ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ

ಬಿಜೆಪಿ ಟೀಕಿಸಿದ್ರೂ ನಾವು ಗ್ಯಾರಂಟಿ ಯೋಜನೆ ಜಾರಿ ಮಾಡಿದ್ವಿ: ಸಿಎಂ ಸಿದ್ದು

237

Get real time updates directly on you device, subscribe now.


ಮಧುಗಿರಿ: ಕ್ಷೀರಭಾಗ್ಯ ಯೋಜನೆಯಡಿ ಸರ್ಕಾರಿ ಶಾಲೆ, ಅನುದಾನಿತ ಮತ್ತು ಅಂಗನವಾಡಿ ಕೇಂದ್ರದ ಮಕ್ಕಳಿಗೆ 58 ಲಕ್ಷ 68 ಸಾವಿರ ಮಕ್ಕಳಿಗೆ 1 ಕೋಟಿ ರೂ. ವೆಚ್ಚದಲ್ಲಿ ಹಾಲು ನೀಡುತ್ತಿದ್ದೇವೆ ಎಂದು ಸಿಎಂ ಸಿದ್ದ ರಾಮಯ್ಯ ತಿಳಿಸಿದರು.

ಪಟ್ಟಣದ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಕೆಎಂಎಫ್ ಬೆಂಗಳೂರು ಹಾಗು ರಾಜ್ಯದ ಎಲ್ಲಾ ಜಿಲ್ಲಾ ಸಹಕಾರ, ಹಾಲು ಉತ್ಪಾದಕರ ಸಂಘಗಳ ಒಕ್ಕೂಟಗಳ ಸಹಯೋಗದೊಂದಿಗೆ ಕ್ಷೀರ ಭಾಗ್ಯ ಯೋಜನೆಯ ದಶಮಾನೋತ್ಸವ ಸಂಭ್ರಮಾಚರಣೆಯ ಸಮಾರಂಭ ಉದ್ಘಾಟಿಸಿ ಮಾತನಾಡಿ, ಕ್ಷೀರಭಾಗ್ಯ ಯೋಜನೆ ವಿಶ್ವ ಹಾಲು ಮಹಾ ಮಂಡಳಿ ವತಿಯಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಶಸ್ತಿ ಗಳಿಸಿದೆ, ಹಿಂದಿನ ನಮ್ಮ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಬಡ ಜನರಿಗೆ 7 ಕೆಜಿ ಅಕ್ಕಿ ನೀಡುತ್ತಿದ್ದು, ಹಿಂದಿನ ಬಿಜೆಪಿ ಸರ್ಕಾರ ಅದನ್ನು 5 ಕೆಜಿಗೆ ಇಳಿಸಿತು, ಚುನಾವಣಾ ಸಂದರ್ಭದಲ್ಲಿ 10 ಕೆಜಿ ಅಕ್ಕಿ ನೀಡುವುದಾಗಿ ಭರವಸೆ ನೀಡಿದ್ದೆವು, ಆದರೆ ಕೇಂದ್ರ ಸರ್ಕಾರ ಅಕ್ಕಿ ಸರಬರಾಜು ಮಾಡದ ಕಾರಣ 5 ಕೆಜಿ ಹೆಚ್ಚುವರಿ ಅಕ್ಕಿ ಬದಲಿಗೆ 170 ರೂ. ನೀಡುತ್ತಿದ್ದೇವೆ, ಪ್ರಸ್ತುತ 4 ಕೋಟಿ 72 ಲಕ್ಷ ಜನರಿಗೆ ಅಕ್ಕಿ ವಿತರಿಸುತ್ತಿದ್ದು, ಕರ್ನಾಟಕವನ್ನು ಹಸಿವು ಮುಕ್ತ ರಾಜ್ಯವನ್ನಾಗಿ ಮಾಡುವುದು ನಮ್ಮ ಉದ್ದೇಶವಾಗಿದೆ, ಜನರಿಗೆ ಯಾವುದೇ ಉಚಿತ ಕಾರ್ಯಕ್ರಮ ನೀಡಿದರೆ ದೇಶದ ಪ್ರಧಾನಿ ನರೇಂದ್ರ ಮೋದಿ ದೂರಿದ್ದರು, ನಾವು ನುಡಿದಂತೆ ನಡೆದಿದ್ದೇವೆ, ಮುಂದಿನ ಎಂಪಿ ಚುನಾವಣೆಯಲ್ಲಿ ಬಿಜೆಪಿಗೆ ಒಂದೇ ಒಂದು ಓಟು ಹಾಕಬೇಡಿ, ಎಲ್ಲಾ ಕಾಂಗ್ರೆಸ್ಗೆ ಹಾಕಿ ಎಂದರು.

