ಕಾಂಗ್ರೆಸ್ ಪಕ್ಷದ ನಿಜ ಬಣ್ಣ ಬಯಲಾಗಿದೆ: ಬಿಎಸ್ ವೈ

ಸರಕಾರದ ವಿರುದ್ಧ ಜು.03 ರಿಂದ ವಿಧಾನಸೌಧದ ಎದುರು ಸತ್ಯಾಗ್ರಹ

174

Get real time updates directly on you device, subscribe now.


ತುಮಕೂರು: ಸುಳ್ಳು ಗ್ಯಾರಂಟಿಗಳನ್ನು ನೀಡಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ವಿರುದ್ಧ ಬಿಜೆಪಿ ಶಾಸಕರು ಸದನದ ಒಳಗೆ ಹೋರಾಟ ನಡೆಸಿದರೆ, ಬಿಜೆಪಿ ಕಾರ್ಯಕರ್ತರು, ಸೋತ ಪ್ರಮುಖರೊಂದಿಗೆ ಜುಲೈ 03 ರಿಂದ ವಿಧಾನಸೌಧದ ಹೊರಗೆ ಅಧಿವೇಶನ ಮುಗಿಯುವ ವರೆಗೂ ಸತ್ಯಾಗ್ರಹ ನಡೆಸಲಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ನಗರದ ಗಾಜಿನಮನೆಯಲ್ಲಿ ತುಮಕೂರು ಜಿಲ್ಲಾ ಬಿಜೆಪಿ ವತಿಯಿಂದ ಆಯೋಜಿಸಿದ್ದ ಪ್ರೇರಣಾ ಸಮಾವೇಶ ಹಾಗೂ ಜಿಲ್ಲಾ ಬಿಜೆಪಿ ಕಾರ್ಯಕರ್ತರ ಸಭೆ ಉದ್ಘಾಟಿಸಿ ಮಾತನಾಡಿ, ಬಿಜೆಪಿಯ ಸೋಲು ನಿಜವಾದ ಸೋಲಲ್ಲ, ಕಾಂಗ್ರೆಸ್ ನೀಡಿದ ಸುಳ್ಳು ಭರವಸೆಗಳಿಗೆ ಮೋಸ ಹೋಗಿದ್ದರಿಂದ ಆದ ಸೋಲು, ಕಾಂಗ್ರೆಸ್ ಪಕ್ಷದ ನಿಜ ಬಣ್ಣ ಬಯಲಾಗಿದೆ. ತಾನು ನೀಡಿದ ಭರವಸೆಗಳನ್ನು ಈಡೇರಿಸಲಾಗದೆ ದಿನಕ್ಕೊಂದು ಷರತ್ತು ವಿಧಿಸುತ್ತಿದೆ. ಜನರಿಗೆ ನೀಡಿದ ಗ್ಯಾರಂಟಿಗಳನ್ನು ಜಾರಿಗೆ ತರುವವರೆಗೂ ನಾವು ವಿರಮಿಸುವುದಿಲ್ಲ ಎಂದರು.

ಸುಳ್ಳು ಗ್ಯಾರಂಟಿಗಳ ಮೂಲಕ ಬಡವರಿಗೆ ಮೋಸ ಮಾಡಿರುವ ಕಾಂಗ್ರೆಸ್ ಗೆ ಅಧಿಕಾರದಲ್ಲಿ ಮುಂದುವರೆಯುವ ನೈತಿಕ ಹಕ್ಕಿಲ್ಲ. ಗ್ಯಾರಂಟಿಗಳಿಗೆ ಹಣ ಹೊಂಚಲಾಗದೆ ಇಡೀ ಸರಕಾರದ ಕೆಲಸ ಕಾರ್ಯಗಳನ್ನು ಸ್ಥಗಿತಗೊಳಿಸಿದರೆ, ಅಭಿವೃದ್ಧಿಗೆ ಒಂದು ಪೈಸೆ ಹಣ ನೀಡಿಲ್ಲ. ಕಾಂಗ್ರೆಸ್ ನ್ನು ಅಧಿಕಾರದಿಂದ ಕಿತ್ತೊಗೆಯಲು ನಿಮ್ಮೆಲ್ಲರ ಸಹಕಾರ ಅಗತ್ಯವಿದೆ ಎಂದು ಬಿ.ಎಸ್.ಯಡಿಯೂರಪ್ಪ ಮನವಿ ಮಾಡಿದರು.
ಅಧಿಕಾರ ಹೋಗಿದೆ ಎಂದು ದೃತಿಗೇಡುವ ಅಗತ್ಯವಿಲ್ಲ. ವಿಧಾನಸಭೆಯಲ್ಲಿ ಬಿಜೆಪಿ ಪಕ್ಷದ ಇಬ್ಬರೇ ಶಾಸಕರಿದ್ದಾಗಲೂ ಆಡಳಿತ ಪಕ್ಷದ ವಿರುದ್ಧ ನಿರಂತರವಾಗಿ ಹೋರಾಟ ನಡೆಸಿದ್ದೇವೆ. ರೈತರ ಪಂಪ್ಸೆಟ್ಗಳಿಗೆ ಉಚಿತ ವಿದ್ಯುತ್, ಹೈನುಗಾರರಿಗೆ ಪ್ರೋತ್ಸಾಹ ಧನ, ಹೆಣ್ಣು ಮಕ್ಕಳಿಗೆ ಭಾಗ್ಯಲಕ್ಷ್ಮಿ ಬಾಂಡ್ ನೀಡಿದ್ದು ಸಾಧನೆಗಳಲ್ಲವೇ ಎಂದು ಪ್ರಶ್ನಿಸಿದ ಬಿಎಸ್ ವೈ, ಪಕ್ಷವನ್ನು ಬಲಪಡಿಸುವತ್ತ ಗಮನ ಹರಿಸಿ, ತಾಪಂ, ಜಿಪಂ ಹಾಗೂ ಲೋಕಸಭಾ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಲು ಶಕ್ತಿ ಮೀರಿ ದುಡಿಯೋಣ ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.

