ಖರ್ಗೆಗೆ ಅದ್ದೂರಿ ಸ್ವಾಗತ ಮಾಡಲಾಗುತ್ತೆ: ಪರಂ

ಕೊರಟಗೆರೆಯಲ್ಲಿ ಕಾಂಗ್ರೆಸ್ ಕಚೇರಿ ಉದ್ಘಾಟನೆ ಮಾ.5ಕ್ಕೆ

141

Get real time updates directly on you device, subscribe now.


ತುಮಕೂರು: ಕನ್ನಡಿಗರೊಬ್ಬರು ಎಐಸಿಸಿ ಅಧ್ಯಕ್ಷರಾದ ನಂತರ ಪ್ರಥಮ ಬಾರಿಗೆ ಮಾರ್ಚ್ 05 ರಂದು ಜಿಲ್ಲೆಯ ಕೊರಟಗೆರೆ ತಾಲೂಕು ಕಾಂಗ್ರೆಸ್ ಕಚೇರಿ ಉದ್ಘಾಟನೆಗೆ ಬರುತ್ತಿದ್ದು, ಈ ಕಾರ್ಯಕ್ರಮವನ್ನು ಐತಿಹಾಸಿಕವಾಗಿ ರೂಪಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ನ ಎಲ್ಲಾ ಮುಖಂಡರು, ಕಾರ್ಯಕರ್ತರು ಶ್ರಮಿಸುವಂತೆ ಮಾಜಿ ಉಪ ಮುಖ್ಯಮಂತ್ರಿ ಹಾಗೂ ಶಾಸಕ ಡಾ.ಜಿ.ಪರಮೇಶ್ವರ್ ಮನವಿ ಮಾಡಿದ್ದಾರೆ.

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಾರ್ಚ್ 05 ರಂದು ಕೊರಟಗೆರೆ ತಾಲೂಕು ಕಾಂಗ್ರೆಸ್ ಭವನದ ಉದ್ಘಾಟನೆಗೆ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಎಐಸಿಸಿ ಅಧ್ಯಕ್ಷರೊಬ್ಬರು ಜಿಲ್ಲೆಗೆ ಆಗಮಿಸುತ್ತಿರುವುದು ನಮ್ಮ ಸುದೈವ, ಹಾಗಾಗಿ ಈ ಕಾರ್ಯಕ್ರಮ ಹತ್ತಾರು ವರ್ಷಗಳ ಕಾಲ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹಾಗೂ ರಾಜ್ಯದ ಜನತೆಯ ಮನಸ್ಸಿನಲ್ಲಿ ಉಳಿಯುವ ಕಾರ್ಯಕ್ರಮ ವನ್ನಾಗಿಸಬೇಕಿದೆ ಎಂದರು.

ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರಿಗೆ ಇದು ಯುದ್ಧದ ಸಮಯ, ರಾಜ್ಯ ಮತ್ತು ದೇಶದಲ್ಲಿ ಜಾತಿ, ಜಾತಿ, ಧರ್ಮ, ಧರ್ಮಗಳ ನಡುವಿನ ವೈಮನಸ್ಸಿಂದ ಕದಡಿರುವ ಶಾಂತಿಯನ್ನು ಪುನರ್ ಸ್ಥಾಪಿಸಲು ಈ ಯುದ್ಧದಲ್ಲಿ ಕಾಂಗ್ರೆಸ್ ಪಕ್ಷ ಜಯಿಸಲೇಬೇಕಿದೆ. ಆ ಮೂಲಕ ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಮಹಿಳೆಯರ ಮೇಲಾಗುತ್ತಿರುವ ದೌರ್ಜನ್ಯ, ದಬ್ಬಾಳಿಕೆ ತಡೆದು ಅವರು ಶಾಂತಿ ಮತ್ತು ನೆಮ್ಮದಿಯಿಂದ ಬದುಕುವಂತಹ ವಾತಾವರಣವನ್ನು ಕಾಂಗ್ರೆಸ್ ಪಕ್ಷದ ಖಾತರಿ ಪಡಿಸಬೇಕಿದೆ ಎಂದು ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದರು.

ಕೊರಟಗೆರೆ ರೀತಿಯಲ್ಲಿಯೇ ತುಮಕೂರು ಜಿಲ್ಲಾ ಕೇಂದ್ರದಲ್ಲಿಯೂ ಒಂದು ಸುಸಜ್ಜಿತ ಕಾಂಗ್ರೆಸ್ ಭವನ ನಿರ್ಮಿಸುವ ಗುರಿ ಇದೆ. ಇದರ ಜೊತೆಗೆ ಜೆಡಿಎಸ್ ಪಕ್ಷದವರು ಕಬ್ಜಾ ಮಾಡಿರುವ ಕಾಂಗ್ರೆಸ್ ಭವನವನ್ನು ಬೆಂಗಳೂರಿನ ಕಾಂಗ್ರೆಸ್ ಭವನದ ರೀತಿ ಕಾನೂನಾತ್ಮಕ ಹೋರಾಟದ ಮೂಲಕ ನಮ್ಮ ತೆಕ್ಕೆಗೆ ತೆಗೆದುಕೊಳ್ಳುವ ಕೆಲಸವೂ ಆಗಬೇಕಿದೆ ಎಂದ ಡಾ.ಜಿ.ಪರಮೇಶ್ವರ್, ಮಾರ್ಚ್ 05ರ ಕಾರ್ಯಕರ್ತರು ಬಿಜೆಪಿ ಸೋಲಿಸುವ ಜೋಶ್ ನಲ್ಲಿರುವ ಕಾಂಗ್ರೆಸ್ ಕಾರ್ಯಕರ್ತರಿಗೆ ಮತ್ತಷ್ಟು ಬಲ ತುಂಬಲಿದೆ. ಆ ಮೂಲಕ ಇಡೀ ದೇಶಕ್ಕೆ ಹೊಸ ಸಂದೇಶವೊಂದನ್ನು ಕಳುಹಿಸಲಿದೆ ಎಂದರು.

ಮಾಜಿ ಶಾಸಕ ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಎನ್.ರಾಜಣ್ಣ ಮಾತನಾಡಿ, ನಮ್ಮವರೇ ಆದ ಮಲ್ಲಿಕಾರ್ಜುನ ಖರ್ಗೆಯವರನ್ನು ಅದ್ದೂರಿಯಾಗಿ ಸ್ವಾಗತಿಸಿ ನಾವು ನಿಮ್ಮೊಂದಿಗೆ ಇದ್ದೇವೆ ಎಂದು ಅಭಯ ನೀಡುವ ಗುರುತರ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹುದ್ದೆಯಿಂದ ಎಐಸಿಸಿ ಅಧ್ಯಕ್ಷ ಹುದ್ದೆಗೆ ಏರುವುದು ಹುಡುಗಾಟದ ಮಾತಲ್ಲ. ಇಡೀ ಜಿಲ್ಲೆಯಾದ್ಯಂತ ಹಬ್ಬದ ವಾತಾವರಣವನ್ನು ನಾವೆಲ್ಲರೂ ನಿರ್ಮಾಣ ಮಾಡಬೇಕಾಗಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಗೆಲ್ಲುವ ಮೂಲಕ ಇಡೀ ದೇಶಕ್ಕೆ ಕಾಂಗ್ರೆಸ್ ಅವಶ್ಯಕತೆ ಇದೆ ಎಂಬ ಸಂದೇಶವನ್ನು ನಾವೆಲ್ಲರೂ ಕಳುಹಿಸಬೇಕಾಗಿದೆ ಎಂದರು.