ಶಕ್ತಿ ಯೋಜನೆಯಡಿ ಪ್ರತಿ ದಿನ 50 ಲಕ್ಷ ಮಹಿಳೆಯರು ಉಚಿತ ಪ್ರಯಾಣ ಬೆಳೆಸಿದ್ದಾರೆ, ಗೃಹಲಕ್ಷ್ಮೀ ಯೋಜನೆಯಡಿ 1 ಕೋಟಿ 26 ಲಕ್ಷ ಮಹಿಳೆಯರ ಪೈಕಿ 1 ಕೋಟಿ 10 ಲಕ್ಷ ಮಂದಿ ಫಲಾನುಭವಿಗಳ ಖಾತೆಗೆ 2 ಸಾವಿರ ಹಣ ಜಮೆ ಮಾಡಲಾಗಿದೆ, ಈಗಾಗಲೇ 4 ಗ್ಯಾರಂಟಿ ಯೋಜನೆಗಳು ಅನುಷ್ಠಾನ ಗೊಂಡಿದ್ದು, 5ನೇ ಗ್ಯಾರಂಟಿ ಯೋಜನೆಯಂತೆ ನಿರುದ್ಯೋಗ ಯುವಕ, ಯುವತಿಯರಿಗೆ 2024 ರಲ್ಲಿ ಅನುಷ್ಠಾನಗೊಳಿಸಲಾಗುವುದು ಎಂದರು.

ಅತಿ ಶೀಘ್ರವಾಗಿ ಎತ್ತಿನಹೊಳೆ ಯೋಜನೆಯಡಿ ನೀರನ್ನು ಈ ಭಾಗಕ್ಕೆ ಹರಿಸುವುದಾಗಿಯೂ ರೈತರಿಗೆ 5 ಲಕ್ಷದ ವರೆಗೆ ಶೂನ್ಯ ಬಡ್ಡಿ ದರದಲ್ಲಿ ಹಾಗೂ 15 ಲಕ್ಷ ರೂ. ಗಳಿಗೆ ಶೇ.3 ಬಡ್ಡಿ ದರದಲ್ಲಿ ಸಾಲ ನೀಡಲಾಗುವುದು ಎಂದರು.

