ಕುಡಿಯುವ ನೀರಿಗೆ ಅಭಾವ ಆಗದಂತೆ ನೋಡಿಕೊಳ್ಳಿ

ಮೊದಲ ಕೆಡಿಪಿ ಸಭೆಯಲ್ಲಿ ಅಧಿಕಾರಿಗಳಿಗೆ ಸಚಿವ ಡಾ.ಪರಮೇಶ್ವರ್ ಸೂಚನೆ

300

Get real time updates directly on you device, subscribe now.


ತುಮಕೂರು: ಮಳೆ ಕೊರತೆ ಹಿನ್ನಲೆಯಲ್ಲಿ ಕುಡಿಯುವ ನೀರಿನ ಅಭಾವ ಇರುವ ಹಳ್ಳಿಗಳಿಗೆ ತೆರಳಿ ಪರಿಸ್ಥಿತಿ ಅವಲೋಕಿಸಿ ತಕ್ಷಣವೇ ಟಾಸ್ಕ್ ಪೋರ್ಸ್ ಸಭೆ ನಡೆಸಿ ಶಾಸಕರೊಂದಿಗೆ ಚರ್ಚಿಸಿ ಕುಡಿಯುವ ನೀರು ಪೂರೈಕೆ ಸಂಬಂಧ ತುರ್ತು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಎಲ್ಲಾ ತಾಲ್ಲೂಕುಗಳ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಕಾಂಗ್ರೆಸ್ ಸರ್ಕಾರದ ಬಂದ ನಂತರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ 2022-23ನೇ ಸಾಲಿನ ಮೊದಲ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಕೊಳವೆ ಬಾವಿ ಕೊರೆಸುವಿಕೆ, ಟ್ಯಾಂಕರ್ ಮೂಲಕ ನೀರು ಪೂರೈಸುವುದು ಸೇರಿದಂತೆ ಅಗತ್ಯ ಕ್ರಮ ತುರ್ತಾಗಿ ಕೈಗೊಳ್ಳುವಂತೆ ಸೂಚಿಸಿದರು.
ನಮ್ಮ ಸರ್ಕಾರ ಅಭಿವೃದ್ಧಿಯ ನಿಟ್ಟಿನಲ್ಲಿ ದೂರದೃಷ್ಟಿ ಇಟ್ಟುಕೊಂಡಿದ್ದು, ಈ ಹಿನ್ನಲೆಯಲ್ಲಿ ನಿರ್ಲಕ್ಷತೆಗೆ ಅವಕಾಶವಿರುವುದಿಲ್ಲ. ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಸರ್ಕಾರಿ ಕಾರ್ಯಕ್ರಮ ಅನುಷ್ಠಾನ ಮಾಡಬೇಕು, ಸಬೂಬು ಹೇಳುವ ಅಧಿಕಾರಿಗಳ ಮೇಲೆ ನಿರ್ಧಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕಾಗುತ್ತದೆ. ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿ ಇರಬೇಕು, ಕಚೇರಿಗಳಲ್ಲಿ ಅಧಿಕಾರಿಗಳು ಇರುವಿಕೆ ಮುಖ್ಯ, ಆಡಳಿತ ಚುರುಕುಗೊಳ್ಳಬೇಕು. ಆಡಳಿತ ಪ್ರಾಮಾಣಿಕರವಾಗಿ ಇರಬೇಕು ಎಂದು ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.

ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಮಾಹಿತಿಯನ್ನೊಳಗೊಂಡ ಕರಪತ್ರ ಮುದ್ರಿಸಿ, ರೈತರ ಮನೆ- ಮನೆಗೆ ತೆರಳಿ ಕೃಷಿ ಇಲಾಖೆ ಅಧಿಕಾರಿಗಳು ಪಂಚಾಯತಿವಾರು ಹಂಚುವಂತೆ ಸೂಚಿಸಿದ ಅವರು ಎಲ್ಲಿಯೂ ರಸಗೊಬ್ಬರ ಮತ್ತು ಬಿತ್ತನೆ ಬೀಜಗಳಿಗೆ ಕೃತಕ ಅಭಾವ ಉಂಟಾಗದಂತೆ ಎಚ್ಚರ ವಹಿಸಲು ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಫಸಲ್ ಬಿಮಾ ಯೋಜನೆ ಕುರಿತಂತೆ ತಾಲ್ಲೂಕುವಾರು ಯೋಜನೆಯ ಫಲಾನುಭವಿ ಮತ್ತು ಕಾರ್ಯಕ್ರಮ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಅಂಕಿ ಅಂಶದ ಮಾಹಿತಿ ಸಿದ್ಧಪಡಿಸಿ ಸಲ್ಲಿಸುವಂತೆ ಸೂಚಿಸಿದರು.
ಜಿಲ್ಲೆಯಲ್ಲಿ 1533 ಶುದ್ಧ ನೀರಿನ ಘಟಕಗಳಿದ್ದು, 39 ಘಟಕ ಕಾರ್ಯನಿರ್ವಹಿಸುತ್ತಿಲ್ಲ ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಅಧಿಕಾರಿ ರವೀಶ್ ಅವರು ಸಭೆಗೆ ಮಾಹಿತಿ ನೀಡಿದರು.

ಇದಕ್ಕೆ ಪ್ರತಿಕ್ರಯಿಸಿದ ಸಚಿವರು 15 ದಿನದೊಳಗಾಗಿ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಲ್ಲಾ ತಾಲ್ಲೂಕುಗಳಿಗೆ ಭೇಟಿ ನೀಡಿ ಶುದ್ಧ ಕುಡಿಯುವ ನೀರಿನ ಘಟಕ ಸುಸ್ಥಿತಿಯಲ್ಲಿರುವಿಕೆ ಮತ್ತು ದುರಸ್ಥಿ ಘಟಕ ಪರಿಶೀಲಿಸಿ ಸಂಬಂಧಿಸಿದ ನಿರ್ವಹಣಾ ಏಜೆನ್ಸಿಗಳನ್ನು ಕರೆಸಿ ಸಭೆ ನಡೆಸುವಂತೆ ಸೂಚಿಸಿದರು.
ಜೆಜೆಎಂ ಯೋಜನೆಯಡಿ ಜಿಲ್ಲೆಗೆ 2205 ಕೋಟಿ ರೂ. ಬಿಡುಗಡೆಯಾಗಿದ್ದು, ಒಟ್ಟು 4 ಹಂತಗಳಲ್ಲಿ ಜಿಲ್ಲೆಯಾದ್ಯಂತ ಕುಡಿಯುವ ನೀರಿನ ಯೋಜನೆಗಳನ್ನು 1787 ಗ್ರಾಮಗಳಲ್ಲಿ ಕೈಗೊಳ್ಳಲಾಗಿದೆ ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯ ನಿರ್ವಾಹಕ ಅಧಿಕಾರಿ ರವೀಶ್ ಸಭೆಗೆ ಮಾಹಿತಿ ನೀಡಿದಾಗ ಪ್ರತಿಕ್ರಿಯಿಸಿದ ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪ ಅವರು ತಮ್ಮ ತಾಲ್ಲೂಕಿನ ಕಾಮಗಾರಿ ಪ್ರಕರಣವೊಂದರಲ್ಲಿ 3ನೇ ದರ್ಜೆಯ ಗುತ್ತಿಗೆದಾರರಿಗೆ ಟೆಂಡರ್ ನೀಡಿದ್ದು, ಇದು ಅಕ್ರಮ ಎಂದು ತಿಳಿಸಿದಾಗ ಸಚಿವ ಡಾ.ಜಿ.ಪರಮೇಶ್ವರ್ ಅವರು ಈ ಕುರಿತು ಪರಿಶೀಲಿಸಿ ವರದಿ ನೀಡುವಂತೆ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಿಗೆ ಸೂಚಿಸಿದರು.

