ತುಮಕೂರು: ಬಿಜೆಪಿ ತುಮಕೂರು ಸಂಘಟನಾತ್ಮಕ ಜಿಲ್ಲೆಯ ಎಸ್ಟಿ ಬೃಹತ್ ಸಮಾವೇಶ ಮಾರ್ಚ್ 11 ರಂದು ಚಿಕ್ಕನಾಯಕನ ಹಳ್ಳಿಯ ನವೋದಯ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಮಧ್ಯಾಹ್ನ 12 ಗಂಟೆಗೆ ನಡೆಯಲಿದೆ. ಮಾರ್ಚ್ 12ರ ಭಾನುವಾರ ಬೆಳಗ್ಗೆ 11 ಗಂಟೆಗೆ ಜಿಲ್ಲಾ ಎಸ್ಸಿ ಸಮಾವೇಶ ಗೂಳೂರಿನ ಸರ್ಕಾರಿ ಮೈದಾನದಲ್ಲಿ ಆಯೋಜಿಸಲಾಗಿದೆ. ಮಾರ್ಚ್ 11ರ ಸಂಜೆ 4 ಗಂಟೆಗೆ ತುಮಕೂರಿನ ಸಮೃದ್ಧಿ ಗ್ರ್ಯಾಂಡ್ ಹೋಟಲ್ನಲ್ಲಿ ಪ್ರಣಾಳಿಕೆ ಸಲಹಾ ಸಂಗ್ರಹ ಅಭಿಯಾನ ಸಭೆ ನಡೆಯಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಹೆಚ್.ಎಸ್.ರವಿಶಂಕರ್ ಹೆಬ್ಬಾಕ ತಿಳಿಸಿದರು.
ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಬಿಜೆಪಿ ಡಬ್ಬಲ್ ಇಂಜಿನ್ ಸರ್ಕಾರಗಳು ಪರಿಶಿಷ್ಟ ಪಂಗಡವರಿಗೆ ಮೀಸಲಾತಿ ಪ್ರಮಾಣವನ್ನು ಶೇಕಡ 4 ರಿಂದ 7ರ ವರೆಗೆ ಹೆಚ್ಚಿಸಿರುವುದು ಮತ್ತು ಎಸ್ಸಿ ಸಮುದಾಯಕ್ಕೆ ಶೇ.15 ರಿಂದ ಶೇ.17 ರಷ್ಟ್ರು ಮೀಸಲಾತಿ ಪ್ರಮಾಣ ಹೆಚ್ಚಿಸಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಕಾರ್ಯಕ್ರಮ ವಿಶೇಷ ಆದ್ಯತಾ ರೀತಿಯಲ್ಲಿ ಪರಿಗಣಿಸಿ ಭರಪೂರ ಕೊಡುಗೆ ನೀಡಿದೆ. ಮುಂದಿನ ಕರ್ನಾಟಕ ವಿಧಾನಸಭೆ- 2023 ಚುನಾವಣೆಯಲ್ಲಿ ಬಿಜೆಪಿಗೆ ಭಾರಿ ಮತಗಳಿಗೆ ಅನುಕೂಲವಾಗುವಂತೆ ಜಿಲ್ಲಾ ಮಟ್ಟದ ಬೃಹತ್ ಎಸ್ಟಿ, ಎಸ್ಸಿ ಸಮಾವೇಶ ಏರ್ಪಡಿಸಲಾಗಿದೆ. ಸಮಾವೇಶಗಳಿಗೆ ಎಸ್ಟಿ, ಎಸ್ಸಿ ಸಮುದಾಯದವರು ಬಾರಿ ಸಂಖ್ಯೆಯಲ್ಲಿ ಆಗಮಿಸಿ ಯಶಸ್ವಿಗೊಳಿಸಬೇಕೆಂದು ವಿನಂತಿಸಿದ್ದಾರೆ.