ಮಾಜಿ ಸಚಿವ ಟಿ.ಬಿ.ಜಯಚಂದ್ರ ಮಾತನಾಡಿ, ಕರ್ನಾಟಕದ ಚುನಾವಣೆ ಕಾಂಗ್ರೆಸ್ ಪಾಲಿಗೆ ನಿರ್ಣಾಯಕ ಹೋರಾಟವಾಗಿದೆ. ಹಾಗಾಗಿ ಪಕ್ಷ ಈ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದೆ. ಎಲ್ಲಾ ಕಾರ್ಯಕರ್ತರು, ಮುಖಂಡರು ಒಗ್ಗೂಡಿ ಪಕ್ಷದ ಎಲ್ಲಾ ಕ್ಷೇತ್ರಗಳಲ್ಲಿಯೂ ಪಕ್ಷವನ್ನು ಗೆಲ್ಲಿಸಲು ಪ್ರಾಮಾಣಿಕ ಪ್ರಯತ್ನ ನಡೆಸೋಣ ಎಂದು ಸಲಹೆ ನೀಡಿದರು.

ಮಾಜಿ ಶಾಸಕ ಕೆ.ಷಡಕ್ಷರಿ ಮಾತನಾಡಿ, ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಪ್ರಬಲವಾಗಿದೆ. ಹಾಗಾಗಿ ಪಕ್ಷವನ್ನು ಅಧಿಕಾರದಿಂದ ದೂರವಿಡಲು ಹಲವಾರು ಪ್ರಯತ್ನ ನಡೆದಿವೆ. ಆದರೆ ರಾಜ್ಯದ ಜನತೆ ಬದಲಾವಣೆ ಬಯಸಿದ್ದಾರೆ. ಈ ಸುಳ್ಳಿನ ಸರಕಾರವನ್ನು ಕಿತ್ತೊಗೆಯಲು ತುದಿಗಾಲಲ್ಲಿ ನಿಂತಿದ್ದಾರೆ. ನಮ್ಮ ಭರವಸೆಯಾದ ಗೃಹಲಕ್ಷ್ಮಿ ಯೋಜನೆಯನ್ನು ಜನರ ಮುಂದಿಡುವ ಮೂಲಕ ಪಕ್ಷವನ್ನು ಸದೃಢವಾಗಿ ಬೆಳೆಸುವ ಕೆಲಸ ಮಾಡಿ, ಖರ್ಗೆ ಅವರ ಕೈ ಬಲಪಡಿಸುವ ಕೆಲಸ ಮಾಡಬೇಕೆಂದರು.
ಮಾಜಿ ಶಾಸಕ ಡಾ.ರಫಿಕ್ ಅಹಮದ್ ಮಾತನಾಡಿ, ಕಾಂಗ್ರೆಸ್ ಪಕ್ಷದಲ್ಲಿ ಎಲ್ಲಾ ವರ್ಗದ ಜನರಿಗೆ ಅಧಿಕಾರವಿದೆ ಎಂಬುದಕ್ಕೆ ಓರ್ವ ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷ ಸೇರಿ ಇಂದು ಎಐಸಿಸಿ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರ ರಾಜಕೀಯ ಜೀವನವೇ ಸಾಕ್ಷಿ, ಮಾರ್ಚ್ 05 ರಂದು ಅತಿ ಹೆಚ್ಚು ಜನರು ಸೇರಿ ಪಕ್ಷದ ಕಾರ್ಯಕ್ರಮ ಯಶಸ್ವಿಗೊಳಿಸೋಣ ಎಂದರು.

ಮಾಜಿ ಶಾಸಕರಾದ ಆರ್.ನಾರಾಯಣ್, ಹೆಚ್.ನಿಂಗಪ್ಪ, ಕೆ.ಎಸ್.ಕಿರಣಕುಮಾರ್, ಮಾಜಿ ಎಂಎಲ್ಸಿ ಬೆಮೆಲ್ ಕಾಂತರಾಜು, ರೆಡಿ ಚಿನ್ನಯಲ್ಲಪ್ಪ, ಡಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ರಾಯಸಂದ್ರ ರವಿಕುಮಾರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರಗೌಡ, ಪಾಲಿಕೆಯ ಎಲ್ಲಾ ಸದಸ್ಯರು, ಮಂಚೂಣಿ ಘಟಕಗಳ ಮುಖಂಡರು ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!