ಮಧುಗಿರಿ, ಪಾವಗಡ, ತುಮಕೂರು ನಗರಗಳಲ್ಲಿ ಮೆಟ್ರಿಕ್ ಪೂರ್ವ, ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗೆ ಹೆಚ್ಚಿನ ಬೇಡಿಕೆ ಇದ್ದು, ಪ್ರವೇಶಾತಿ ಹೆಚ್ಚಿಸುವ ಸಂಬಂಧ ಪರಿಶೀಲಿಸುವುದಾಗಿ ತಿಳಿಸಿದ ಸಚಿವರು, ನಿರ್ಮಾಣ ಹಂತದಲ್ಲಿರುವ ಹಾಸ್ಟೆಲ್ ಗಳ ಕಾಮಗಾರಿ ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಸೂಚಿಸಿದರು.
ಎಸ್ಸಿಪಿ, ಟಿಎಸ್ಪಿ ಯೋಜನೆಯಡಿ ಚಿಕ್ಕನಾಯಕನಹಳ್ಳಿ ತಾಲ್ಲೂಕುವೊಂದಕ್ಕೆ 772 ಕೊಳವೆ ಬಾವಿಗಳು ಮಂಜೂರಾಗಿದ್ದು, ಇದು ಸಲ್ಲದು, ಮುಂದಿನ ದಿನಗಳಲ್ಲಿ ಎಲ್ಲಾ ತಾಲ್ಲೂಕುಗಳಿಗೆ ಸರಿಸಮಾನವಾಗಿ ಕೊಳವೆ ಬಾವಿ ಯೋಜನೆ ವಿಸ್ತರಿಸುವುದಾಗಿ ಸಚಿವರು ತಿಳಿಸಿದರು.
ಅರಣ್ಯ ಇಲಾಖೆಯಲ್ಲಿ 25 ಲಕ್ಷ ಸಸಿ ನೆಡಲಾಗಿದೆ ಎಂಬ ಅಧಿಕಾರಿಗಳ ಮಾಹಿತಿಗೆ ಪ್ರತಿಕ್ರಿಯಿಸಿದ ಸಚಿವರು, ನಗರದ ಯಾವುದಾದರೂ ಒಂದು ರಸ್ತೆಯಲ್ಲಿ 5 ಕಿ.ಮೀ. ವರೆಗೆ ಗಿಡ ಮರಗಳು ಸಮೃದ್ಧವಾಗಿ ಬೆಳೆಸಿರುವುದನ್ನು ತೋರಿಸಿ, ಕಳೆದ 10 ವರ್ಷಗಳಲ್ಲಿ ಪೈಲೆಟ್ ಯೋಜನೆಯನ್ನಾಗಿ ಪರಿಗಣಿಸಿ ಜಿಲ್ಲೆಯಲ್ಲಿ ಮರ ಗಿಡ ಬೆಳೆಸಬೇಕಿತ್ತು. ಈ ಕೆಲಸ ಆಗಿಲ್ಲದ ಕಾರಣ ಇನ್ನು ಮುಂದಿನ ದಿನಗಳಲ್ಲಿ ವ್ಯಾಪಕವಾಗಿ ಸಸಿ ನೆಟ್ಟು ಪೋಷಿಸುವ ಕೆಲಸ ಜಿಲ್ಲೆಯಲ್ಲಿ ಆಗಬೇಕು. ಎಲ್ಲರೂ ಇದಕ್ಕೆ ಸಹರಿಸಬೇಕೆಂದು ಸೂಚಿಸಿದರು.

