ಜನನ, ಮರಣ ನೋಂದಣಿ ಡಿಜಿಟಲೈಸೇಶನ್ ಮಾಡಿ

648

Get real time updates directly on you device, subscribe now.


ತುಮಕೂರು: ಜಿಲ್ಲೆಯಲ್ಲಿ 2015 (ಇ-ಜನ್ಮ ತಂತ್ರಾಂಶ) ಕ್ಕಿಂತ ಮುಂಚೆ ಘಟಿಸಿರುವ ಜನನ ಮರಣಗಳ ನೋಂದಣಿಯನ್ನು ಮುಂದಿನ 6 ತಿಂಗಳೊಳಗೆ ಸ್ಕ್ಯಾನಿಂಗ್ ಮತ್ತು ಡಿಜಿಟಲೈಸೇಶನ್ ಕಾರ್ಯ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಕೆಸ್ವಾನ್ ಸಭಾಂಗಣದಲ್ಲಿ ತಾಲ್ಲೂಕು ಅಧಿಕಾರಿಗಳೊಂದಿಗೆ ಜನನ- ಮರಣ ನೋಂದಣಿಗೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯನ್ನು ವೀಡಿಯೋ ಕಾನ್ಫರೆನ್ಸ್ ಮೂಲಕ ನಡೆಸಿ ಮಾತನಾಡಿ, ನಾಗರಿಕ ನೋಂದಣಿ ಪದ್ಧತಿ ಉತ್ತಮಪಡಿಸುವ ಸಲುವಾಗಿ 2015ಕ್ಕಿಂತ ಮುಂಚಿನ ಜನನ- ಮರಣ ಘಟನೆಗಳನ್ನು ಡಿಜಿಟಲೈಸೇಶನ್ ಮಾಡಲಾಗುತ್ತಿದೆ. ಎಲ್ಲಾ ತಾಲ್ಲೂಕು ತಹಶೀಲ್ದಾರರು ಆಯಾ ತಾಲ್ಲೂಕು ಕಚೇರಿಯ ಅಭಿಲೇಖಾಲಯದಲ್ಲಿರುವ ಜನನ- ಮರಣ ಘಟನೆಗಳ ಮಾಹಿತಿಯನ್ನು ಸರ್ಕಾರ ನಿಯೋಜಿಸಿರುವ ಕಿಯೋನಿಕ್ಸ್ ಸಂಸ್ಥೆಗೆ ಒದಗಿಸಬೇಕೆಂದು ಸೂಚಿಸಿದರು.

ಸರ್ಕಾರವು 2023- 24ನೇ ಸಾಲಿನಲ್ಲಿ ಮೊದಲ ಹಂತದಲ್ಲಿ ಜಿಲ್ಲೆಯ ಕೊರಟಗೆರೆ ತಾಲೂಕು ಗ್ರಾಮಾಂತರದಲ್ಲಿ 124192, ಮಧುಗಿರಿ- 149684 ಹಾಗೂ ತುಮಕೂರು ತಾಲೂಕಿನ ಗ್ರಾಮಾಂತರ ಪ್ರದೇಶದ 105954 ಸೇರಿದಂತೆ ಒಟ್ಟು 379830 ಜನನ-ಮರಣ ಘಟನೆಗಳ ದಾಖಲೆಗಳನ್ನು ಸ್ಕ್ಯಾನಿಂಗ್ ಮತ್ತು ಡಿಜಿಟಲೈಸೇಶನ್ ಮಾಡಲು ಗುರಿ ನಿಗದಿಪಡಿಸಿದೆ.

ಜನನ-ಮರಣ ನೋಂದಣಾಧಿಕಾರಿಗಳು, ಉಪ ನೋಂದಣಾಧಿಕಾರಿಗಳು ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ವರದಿಯಾಗುವ ಜನನ-ಮರಣ, ನಿರ್ಜೀವ ಜನನ ಘಟನೆಗಳನ್ನು ತಪ್ಪದೇ ಶೇ.100 ರಷ್ಟು ನೋಂದಾಯಿಸಬೇಕೆಂದು ಎಚ್ಚರಿಕೆ ನೀಡಿದರು.

ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬೀಮಾ ಯೋಜನೆಯಡಿ ಜಿಲ್ಲೆಯಲ್ಲಿ 5780 ಬೆಳೆ ಕಟಾವು ಪ್ರಯೋಗಗಳಿದ್ದು, ಎಲ್ಲಾ ಮೂಲ ಕಾರ್ಯಕರ್ತರು ನಿಯಮಾನುಸಾರ ಪ್ರಯೋಗ ಕೈಗೊಂಡು ನಿಖರವಾಗಿ ಇಳುವರಿ ಮಾಹಿತಿಯನ್ನು ಮೊಬೈಲ್ ಆಪ್ ತಂತ್ರಾಂಶದಲ್ಲಿ ದಾಖಲಿಸಬೇಕು, ಇಳುವರಿ ಮಾಹಿತಿ ದಾಖಲಿಸುವ ಬಗ್ಗೆ ಎಲ್ಲ ಮೂಲ ಕಾರ್ಯಕರ್ತರಿಗೆ ಸೂಚಿಸಬೇಕೆಂದು ಕಂದಾಯ, ಕೃಷಿ, ತೋಟಗಾರಿಕೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ರಂಗಸ್ವಾಮಿ ಅವರು ಸಭೆಗೆ ಜನನ- ಮರಣ ನೋಂದಣಿ ಅಂಕಿ ಅಂಶಗಳ ಮಾಹಿತಿ ನೀಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ, ಉಪ ವಿಭಾಗಾಧಿಕಾರಿ ಗೌರವ್ ಕುಮಾರ್ ಶೆಟ್ಟಿ, ತಹಶೀಲ್ದಾರ್ ಸಿದ್ದೇಶ್, ಜಿಲ್ಲಾಧಿಕಾರಿ ಕಚೇರಿ ಸಹಾಯಕ ಮೋಹನ್ ಕುಮಾರ್, ಕಂದಾಯ ಇಲಾಖೆಯ ನರಸಿಂಹರಾಜು, ಕೃಷಿ ಇಲಾಖೆ ಅಧಿಕಾರಿಗಳು, ಸೇರಿದಂತೆ ಮತ್ತಿತರರು ಸಭೆಯಲ್ಲಿ ಹಾಜರಿದ್ದರು.

ಇದಕ್ಕೂ ಮುನ್ನ ಜಿಲ್ಲೆಯ ಪ್ರಗತಿ ಪರಿಶೀಲನೆ ನಡೆಸಿದ ಅವರು ಜಿಲ್ಲೆಯಲ್ಲಿ ಮಳೆಯಿಂದಾದ ಬೆಳೆ ಹಾನಿ, ಮನೆ ಹಾನಿ ಹಾಗೂ ಮಳೆಯ ಕೊರತೆಯಿಂದ ನಷ್ಟವುಂಟಾಗಿರುವ ಬೆಳೆ ಮಾಹಿತಿಯನ್ನು ಇನ್ನೆರಡು ದಿನಗಳಲ್ಲಿ ಮಾಹಿತಿ ನೀಡಬೇಕೆಂದು ಕೃಷಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅಲ್ಲದೆ, ಪೈಕಿ ಪಹಣಿ ಒಗ್ಗೂಡಿಸುವಿಕೆ, 94ಸಿ ಹಾಗೂ 94ಸಿಸಿ ಅಡಿ ಹಕ್ಕುಪತ್ರ ವಿತರಣೆ, ಪಹಣಿ 3 ಮತ್ತು 9 ಮಿಸ್ ಮ್ಯಾಚ್, ಮತದಾರರ ಪಟ್ಟಿ ಸಂಕ್ಷಿಪ್ತ ಪರಿಷ್ಕರಣೆಗೆ ಸಂಬಂಧಿಸಿದಂತೆ ಮನೆ ಮನೆ ಭೇಟಿ, 50/53/57 ನಿಯಮದಡಿ ಸಾಗುವಳಿ ಚೀಟಿ ವಿತರಣೆ, ಭೂಮಿ ಪೆಂಡೆನ್ಸಿ, ಮೋಜಣಿ ತಿದ್ದುಪಡಿ, ಪೋಡಿ, ಕೆರೆ ಒತ್ತುವರಿ ತೆರವಿಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನೆ ನಡೆಸಿದ ಅವರು, ತಹಶೀಲ್ದಾರರ ಹಂತದಲ್ಲಿ ನ್ಯಾಯಾಲಯ ಪ್ರಕರಣಗಳು ಬಾಕಿಯಿದ್ದಲ್ಲಿ 90 ದಿನಗಳೊಳಗೆ ವಿಲೇವಾರಿ ಮಾಡಲು ಆದ್ಯತೆ ನೀಡಬೇಕು. ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಯಾವುದೇ ಕಡತ ಹಾಗೂ ನ್ಯಾಯಾಲಯ ಪ್ರಕರಣಗಳನ್ನು ವಿಲೇವಾರಿ ಮಾಡದೆ ಬಾಕಿ ಉಳಿಸಿಕೊಂಡ ಅಧಿಕಾರಿಗಳ ಮೇಲೆ ಕ್ರಮಕೈಗೊಳ್ಳಲಾಗುವುದು ಎಂದು ಖಡಕ್ ಸೂಚನೆ ನೀಡಿದರು.

