ಸುರೇಶ್ ಗೌಡ, ಜ್ಯೋತಿಗಣೇಶ್ ನಾಮಿನೇಷನ್

ಸಾವಿರಾರು ಬಿಜೆಪಿ ಕಾರ್ಯಕರ್ತರೊಂದಿಗೆ ಅದ್ದೂರಿ ಮೆರವಣಿಗೆ

143

Get real time updates directly on you device, subscribe now.


ತುಮಕೂರು: ನಗರದ ಬಿಜೆಪಿ ಅಭ್ಯರ್ಥಿ ಜ್ಯೋತಿಗಣೇಶ್, ತುಮಕೂರು ಗ್ರಾಮಾಂತರ ಬಿಜೆಪಿ ಅಭ್ಯರ್ಥಿ ಬಿ.ಸುರೇಶ್ಗೌಡ ಅವರು ಸಾವಿರಾರು ಕಾರ್ಯಕರ್ತರೊಂದಿಗೆ ಅದ್ದೂರಿ ಮೆರವಣಿಗೆ ಮೂಲಕ ನಾಮಪತ್ರ ಸಲ್ಲಿಸಿದರು.
ನಗರದ ಅರ್ಧನಾರೇಶ್ವರ ದೇಗುಲದಲ್ಲಿ ಪೂಜೆ ಸಲ್ಲಿಸಿದ ಬಳಿಕ ಶಾಸಕ ಜ್ಯೋತಿಗಣೇಶ್ ಮತ್ತು ಮಾಜಿ ಶಾಸಕ ಸುರೇಶ್ ಗೌಡ ಅವರು ರಾಜ್ಯಸಭಾ ಸದಸ್ಯ ಜಗ್ಗೇಶ್, ವಿಧಾನ ಪರಿಷತ್ ಮಾಜಿ ಸದಸ್ಯ ಡಾ.ಎಂ.ಆರ್.ಹುಲಿನಾಯ್ಕರ್, ಬಿಜೆಪಿ ಯುವ ಮೋರ್ಚಾ ಮಾಜಿ ಅಧ್ಯಕ್ಷ ಅರಕರೆ ರವೀಶ್ ಜೊತೆಗೆ ಭರ್ಜರಿ ರೋಡ್ ಶೋ ನಡೆಸಿದರು.

ಅರ್ಧ ನಾರೀಶ್ವರ ದೇಗುಲದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ನಡೆದ ರೋಡ್ ಶೋನಲ್ಲಿ ಮಹಾನಗರ ಪಾಲಿಕೆ ಆವರಣದಲ್ಲಿದ್ದ ನಗರ ಚುನಾವಣಾಧಿಕಾರಿಗಳ ಕಚೇರಿಗೆ ತೆರಳಿದ ಶಾಸಕ ಜ್ಯೋತಿಗಣೇಶ್ ನಾಮಪತ್ರ ಸಲ್ಲಿಸಿದರು.
ಎರಡು ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರಿಂದ ನಗರದಲ್ಲಿ ಕೇಸರಿ ಕಲರವ ಜೋರಾಗಿತ್ತು. ಎತ್ತ ನೋಡಿದರು ಬಿಜೆಪಿ ಬಾವುಟಗಳು ರಾರಾಜಿಸುತ್ತಿದ್ದವು. ಕಾರ್ಯಕರ್ತರ ಬಹಳ ಉತ್ಸಾಹದಿಂದ ಮೆರವಣಿಗೆಯಲ್ಲಿ ಸಾಗಿ ಗ್ರಾಮಾಂತರ ಅಭ್ಯರ್ಥಿ ಸುರೇಶ್ ಗೌಡ ಅವರನ್ನು ಹೊತ್ತು ಕುಣಿದು ಕುಪ್ಪಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಬಳಿ ನಾಮಪತ್ರ ಸಲ್ಲಿಸಿದ ಬಳಿಕ ಮಾತನಾಡಿದ ಸುರೇಶ್ ಗೌಡ, ಗ್ರಾಮಾಂತರದ ಮತದಾರರು ಯಾವುದೇ ಆಮಿಷಕ್ಕೆ ಒಳಗಾಗದೆ ಬಿಜೆಪಿಗೆ ಮತ ಹಾಕಿದರೆ ಗ್ರಾಮಾಂತರ ಕ್ಷೇತ್ರವನ್ನು ಮಾದರಿ ಮಾಡುತ್ತೇನೆ ಎಂದು ಭರವಸೆ ನೀಡಿದರು.
ನಕಲಿ ಬಾಂಡ್ ಹಂಚಿ ಹೈಕೋರ್ಟ್ನಿಂದ ಅಸಿಂಧುಗೊಂಡಿರುವ ಶಾಸಕರಿಗೆ ಸುಪ್ರೀಂ ಕೋರ್ಟ್ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ಚುನಾವಣೆಯಲ್ಲಿ ಗೆದ್ದರು ಸಹ ಮುಖ್ಯಮಂತ್ರಿ ಆಯ್ಕೆ ಮಾಡಲು ಮತ ಹಾಕದಂತೆ ನಿರ್ಬಂಧಿಸಿದೆ. ಅದ್ಯಾವ ಮುಖ ಇಟ್ಟುಕೊಂಡು ಮತ ಕೇಳೋಕೆ ಬರ್ತಾರೊ ಗೊತ್ತಿಲ್ಲ ಎಂದು ಟೀಕಿಸಿದರು.

ಗ್ರಾಮಾಂತರ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಬಿಜೆಪಿಗೆ ಮತ ಹಾಕಿ, ಬಿಜೆಟ್ ಗೆಲ್ಲಬೇಕೆಂದರೆ ಬೂತ್ ಮಟ್ಟದಲ್ಲಿ ಕಾರ್ಯಕರ್ತರು ಸಕ್ರಿಯರಾಗಿ ಕೆಲಸ ಮಾಡಬೇಕು. ಬೂತ್ ಗೆದ್ದರೆ ಕ್ಷೇತ್ರ ಗೆದ್ದಂತೆ, 226 ಬೂತ್ ಗಳಲ್ಲಿ ಕಾರ್ಯಕರ್ತರು ಬಿಜೆಪಿ ಗೆಲ್ಲಿಸಿದರೆ ಗ್ರಾಮಾಂತರದಲ್ಲಿ 50 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಬಿಜೆಪಿ ಗೆಲ್ಲಲಿದೆ ಎಂದರು.
ಈ ವೇಳೆ ಬಿಜೆಪಿ ತಾಲ್ಲೂಕು ಅಧ್ಯಕ್ಷ ಶಂಕರಣ್ಣ, ನರಸಿಂಹಮೂರ್ತಿ, ರಾಮಚಂದ್ರಪ್ಪ, ಅರಕರ ರವೀಶ್, ವೈ.ಟಿ.ನಾಗರಾಜು, ವೈ.ಎಚ್.ಹುಚ್ಚಯ್ಯ, ರಮೇಶ್, ಆರೀಫ್ ಇನ್ನಿತರರು ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!