ತುಮಕೂರು ಜಿಲ್ಲೆಯಾದ್ಯಂತ 6.40 ಲಕ್ಷ ಕುಟುಂಬಗಳಿದ್ದು, ಆದರೆ 7.20ಲಕ್ಷ ಎಪಿಎಲ್, ಬಿಪಿಎಲ್ ಕಾರ್ಡ್ಗಳನ್ನು ವಿತರಿಸಿರುವುದಾಗಿ ಆಹಾರ ಇಲಾಖೆ ಜಂಟಿ ನಿರ್ದೇಶಕ ಮಂಟೇಸ್ವಾಮಿ ಸಭೆಗೆ ಮಾಹಿತಿ ನೀಡಿದಾಗ, ಮಾತನಾಡಿದ ಸಚಿವರು 2011ರನ್ವಯ ಕೈಗೊಳ್ಳಲಾದ ಸಮೀಕ್ಷೆಯನ್ವಯ 6.40ಲಕ್ಷ ಕುಟುಂಬಗಳಿದ್ದು, ಆದರೆ ಕುಟುಂಬಗಳಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಪಡಿತರ ಚೀಟಿ ವಿತರಿಸಿರುವ ಅಂಕಿ- ಅಂಶ ತಾಳೆಯಾಗದಿರುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಕಾರ್ಡ್ ಗಳನ್ನು ಮರು ಪರಿಶೀಲಿಸುವಂತೆ ಮತ್ತು ಬಾಕಿ ಇರುವ 7815 ಅರ್ಜಿಗಳನ್ನು ಸರ್ಕಾರದ ಮಾರ್ಗಸೂಚಿಯನ್ವಯ ವಿತರಿಸುವಂತೆ ಸೂಚಿಸಿದರು.
ತುರುವೇಕೆರೆ ಶಾಸಕರಾದ ಎಂ.ಟಿ.ಕೃಷ್ಣಪ್ಪ ಮಾತನಾಡಿ, 1 ಚೀಲ ಕೊಬ್ಬರಿ ಖರೀದಿ ಪ್ರಕ್ರಿಯೆಯಲ್ಲಿ 650 ಗ್ರಾಂ. ಹೆಚ್ಚುವರಿ ಕೊಬ್ಬರಿಯನ್ನು ರೈತರಿಂದ ಪಡೆಯಲಾಗುತ್ತಿದ್ದು, ಇದು ತರವಲ್ಲ ಮತ್ತು ಗ್ರೇಡ್ವಾರು ಕೊಬ್ಬರಿ ಪರಿಗಣಿಸಿ, ಗುಣಮಟ್ಟದ ಕೊಬ್ಬರಿ ತಿರಸ್ಕರಿಸುವುದು ಸರಿಯಲ್ಲ ಎಂದು ಸಭೆಗೆ ತಿಳಿಸಿದಾಗ, ಸಭೆಯಲ್ಲಿ ಉಪಸ್ಥಿತರಿದ್ದ ಸಚಿವ ಕೆ.ಎನ್. ರಾಜಣ್ಣ ಅವರು ಮಾತನಾಡಿ, ಬರುವ ಸೋಮವಾರ ಬೆಂಗಳೂರಿನಲ್ಲಿ ಈ ಕುರಿತಂತೆ ಚರ್ಚಿಸಲು ಕೃಷಿ ಮಾರುಕಟ್ಟೆ ಅಧಿಕಾರಿಗಳ ಸಭೆ ಕರೆಯುವುದಾಗಿ ಭರವಸೆ ನೀಡಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕರ್ತವ್ಯ ನಿರ್ವಹಿಸುವ ವೈದ್ಯರು ಕಡ್ಡಾಯವಾಗಿ ಕೇಂದ್ರಸ್ಥಾನದಲ್ಲಿರಬೇಕು ಮತ್ತು ಯಾವುದೇ ಖಾಸಗಿ ನರ್ಸಿಂಗ್ ಹೋಂಗಳಲ್ಲಿ ಸರ್ಕಾರಿ ವೈದ್ಯರು ಸೇವೆ ಸಲ್ಲಿಸುವುದನ್ನು ಸಹಿಸುವುದಿಲ್ಲ ಎಂದು ಎಚ್ಚರಿಸಿದ ಸಚಿವರು ಮುಂದಿನ ಸಭೆಗೆ ಅಪೂರ್ಣ ಮಾಹಿತಿ ತರುವಂತಹ ಅಧಿಕಾರಿಗಳ ವಿರುದ್ಧ ಸ್ಥಳದಲ್ಲಿಯೇ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಸೂಚಿಸಿದರು.
ಸಭೆಯಲ್ಲಿ ಸಂಸದ ಜಿ.ಎಸ್.ಬಸವರಾಜು, ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಭು ಸೇರಿದಂತೆ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!