ಕಾಂಗ್ರೆಸ್ ಪಕ್ಷ ಅಧಿಕಾರದ ಮದದಿಂದ ಜನ ಹಿತ ಮರೆತಿದೆ. ಕುಡಿಯಲು ನೀರಿಲ್ಲದ ಪರಿತಪಿಸುತಿದ್ದರೂ ಗಮನ ಹರಿಸುತ್ತಿಲ್ಲ. ಇಂತಹ ಜನದ್ರೋಹಿ ಸರಕಾರದ ವಿರುದ್ಧ ಜನಮತ ರೂಪಿಸುವ ನಿಟ್ಟಿನಲ್ಲಿ ಎಲ್ಲಾ ಜಿಲ್ಲೆಗಳಲ್ಲಿಯೂ ಪ್ರವಾಸ ಮಾಡುತ್ತೇನೆ. 2024ರ ಲೋಕಸಭಾ ಚುನಾವಣೆಯಲ್ಲಿ ಗಲುವು ಸಾಧಿಸಿ, ನರೇಂದ್ರಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡುವುದು ನಮ್ಮ ಗುರಿಯಾಗಿದೆ ಎಂದು ಬಿ.ಎಸ್.ಯಡಿಯೂರಪ್ಪ ಎಂದರು.

ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಮಾತನಾಡಿ, ನಮಗೆ ವಿಧಾನಸಭಾ ಸೋಲಿಗಿಂತ ಮುಂದಿನ ಲೋಕಸಭಾ ಮತ್ತು ತಾಪಂ, ಜಿಪಂಗೆ ಕಾರ್ಯಕರ್ತರನ್ನು ಸಜ್ಜುಗೊಳಿಸಬೇಕಿದೆ. ಹಾಗಾಗಿ ಇಂತಹ ಪ್ರೇರಣಾ ಸಮಾವೇಶಗಳು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿಯೂ ನಡೆಯಲಿದೆ. ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಪಕ್ಷ ನೀಡಿದ ಬೇಕಾಬಿಟ್ಟಿ ಯೋಜನೆಗಳಿಂದ ರಾಜ್ಯದ ಆರ್ಥಿಕ ವ್ಯವಸ್ಥೆಗೆ ಬುಡಮೇಲಾಗಿದೆ. ಇಂದಿರಾ ಕ್ಯಾಂಟೀನ್ ಹೆಸರಿನಲ್ಲಿ ಜನರಿಗೆ ದ್ರೋಹ ಬಗೆಯಲಾಗುತ್ತಿದೆ ಎಂದು ಆರೋಪಿಸಿದರು.

ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯ ಹಾಗೂ ಜಿಲ್ಲಾ ಉಸ್ತುವಾರಿ ನವೀನ್ ಪ್ರಾಸ್ತವಿಕ ನುಡಿಗಳನ್ನಾಡಿದರು. ಮಾಜಿ ಸಚಿವ ಬಿ.ಸಿ.ನಾಗೇಶ್, ಶಾಸಕ ಬಿ.ಸುರೇಶಗೌಡ, ಮಾಜಿ ಸಂಸದ ಎಸ್.ಪಿ.ಮುದ್ದಹನುಮೇಗೌಡ ಕಾರ್ಯಕರ್ತರನ್ನು ಕುರಿತು ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಬಿಜೆಪಿ ಅಧ್ಯಕ್ಷ ಹೆಬ್ಬಾಕ ರವಿಶಂಕರ್ ವಹಿಸಿದ್ದರು. ವಿಧಾನ ಪರಿಷತ್ ಸದಸ್ಯರಾದ ಎನ್.ರವಿಕುಮಾರ್, ಚಿದಾನಂದಗೌಡ, ಶಾಸಕ ಜಿ.ಬಿ.ಜೋತಿಗಣೇಶ್, ಸಂಸದ ಜಿ.ಎಸ್.ಬಸವರಾಜು, ಮಾಜಿ ಶಾಸಕರಾದ ಮಸಾಲ ಜಯರಾಮ್, ಮಾಜಿ ಸಚಿವ ರೇಣುಕಾ ಚಾರ್ಯ, ಎಂ.ಎನ್.ನಂದೀಶ್, ಶಿವಪ್ರಸಾದ್ ಇತರರು ಪಾಲ್ಗೊಂಡಿದ್ದರು.

Get real time updates directly on you device, subscribe now.

Comments are closed.

error: Content is protected !!