ಕೌಟುಂಬಿಕ ಹಿಂಸೆ ಪ್ರಕರಣ ಇತ್ಯರ್ಥ ಪಡಿಸಿ

ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಸೂಚನೆ

136

Get real time updates directly on you device, subscribe now.


ತುಮಕೂರು: ಜಿಲ್ಲೆಯಲ್ಲಿ ವರದಿಯಾದ ಮಹಿಳೆಯರ ಮೇಲಿನ ಕೌಟುಂಬಿಕ ಹಿಂಸೆ ಪ್ರಕರಣಗಳನ್ನು 60 ದಿನದೊಳಗೆ ಇತ್ಯರ್ಥ ಪಡಿಸಲು ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಜರುಗಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸೇರಿದಂತೆ ವಿವಿಧ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲೆಯ ವಿವಿಧ ತಾಲೂಕು ಶಿಶು ಅಭಿವೃದ್ಧಿ ಯೋಜನಾ ಇಲಾಖೆಯಲ್ಲಿ ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆಯಡಿ 2023- 24ನೇ ಸಾಲಿನ ಮೊದಲನೇ ತ್ರೈಮಾಸಿಕದಲ್ಲಿ ದಾಖಲಾದ 67 ಹಾಗೂ 2ನೇ ತ್ರೈಮಾಸಿಕದಲ್ಲಿ ದಾಖಲಾದ 79 ಪ್ರಕರಣಗಳಡಿ ಬಾಕಿ ಉಳಿದ 87 ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲು ಸೂಚಿಸಿದರು, ಇನ್ನು ಮುಂದೆ ಈ ಕಾಯ್ದೆಯಡಿ ದಾಖಲಾಗುವ ಪ್ರಕರಣಗಳನ್ನು 60 ದಿನದೊಳಗೆ ಇತ್ಯರ್ಥಪಡಿಸಿ ಸಂತ್ರಸ್ತ ಮಹಿಳೆಯರಿಗೆ ಅನುಕೂಲ ಮಾಡಿಕೊಡಬೇಕೆಂದು ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿ 2023ರ ಏಪ್ರಿಲ್ ನಿಂದ ಸೆಪ್ಟೆಂಬರ್ ಮಾಹೆಯ ಅಂತ್ಯದ ವರೆಗೆ ಬಾಲ್ಯವಿವಾಹ ನಿಷೇಧ ಕಾಯ್ದೆಯಡಿ ಒಟ್ಟು 29 ಪ್ರಕರಣ ದಾಖಲಾಗಿವೆ, ಬಾಲ್ಯ ವಿವಾಹವನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ತಮ್ಮ ವ್ಯಾಪ್ತಿಯಲ್ಲಿ ಮದುವೆಯಾಗಲಿರುವ ಗಂಡು ಮತ್ತು ಹೆಣ್ಣಿನ ವಯಸ್ಸಿನ ದಾಖಲೆಗಳನ್ನು ಪೋಷಕರಿಂದ ಪಡೆದು ನಿಗದಿಪಡಿಸಿರುವ ವಯೋಮಿತಿ ಪೂರ್ಣಗೊಂಡಿರುವ ಬಗ್ಗೆ ದೃಢಪಡಿಸಿಕೊಳ್ಳುವ ಜವಾಬ್ದಾರಿಯನ್ನು ಅಂಗವಾಡಿ ಕಾರ್ಯಕರ್ತೆಯರಿಗೆ ವಹಿಸಬೇಕು ಎಂದು ಸೂಚಿಸಿದರು.
ಅದೇ ರೀತಿ ಗಂಡು- ಹೆಣ್ಣಿನ ವಯಸ್ಸಿಗೆ ಸಂಬಂಧಿಸಿದ ಪೂರಕ ದಾಖಲೆ ಪಡೆದ ನಂತರವೇ ದೇವಸ್ಥಾನಗಳಲ್ಲಿ ಮದುವೆಗೆ ಅವಕಾಶ ಕಲ್ಪಿಸಬೇಕೆಂದು ಎಲ್ಲಾ ಪುರೋಹಿತರಿಗೆ ಸುತ್ತೋಲೆ ಹೊರಡಿಸಬೇಕೆಂದು ಮುಜರಾಯಿ ತಹಶೀಲ್ದಾರ್ ಸವಿತಾ ಅವರಿಗೆ ನಿರ್ದೇಶನ ನೀಡಿದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನಿಸಾ ಮಾತನಾಡಿ ಜಿಲ್ಲೆಯಲ್ಲಿ ಪೋಕ್ಸೋ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿವೆ, ಮೊಬೈಲ್ ಬಳಕೆಯಿಂದಲೂ ವಿದ್ಯಾರ್ಥಿಗಳು ಹಾದಿ ತಪ್ಪುತ್ತಿದ್ದಾರೆ, ಶಾಲಾ- ಕಾಲೇಜುಗಳಲ್ಲಿ ನಿಯಮಿತವಾಗಿ ಭೌತಿಕ ತರಗತಿ ನಡೆಯುತ್ತಿದ್ದರೂ ಕೊರೊನಾ ಸಂದರ್ಭದಲ್ಲಿ ನಡೆಸಿದಂತೆ ಈಗಲೂ ಆನ್ಲೈನ್ ಮೂಲಕ ಪಠ್ಯಕ್ರಮ ಅಭ್ಯಾಸ ಮಾಡಿಸುತ್ತಿದ್ದಾರೆ, ದ್ವಿತೀಯ ಪಿಯುಸಿವರೆಗೆ ಮೊಬೈಲ್ ಬಳಕೆ ಮಾಡುವುದನ್ನು ತಪ್ಪಿಸಬೇಕು ಎಂದು ಸಲಹೆ ನೀಡಿದ ಅವರು ಬಾಲ್ಯವಿವಾಹ ಮತ್ತು ಮೊಬೈಲ್ ಬಳಕೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಕಿರು ಸಾಕ್ಷ್ಯ ಚಿತ್ರಗಳ ಮೂಲಕ ವಿದ್ಯಾರ್ಥಿಗಳಿಗೆ ತಿಳುವಳಿಕೆ ನೀಡಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಶ್ರೀಧರ್ ಮಾತನಾಡಿ, ಜಿಲ್ಲೆಯಲ್ಲಿ ಈವರೆಗೆ 29 ಬಾಲ್ಯವಿವಾಹ ಪ್ರಕರಣ ದಾಖಲಾಗಿದ್ದು, 21 ವಿವಾಹ ತಡೆಯಲಾಗಿದೆ, ತುಮಕೂರು ನಗರ, ಕೊರಟಗೆರೆ, ಮಧುಗಿರಿ, ಪಾವಗಡ, ಕುಣಿಗಲ್ ತಾಲ್ಲೂಕಿನಲ್ಲಿ ತಲಾ 1 ಹಾಗೂ ಗುಬ್ಬಿ ತಾಲೂಕಿನಲ್ಲಿ 3 ಸೇರಿ ಒಟ್ಟು 8 ಬಾಲ್ಯ ವಿವಾಹಗಳ ನಡೆದಿದ್ದು, ಪೊಲೀಸ್ ಠಾಣೆಯಲ್ಲಿ ಪ್ರಥಮ ವರ್ತಮಾನ ವರದಿ ದಾಖಲಿಸಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.
ಸಾಂತ್ವನ ಕೇಂದ್ರಗಳಲ್ಲಿ ಪ್ರಸಕ್ತ ಸಾಲಿನಲ್ಲಿ 710 ಕೌಟುಂಬಿಕ ದೌರ್ಜನ್ಯ ದಾಖಲಾಗಿದ್ದು, 685 ಪ್ರಕರಣ ಇತ್ಯರ್ಥವಾಗಿವೆ ಎಂದು ಮಾಹಿತಿ ನೀಡಿದರಲ್ಲದೆ ವರದಕ್ಷಿಣೆ ನಿಷೇಧ ಕಾಯ್ದೆಯಡಿ ವರದಿಯಾದ 70 ಪ್ರಕರಣಗಳ ಪೈಕಿ 23 ಪ್ರಕರಣ ವಿಲೇವಾರಿ ಮಾಡಿದ್ದು, 47 ಪ್ರಕರಣ ಬಾಕಿ ಇವೆ ಎಂದು ತಿಳಿಸಿದರು.

ಕಾರ್ಯಕ್ರಮ ನಿರೂಪಣಾಧಿಕಾರಿ ದಿನೇಶ್ ಮಾತನಾಡಿ, ಜಿಲ್ಲೆಯಲ್ಲಿ ಅನುಷ್ಠಾನವಾಗುತ್ತಿರುವ ಪೋಷಣ್ ಅಭಿಯಾನ, ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆ ಪ್ರಗತಿ ಬಗ್ಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮರಿಯಪ್ಪ, ಡಿಹೆಚ್ ಓ ಡಾ.ಮಂಜುನಾಥ, ವಿವಿಧ ತಾಲ್ಲೂಕಿನ ಸಿಡಿಪಿಓಗಳು, ಸಾಂತ್ವನ ಕೇಂದ್ರದ ಸಿಬ್ಬಂದಿ ಮತ್ತಿತರರಿದ್ದರು.

Get real time updates directly on you device, subscribe now.

Comments are closed.

error: Content is protected !!