ಮಾರ್ಚ್ 11 ರಂದು ನಡೆಯುವ ಎಸ್ಟಿ ಸಮಾವೇಶದ ಉದ್ಘಾಟನೆ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಉಕ್ಕು ಖಾತೆಯ ರಾಜ್ಯ ಸಚಿವರಾದ ಫಗ್ಗನ್ ಸಿಂಗ್ ಕುಲಸ್ತೆ ಅವರು ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ರಾಜ್ಯದ ಸಾರಿಗೆ ಸಚಿವ ಬಿ.ಶ್ರೀರಾಮುಲು, ಮಾಜಿ ಸಚಿವ ಹಾಗೂ ಶಾಸಕ ರಾಜುಗೌಡ, ಎಸ್ಟಿ ಮೋರ್ಚಾ ರಾಜ್ಯಾಧ್ಯಕ್ಷ ತಿಪ್ಪರಾಜು ಹವಾಲ್ದಾರ್, ರಾಜ್ಯ ಎಸ್ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ನರಸಿಂಹನಾಯ್ಕ್, ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಹೇಮಲತಾ ನಾಯ್ಕ್, ಅನಿಲ್ ಕುಮಾರ್, ಪ್ರಭಾಕರ್.ಜಿ ಭಾಗವಹಿಸಲಿದ್ದಾರೆ, ಮಾರ್ಚ್ 12ರಂದು ಎಸ್ಸಿ ಸಮಾವೇಶದ ಉದ್ಘಾಟನೆಯನ್ನು ಕೇಂದ್ರ ಸಾಮಾಜಿಕ ನ್ಯಾಯ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ರಾಜ್ಯ ಎಸ್ಸಿ ಮೋರ್ಚಾ ಅಧ್ಯಕ್ಷ ಛಲವಾದಿ ನಾರಾಯಣ ಸ್ವಾಮಿ, ಮಾಜಿ ಸಚಿವ ಹಾಗೂ ಶಾಸಕ ಅರವಿಂದ ಲಿಂಬಾವಳಿ, ಶಾಸಕ ಕುಡುಚಿ ರಾಜೀವ್ ಮತ್ತಿತ್ತರರು ಭಾಗವಹಿಸಲಿದ್ದಾರೆ. ಈ ಎರಡು ಕಾರ್ಯಕ್ರಮಗಳಿಗೆ ಗೃಹಮಂತ್ರಿ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಅರಗ ಜ್ಞಾನೇಂದ್ರ, ಸಚಿವ ಬಿ.ಸಿ.ನಾಗೇಶ್, ಜೆ.ಸಿ.ಮಾಧುಸ್ವಾಮಿ ಹಾಗೂ ಜಿಲ್ಲೆಯ ಸಂಸದರು, ಶಾಸಕರು, ಪ್ರಮುಖರು, ರಾಜ್ಯ, ಜಿಲ್ಲಾ ಪದಾಧಿಕಾರಿಗಳು ಉಪಸ್ಥಿತರಿರುತ್ತಾರೆ ಎಂದರು.
ಬಿಜೆಪಿಯು ಗ್ರಾಮೀಣಾಭಿವೃದ್ಧಿ ವಿಷಯಕ್ಕೆ ಸಂಬಂಧಿಸಿದಂತೆ ತುಮಕೂರಿನ ಸಮೃದ್ಧಿ ಗ್ರ್ಯಾಂಡ್ ಹೋಟಲ್ನಲ್ಲಿ ಪ್ರಣಾಳಿಕೆ ಸಲಹಾ ಸಂಗ್ರಹ ಅಭಿಯಾನ ಸಭೆ ಇದೇ ಶನಿವಾರ 11ರ ಸಂಜೆ 4 ಕ್ಕೆ ಆಯೋಜಿಸಿದ್ದು, ಮುಖ್ಯ ಅತಿಥಿಗಳಾಗಿ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಉಕ್ಕು ಖಾತೆಯ ರಾಜ್ಯ ಸಚಿವ ಫಗ್ಗನ್ ಸಿಂಗ್ ಕುಲಸ್ತೆ ಭಾಗವಹಿಸುತ್ತಿದ್ದು, ಈ ಕಾರ್ಯಕ್ರಮಕ್ಕೆ ರೈತರು ಹಾಗೂ ಕೃಷಿಗೆ ಸಂಬಂಧಿಸಿದ ಪರಿಣಿತರು ಭಾಗವಹಿಸಬಹುದೆಂದು ಜಿಲ್ಲಾಧ್ಯಕ್ಷ ಹೆಚ್.ಎಸ್.ರವಿಶಂಕರ್ ಹೆಬ್ಬಾಕ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ಎಸ್ಸಿ ಮೋರ್ಚಾ ಅಧ್ಯಕ್ಷ ಎನ್.ನರಸಿಂಹಮೂರ್ತಿ, ಜಿಲ್ಲಾ ಎಸ್ಟಿ ಮೋರ್ಚಾ ಅಧ್ಯಕ್ಷ ಎ.ವಿಜಯಕುಮಾರ್, ಜಿಲ್ಲಾ ಉಪಾಧ್ಯಕ್ಷ ವೈ.ಹೆಚ್.ಹುಚ್ಚಯ್ಯ, ಪ್ರಧಾನ ಕಾರ್ಯದರ್ಶಿ ಹೆಚ್.ಟಿ.ಬೈರಪ್ಪ, ಕಾರ್ಯದರ್ಶಿ ಸಂದೀಪ್ಗೌಡ, ಎಸ್ಸಿ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಲೋಕೇಶ್, ಆಂಜನಮೂರ್ತಿ.ಬಿ.ಪಿ, ಜಿಲ್ಲಾ ವಕ್ತಾರ ಕೆ.ಪಿಮಹೇಶ, ಜಿಲ್ಲಾ ಮಾಧ್ಯಮ ಸಹ ಪ್ರಮುಖ್ ಜೆ.ಜಗದೀಶ್ ಇತರರು ಹಾಜರಿದ್ದರು.
Comments are closed.