ಗೃಹ ಸಚಿವ ಡಾ.ಜಿ.ಪರಮೇಶ್ವರ ಹಾಗೂ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರು ಮಧುಗಿರಿಯನ್ನು ಜಿಲ್ಲಾ ಕೇಂದ್ರವನ್ನಾಗಿ ಮಾಡಲು ಒತ್ತಾಯಿಸಿದ್ದು, ಈ ಬಗ್ಗೆ ಸರ್ಕಾರ ಗಂಭೀರವಾಗಿ ಪರಿಶೀಲಿಸಲಾಗುವುದು, ಮಧುಗಿರಿ ಏಕಶಿಲಾ ಬೆಟ್ಟಕ್ಕೆ ಕೇಬಲ್ ಕಾರ್ ಅಳವಡಿಸಲು ಈಗಾಗಲೇ ಹಣ ಬಿಡುಗಡೆ ಮಾಡಿದ್ದು ಪ್ರವಾಸಿಗರಿಗೆ ಅನುಕೂಲವಾಗುವಂತೆ ರೋಪ್ ವೇ ನಿರ್ಮಾಣ ಮಾಡುವುದಾಗಿ ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ ಮಾತನಾಡಿ, ಮಧುಗಿರಿ ಉಪ ವಿಭಾಗದ ತಾಲೂಕುಗಳು ಶಾಶ್ವತ ಬರಪೀಡಿತವಾಗಿದ್ದು ಈ ತಾಲೂಕುಗಳಿಗೆ ಎತ್ತಿನಹೊಳೆ ನೀರು ಹರಿಸಬೇಕು, ಆಡಳಿತ ದೃಷ್ಟಿಯಿಂದ ಮಧುಗಿರಿಯನ್ನು ಜಿಲ್ಲಾ ಕೇಂದ್ರವನ್ನಾಗಿ ಮಾಡಬೇಕು ಹಾಗೂ ಮಧುಗಿರಿ ಏಕಶಿಲಾ ಬೆಟ್ಟಕ್ಕೆ ರೋಪ್ ವೇ ಅಳವಡಿಸಿದರೆ ಜನಸಾಮಾನ್ಯರ ಜೀವನ ಮಟ್ಟ ಸುಧಾರಣೆಗೊಂಡು ಆರ್ಥಿಕ ಪರಿಸ್ಥಿತಿ ಉತ್ತಮವಾಗುತ್ತದೆ ಎಂದು ಮುಖ್ಯಮಂತ್ರಿಯವರಲ್ಲಿ ಮನವಿ ಮಾಡಿದರು.
ಕೆಎಂಎಫ್ ಅಧ್ಯಕ್ಷ ಭೀಮಾನಾಯಕ್ ಮಾತನಾಡಿ, ಕ್ಷೀರ ಭಾಗ್ಯ ಯೋಜನೆಯಿಂದ ರಾಜ್ಯದ 14 ಹಾಲು ಒಕ್ಕೂಟಗಳಿಗೆ 27 ಲಕ್ಷ ಮಂದಿ ಹಾಲು ಉತ್ಪಾದಕ ರೈತರಿಗೆ ಶಕ್ತಿ ತುಂಬಲಾಗಿದೆ, ಕ್ಷೀರ ಭಾಗ್ಯ ಯೋಜನೆ ಇಡೀ ದೇಶದಲ್ಲಿ ವಿಶಿಷ್ಟ ಕಾರ್ಯಕ್ರಮ ವಾಗಿದೆ, ರೈತರ ಹಿತದೃಷ್ಟಿಯಿಂದ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾದ ಒಂದು ತಿಂಗಳಲ್ಲೇ ಹಾಲು ಉತ್ಪಾದಕರಿಗೆ 5 ರೂ. ಸಹಾಯಧನ ಹೆಚ್ಚಿಸಿದ್ದು ರೈತರ ಹಾಗೂ ಬಡವರ ಪರವಾಗಿ ಕೆಲಸ ಮಾಡಿದ್ದಾರೆ ಎಂದು ಶ್ಲಾಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಹಕಾರ ಸಚಿವ ಕೆ.ಎನ್.ರಾಜಣ್ಣ ಮಾತನಾಡಿ ರೈತರಿಗೆ, ಕೃಷಿಕರಿಗೆ, ಸಣ್ಣ ವ್ಯಾಪಾರಿಗಳಿಗೆ, ಶೂನ್ಯ ಬಡ್ಡಿದರದಲ್ಲಿ ಸಾಲಕೊಟ್ಟ ಕೀರ್ತಿ ಸಿದ್ದರಾಮಯ್ಯನವರಿಗೆ ಸಲ್ಲುತ್ತದೆ, ಹಸಿವು ಮುಕ್ತ ಕರ್ನಾಟಕ ಮಾಡುವ ಉದ್ದೇಶ ದಿಂದ ರಾಜ್ಯದಲ್ಲಿ ಯಾರೂ ಹಸಿವಿನಿಂದ ಬಳಲಬಾರದು ಎಂದು ಅನ್ನಭಾಗ್ಯ ಯೋಜನೆ ಜಾರಿ ತಂದಿದ್ದು ರಾಜ್ಯದ ಬಡಜನತೆ ಉಪವಾಸ ಮುಕ್ತರಾಗಿದ್ದಾರೆ, ಕೊರೊನಾ ಕಾಲದಲ್ಲಿ ಅನ್ನಭಾಗ್ಯ ಯೋಜನೆ ಇಲ್ಲದಿದ್ದರೆ ಬಹಳಷ್ಟು ಬಡಜನರು ಹಸಿವಿನಿಂದ ಪ್ರಾಣಬಿಡುವ ಪರಿಸ್ಥಿತಿ ಯಾಗುತಿತ್ತು ಎಂದರು.

ಕಾರ್ಯಕ್ರಮದಲ್ಲಿ ಪಶು ಸಂಗೋಪನೆ ಸಚಿವ ವೆಂಕಟೇಶ್, ಶಾಸಕರಾದ ಟಿ.ಬಿ.ಜಯಚಂದ್ರ, ಕೆ.ಷಡಕ್ಷರಿ, ಎಸ್.ಆರ್.ಶ್ರೀನಿವಾಸ್, ಡಾ.ರಂಗನಾಥ್, ನಂಜೇಗೌಡ, ವಿಧಾನ ಪರಿಷತ್ ರಾಜೇಂದ್ರ ರಾಜಣ್ಣ, ಕೆಎಂಎಫ್ ಅಧ್ಯಕ್ಷ ಭೀಮನಾಯಕ್, ಮಾಜಿ ಶಾಸಕರಾದ ನಿಂಗಪ್ಪ, ಗಂಗಹನುಮಯ್ಯ, ಕಿರಣ್ ಕುಮಾರ್, ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಜಗದೀಶ್, ತುಮುಲ್ ಅಧ್ಯಕ್ಷ ಮಹಾಲಿಂಗಯ್ಯ, ಕೆಎಂಎಫ್ ನಿರ್ದೇಶಕ ಕಾಂತರಾಜು, ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್, ಇಲಾಖೆ ನಿಬಂಧಕರಾದ ಕ್ಯಾಪ್ಟನ್ ರಾಜೇಂದ್ರ, ಜಿಲ್ಲಾಧಿಕಾರಿ ಶ್ರೀನಿವಾಸ್, ಜಿಪಂ ಸಿಇಒ ಜಿ.ಪ್ರಭು ಇತರರು ಇದ್ದರು.

Get real time updates directly on you device, subscribe now.

Comments are closed.

error: Content is protected !!