದ ಲಾರಿ ಮುಂದೆ ಹೋಗುತ್ತಿದ್ದ ಸರ್ಕಾರಿ ಬಸ್ ಹಿಂದಿಕ್ಕುವ ಧಾವಂತದಲ್ಲಿ ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ದಂಪತಿ ರಘು, ಅನುಷ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಕಾರು ಚಾಲಕನಿಗೆ ತೀವ್ರ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಮದುವೆಗೆಂದು ತಾಲ್ಲೂಕಿನ ತಿಗಡನಹಳ್ಳಿಯಿಂದ ಕಾರಿನಲ್ಲಿ ಬಳ್ಳಾರಿಗೆ ಪ್ರಯಾಣಿಸುತ್ತಿದ್ದರು. ಎದುರಿನಿಂದ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಮೃತರು ಎರಡು ತಿಂಗಳ ಹಿಂದಷ್ಟೇ ವಿವಾಹವಾಗಿದ್ದರು. ಅನುಷ ತಿಗಡನಹಳ್ಳಿಯವರಾದರೆ, ರಘು ಅರಸೀಕೆರೆ ತಾಲ್ಲೂಕಿನ ಮಾದನಹಳ್ಳಿಯವರು. ಕಾರು, ಲಾರಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಲಾರಿ ಚಾಲಕ ತಪ್ಪಿಸಿಕೊಂಡಿದ್ದು, ಸಿಪಿಐ ಹರೀಶ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತದ ತೀವ್ರತೆಗೆ ಕಾರು ನಜ್ಜುಗುಜ್ಜಾಗಿದ್ದು, ಮೃತ ದೇಹಗಳನ್ನು ಕಾರಿನಿಂದ ಹೊರತೆಗೆಯಲು ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯರು ಪೊಲೀಸರಿಗೆ ಸಹಕರಿಸಿದರು.
Comments are closed.