ಸ್ಮಶಾನ ಭೂಮಿ ಮಂಜೂರು ಮಾಡುವ ಸಂದರ್ಭದಲ್ಲಿ ಪ್ರತಿ 1000 ಜನಸಂಖ್ಯೆಗನುಗುಣವಾಗಿ 20 ಕುಂಟೆ ಮಾತ್ರ ಭೂಮಿಯನ್ನು ಮಂಜೂರು ಮಾಡಬೇಕು ಎಂದು ತಾಲ್ಲೂಕು ಅಧಿಕಾರಿಗಳಿಗೆ ನಿರ್ದೇಶಿಸಿದ ಅವರು, ಜಿಲ್ಲೆಯಲ್ಲಿರುವ ಕಾಡುಗೊಲ್ಲರ ಹಟ್ಟಿಗಳನ್ನು ಪತ್ತೆ ಮಾಡಿ ಹಟ್ಟಿಯಲ್ಲಿ ಶಾಲೆ, ಅಂಗನವಾಡಿ ಸೇರಿದಂತೆ ಮೂಲಭೂತ ಸೌಕರ್ಯಗಳಿಲ್ಲದಿದ್ದಲ್ಲಿ ಮಾಹಿತಿ ನೀಡಬೇಕು. ಸಕಾಲದಲ್ಲಿ ವಿಲೇವಾರಿ ಮಾಡದೆ ಭೂಮಿ ಪೆಂಡೆನ್ಸಿ ಪ್ರಕರಣ ಬಾಕಿ ಉಳಿಸಿಕೊಂಡ ತಹಶೀಲ್ದಾರರ ಮೇಲೆ ಕ್ರಮಕೈಗೊಳ್ಳಲು ಪ್ರಾದೇಶಿಕ ಆಯುಕ್ತರಿಗೆ ಶಿಫಾರಸ್ಸು ಮಾಡಲಾಗುವುದು, ಮುಂದಿನ 15 ದಿನಗಳೊಳಗಾಗಿ ಬಾಕಿ ಇರುವ ಕಂದಾಯ ಇಲಾಖೆಗೆ ಸಂಬಂಧಿಸಿರುವ ಎಲ್ಲಾ ಪ್ರಕರಣಗಳನ್ನು ಶೇ.50ರಷ್ಟು ವಿಲೇವಾರಿ ಮಾಡಬೇಕು ಎಂದು ತಾಕೀತು ಮಾಡಿದರು.

Get real time updates directly on you device, subscribe now.

Comments are closed.

error: Content is protected !!