ಉತ್ತಮ ಆಡಳಿತಕ್ಕೆ ಎಲ್ಲರ ಸಹಕಾರ ಅಗತ್ಯ

268

Get real time updates directly on you device, subscribe now.


ಕುಣಿಗಲ್: ರಾಜಕೀಯ ಜೀವನದಲ್ಲಿ ಎಲ್ಲರನ್ನೂ ಸಮಾಧಾನ ಪಡಿಸಲಾಗದು, ಹಾಗೇಯೆ ಎಲ್ಲಾ ಸಮಸ್ಯೆ, ಭರವಸೆಗಳನ್ನು ಈಡೇರಿಸುತ್ತೆವೆಂದು ಹೇಳಲಾಗದು ಎಂದು ಶಾಸಕ ಡಾ.ರಂಗನಾಥ್ ಹೇಳಿದರು.

ಪಟ್ಟಣದ ಖಾಸಗಿ ಸಮುದಾಯ ಭವನದಲ್ಲಿ ತಾಲೂಕು ಕಸಾಪ ಹಮ್ಮಿಕೊಂಡ ಶಾಸಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸಾರ್ವಜನಿಕ ಜೀವನದಲ್ಲಿ ಜನರ ಆಶೋತ್ತರಗಳಿಗೆ ಸ್ಪಂದಿಸಿ ಕೆಲಸ ಮಾಡಬೇಕು, ಇದಕ್ಕೆ ಜನರ ಸಹಕಾರವೂ ಬೇಕಿದೆ, ಕೆಲ ಸಂಧರ್ಭದಲ್ಲಿ ಜನತೆಗೆ ನೀಡಿದ ಭರವಸೆ ಈಡೇರಿಸಲಾಗದು, ಆದರೆ ಜನರ ನಿರೀಕ್ಷೆ ಅಘಾತವಾಗಿರುತ್ತದೆ, ನಾವು ಕೆಲಸ ಮಾಡುವ ಕಾರ್ಯಸೂಚಿಯೂ ನಿರ್ದಿಷ್ಟವಾಗಿರುತ್ತದೆ, ವೈದ್ಯನಾದ ನನಗೆ ಜನರ ಸಮಸ್ಯೆಗೆ ಸ್ಪಂದಿಸುವ ಮನೋಭಾವ ಸಹಜವಾಗಿದ್ದರೂ ಹಲವು ಕಾರಣಗಳಿಂದ ಆಗದೆ ಇದ್ದಾಗ ಜನರೂ ತಮಗೆ ಸಹಕಾರ ನೀಡಬೇಕು ಎಂದರು.
ತಾಲೂಕಿನ ನೀರಾವರಿ ಸಮಸ್ಯೆ ನಿವಾರಣೆ ನಿಟ್ಟಿನಲ್ಲಿ ಲಿಂಕ್ ಕೆನಾಲ್ ಕಾಮಗಾರಿಗೆ ನಬಾರ್ಡ್ನಿಂದ ಒಂದು ಸಾವಿರ ಕೋಟಿ ಅನುದಾನ ಮಂಜೂರು ಮಾಡುವ ಬಗ್ಗೆ ಪ್ರಕ್ರಿಯೆ ಪೂರ್ಣಗೊಂಡಿದ್ದು ಡಿಸಿಎಂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್, ಸಂಸದ ಡಿ.ಕೆ.ಸುರೇಶ್ ಸಹಕಾರದಿಂದ ಸಾಧ್ಯವಾಗಿದೆ ಎಂದರು.

ತಾಲೂಕಿನ ಮಹಿಳೆಯರ, ಮಕ್ಕಳ, ಗರ್ಭೀಣಿಯರ ಆರೋಗ್ಯ ಸಮಸ್ಯೆ ನಿವಾರಣೆ ನಿಟ್ಟಿನಲ್ಲಿ ಶೀಘ್ರದಲ್ಲೇ ತಾಯಿ ಮಕ್ಕಳ ಆಸ್ಪತ್ರೆ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗುವುದು, ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವುದು ಸವಾಲಿನ ಕೆಲಸವಾಗಿದೆ, ಗ್ರಾಮಾಂತರ ಪ್ರದೇಶಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಲು ಹಾಲಿ ಇರುವ ವ್ಯವಸ್ಥೆ ಬದಲಾಗಬೇಕಿದೆ, ಗ್ರಾಮ ಪಂಚಾಯಿತಿಗೆ ಒಂದು ಶಾಲೆ ಆರಂಭಿಸಲು ಸರ್ಕಾರದ ಮಟ್ಟದಲ್ಲಿ ಚರ್ಚೆ ಮಾಡಿ ಶೀಘ್ರದಲ್ಲೇ ತಾಲೂಕಿನಲ್ಲಿ ಆರಂಭಿಸಲಾಗುವುದು, ವಿದ್ಯಾರ್ಥಿಗಳು ಹಾಲಿ ಶಿಕ್ಷಣದ ಹೊರತಾಗಿ ಕೃತಕ ಬುದ್ಧಿಮತ್ತೆಯ ತಂತ್ರಜ್ಞಾನ ಶಿಕ್ಷಣದ ಬಗ್ಗೆ ಅರಿತು, ಅಭ್ಯಾಸ ಮಾಡಿ ಉತ್ತಮ ಭವಿಷ್ಯ ಕಂಡು ಕೊಳ್ಳಬೇಕೆಂದರು.

ಜಿಲ್ಲಾ ಕಸಾಪ ಅಧ್ಯಕ್ಷ ಸಿದ್ದಲಿಂಗಯ್ಯ ಅಧ್ಯಕ್ಷತೆ ವಹಿಸಿಮಾತನಾಡಿ, ಆದರ್ಶಪ್ರಾಯ ವ್ಯಕ್ತಿಗಳಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಕೊಡಿಸಲು ಇಂತಹ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಕಸಾಪಗೆ ಐವತ್ತು ವರ್ಷ ತುಂಬಿದ ಸಂದರ್ಭದಲ್ಲಿ ಹಲವಾರು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಶಾಸಕರು ಸೇರಿದಂತೆ ಕನ್ನಡಾಭಿಮಾನಿಗಳು ಸಹಕಾರ ನೀಡಬೇಕೆಂದರು.

ತಾಲ್ಲೂಕು ಕಸಾಪ ಅಧ್ಯಕ್ಷ ಡಾ.ರಮೇಶ್ ಕಪನಿಪಾಳ್ಯ, ತಾಪಂ ಇಒ ಜೋಸೆಫ್, ಸಿಪಿಐ ನವೀನ್ ಗೌಡ, ಕಸಾಪ ಪದಾಧಿಕಾರಿಗಳು ಇತರರು ಉಪಸ್ಥಿತರಿದ್ದು, ಎರಡನೆ ಬಾರಿಗೆ ಆಯ್ಕೆಯಾದ ಶಾಸಕರಿಗೆ, ಸಾರ್ವಜನಿಕ ಪರೀಕ್ಷೆಯಲ್ಲಿ ಕನ್ನಡದಲ್ಲಿ ಪೂರ್ಣಾಂಕ ಗಳಿಸಿದ ವಿದ್ಯಾರ್ಥಿಗಳಿಗೆ, ಶೇ.100 ಫಲಿತಾಂಶ ಗಳಿಸಿದ ಶಾಲಾ ಮುಖ್ಯಸ್ಥರಿಗೆ ಸನ್ಮಾನ ನೆರವೇರಿಸಲಾಯಿತು.

Get real time updates directly on you device, subscribe now.

Comments are closed.

error: Content is protected !!