ತುಮಕೂರು: ಜಿಲ್ಲೆಯ 35 ಪರೀಕ್ಷಾ ಕೇಂದ್ರದಲ್ಲಿ ಗುರುವರ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, ನಗರ ಸೇರಿದಂತೆ ಜಿಲ್ಲೆಯಾದ್ಯಂತ ದ್ವಿತೀಯ ಪಿಯುಸಿ ಮೊದಲ ದಿನದ ಪರೀಕ್ಷೆ ಸುಸೂತ್ರವಾಗಿ ನಡೆಯಿತು.
ವಿದ್ಯಾರ್ಥಿಗಳು ಬೆಳಗ್ಗೆ 8.30 ರಿಂದಲೇ ಪರೀಕ್ಷಾ ಕೇಂದ್ರಗಳಲ್ಲಿ ತಮ್ಮ ನೋಂದಣಿ ಸಂಖ್ಯೆ ಹುಡುಕಾಟದಲ್ಲಿ ತೊಡಗಿದ್ದು ಕಂಡು ಬಂತು, ಈ ಬಾರಿ ಪರೀಕ್ಷೆ ಅತ್ಯಂತ ಪಾರದರ್ಶಕವಾಗಿ ನಡೆಸುವ ಸಲುವಾಗಿ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಂಡಿರುವ ಹಿನ್ನೆಲೆಯಲ್ಲಿ ಜಿಲ್ಲೆಯ 35 ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ.
ನಗರ ಸೇರಿದಂತೆ ಜಿಲ್ಲೆಯ 10 ತಾಲ್ಲೂಕುಗಳಲ್ಲೂ 27857 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಣಿ ಮಾಡಿಕೊಂಡಿದ್ದು, ನಗರದ ಎಂಪ್ರೆಸ್, ಸಿದ್ದಗಂಗಾ ಮಹಿಳಾ ಪ.ಪೂ.ಕಾಲೇಜು ಸೇರಿದಂತೆ 35 ಪರೀಕ್ಷಾ ಕೇಂದ್ರಗಳಲ್ಲೂ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಉತ್ಸಾಹದಿಂದ ಆಗಮಿಸದ ದೃಶ್ಯ ಸಾಮಾನ್ಯವಾಗಿತ್ತು.
ಬೆಳಗ್ಗೆ 8.30 ರಿಂದಲೇ ಪೋಷಕರು ತಮ್ಮ ಮಕ್ಕಳನ್ನು ಪರೀಕ್ಷಾ ಕೇಂದ್ರಗಳಿಗೆ ಕರೆದೊಯ್ದು ನೋಂದಣಿ ಸಂಖ್ಯೆ ಹುಡುಕಾಟದಲ್ಲಿ ತೊಡಗಿದ್ದರು,
ಪರೀಕ್ಷಾ ಆರಂಭದ ದಿನವಾದ ಗುರುವಾರ ದೂರ ಊರುಗಳಿಂದ ಕೆಲ ಸಮಯ ತಡವಾಗಿ ಬಂದು ನೋಂದಣಿ ಸಂಖ್ಯೆ ಸಿಗದೆ ಗಾಬರಿಯಾಗಿದ್ದ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳ ಉಪನ್ಯಾಸಕರೆ ಧೈರ್ಯ ತುಂಬಿ ನೋಂದಣಿ ಸಂಖ್ಯೆ ಹುಡುಕಿ ಕೊಠಡಿಗಳತ್ತ ಕಳುಹಿಸುತ್ತಿದ್ದ ದೃಶ್ಯ ಕಂಡು ಬಂದವು.
ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪೂರ್ವಾಡ್ ಅವರು ಎಂಪ್ರೆಸ್ ಕರ್ನಾಟಕ ಪಬ್ಲಿಕ್ ಶಾಲೆ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿ ಪರಿಶೀಲನೆ ನಡೆಸಿದರು.
ಜಿಲ್ಲೆಯ 35 ಕೇಂದ್ರಗಳಲ್ಲಿ ಗುರುವಾರ ನಡೆದ ದ್ವಿತೀಯ ಪಿಯುಸಿ ಕನ್ನಡ ಭಾಷಾ ವಿಷಯ ಪರೀಕ್ಷೆಗೆ 23818 ವಿದ್ಯಾರ್ಥಿಗಳು ನೋಂದಾಯಿಸಿಕೊಂಡು, 22388 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 1430 ವಿದ್ಯಾರ್ಥಿಗಳು ಗೈರು ಹಾಜರಿಯಾಗಿದ್ದಾರೆ.
ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಕನ್ನಡ ಭಾಷಾ ವಿಷಯ ಪರೀಕ್ಷೆಯು ಯಾವುದೇ ರೀತಿಯ ಅಹಿತಕರ ಘಟನೆ ನಡೆಯದೆ ಶಾಂತಿಯುತವಾಗಿ ನಡೆದಿದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಬಸವಲಿಂಗಪ್ಪ ತಿಳಿಸಿದ್ದಾರೆ.
Comments are closed.