55,650 ಯುವ ಮತದಾರರ ಸೇರ್ಪಡೆ: ಶ್ರೀನಿವಾಸ್

81

Get real time updates directly on you device, subscribe now.


ತುಮಕೂರು: ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಗೆ ಸಂಬಂಧಿಸಿದಂತೆ ಅಕ್ಟೋಬರ್ 27ರಂದು ಪ್ರಕಟಿಸಿರುವ ಕರಡು ಮತದಾರರ ಪಟ್ಟಿಯನ್ವಯ 55,650 ಯುವ ಮತದಾರರನ್ನು ಸೇರ್ಪಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಜರುಗಿದ ಮಾನ್ಯತೆ ಪಡೆದ ರಾಷ್ಟ್ರೀಯ ಹಾಗೂ ರಾಜ್ಯ ರಾಜಕೀಯ ಪಕ್ಷಗಳ ಸಭೆಯಲ್ಲಿ ಮಾತನಾಡಿ, ಅಕ್ಟೋಬರ್ 27 ರಂದು ಸಾರ್ವಜನಿಕರ ಮಾಹಿತಿಗಾಗಿ ಎಲ್ಲಾ 2615 ಮತಗಟ್ಟೆ ಹಾಗೂ ಆಯಾ ವಿಧಾನಸಭಾ ಕ್ಷೇತ್ರ ದ ಸಹಾಯಕ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದ್ದು, ಈ ಪಟ್ಟಿಗೆ ಸಂಬಂಧಿಸಿದಂತೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ಡಿಸೆಂಬರ್ 9ರ ವರೆಗೆ ಅವಕಾಶವಿರುತ್ತದೆ ಎಂದು ರಾಜಕೀಯ ಪಕ್ಷಗಳ ಮುಖಂಡರಿಗೆ ಮಾಹಿತಿ ನೀಡಿದರು.

ಕರಡು ಮತದಾರರ ಪಟ್ಟಿಯಂತೆ ಜಿಲ್ಲೆಯಲ್ಲಿ 11,23,062 ಪುರುಷರು, 11,32,016 ಮಹಿಳೆಯರು ಹಾಗೂ 104 ಇತರೆ ಮತದಾರರು ಸೇರಿ ಒಟ್ಟು 22,55,182 ಮತದಾರರಿದ್ದು, ಇದರಲ್ಲಿ 30,572 ವಿಕಲಚೇತನ ಮತದಾರರು ಹಾಗೂ 100 ವರ್ಷ ಮೇಲ್ಪಟ್ಟ 707 ಶತಾಯುಷಿ ಮತದಾರರು ಒಳಗೊಂಡಿದ್ದಾರೆ ಎಂದು ವಿವರಿಸಿದರು.

ಕರಡು ಮತದಾರರ ಪಟ್ಟಿಯನ್ನು ವೆಬ್ ಸೈಟ್ ನಲ್ಲಿ ಪ್ರಚುರಪಡಿಸಲಾಗಿದ್ದು, ಸಾರ್ವಜನಿಕರು ಪಟ್ಟಿಗೆ ಸಂಬಂಧಿಸಿದ ಹಕ್ಕು ಮತ್ತು ಆಕ್ಷೇಪಣೆಗಳಿದ್ದಲ್ಲಿ ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿ ಡಿಸೆಂಬರ್ 9 ರೊಳಗೆ ಸಲ್ಲಿಸಬೇಕು, ಸ್ವೀಕೃತ ಆಕ್ಷೇಪಣೆಗಳನ್ನು ಡಿಸೆಂಬರ್ 26ರೊಳಗಾಗಿ ವಿಲೇವಾರಿ ಮಾಡಲಾಗುವುದೆಂದು ಸಭೆಗೆ ತಿಳಿಸಿದರು.

ಜಿಲ್ಲೆಯಲ್ಲಿ 2023ರ ಜನವರಿ 5 ರಿಂದ ಅಕ್ಟೋಬರ್ 27ರ ವರೆಗೆ ಯಥಾ ನಕಲು ಆದ 15,511 ಮತದಾರರ ಹೆಸರನ್ನು ಪಟ್ಟಿಯಿಂದ ತೆಗೆದು ಹಾಕಲಾಗಿದೆ ಎಂದು ತಿಳಿಸಿದರಲ್ಲದೆ ತಿಪಟೂರು ವಿಧಾನಸಭಾ ಕ್ಷೇತ್ರದಲ್ಲಿ ಹೊನ್ನವಳ್ಳಿ ಹೋಬಳಿ ಹೊಸಪಟ್ಟಣ ಹಾಗೂ ನೊಣವಿನಕೆರೆ ಹೋಬಳಿ ಹೊನ್ನೇನ ಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ 2 ಹೊಸ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದರು.

ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ದಿನಾಂಕ 1-11-2023 ನ್ನು ಅರ್ಹತಾ ದಿನಾಂಕವೆಂದು ಪರಿಗಣಿಸಿ ಮತದಾರರ ಪಟ್ಟಿ ತಯಾರಿಸಲು ಈಗಾಗಲೇ ವೇಳಾಪಟ್ಟಿ ಪ್ರಕಟಿಸಲಾಗಿದ್ದು, ಡಿಸೆಂಬರ್ 30 ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುವುದು ಎಂದು ತಿಳಿಸಿದರು.

ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ನವೆಂಬರ್ 3ರ ವರೆಗೆ 5,212 ಶಿಕ್ಷಕರಿಂದ ನಮೂನೆ 19ರಲ್ಲಿ ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, ನವೆಂಬರ್ 5 ರಂದು ಎಲ್ಲಾ ತಾಲ್ಲೂಕು ಕೇಂದ್ರ, ಹೋಬಳಿ ಕೇಂದ್ರಗಳಲ್ಲಿ ವಿಶೇಷ ಆಂದೋಲನ ಹಮ್ಮಿಕೊಂಡು ಅರ್ಹ ಶಿಕ್ಷಕರಿಂದ ನಮೂನೆ-19ರಲ್ಲಿ ಅರ್ಜಿ ಸ್ವೀಕರಿಸಲಾಗುವುದು, ಶಿಕ್ಷಕ ಮತದಾರರು ಈ ಆಂದೋಲದ ಸದುಪಯೋಗ ಪಡೆಯಬೇಕು ಎಂದು ಮನವಿ ಮಾಡಿದರು.

ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ ಕರಾಳೆ ಮಾತನಾಡಿ, ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ವೇಳಾಪಟ್ಟಿ, ಜಿಲ್ಲೆಯಲ್ಲಿರುವ ಮತದಾರರ ಮಾಹಿತಿ, ಮತಗಟ್ಟೆಗಳ ಸಂಖ್ಯೆ, ಮತ್ತಿತರ ಮಾಹಿತಿಯನ್ನು ಸಭೆಗೆ ನೀಡಿದರು.
ಸಭೆಯಲ್ಲಿ ಬಿಜೆಪಿ, ಕಾಂಗ್ರೆಸ್, ಸಿಪಿಐಎಂ, ಆಮ್ ಆದ್ಮಿ ಪಕ್ಷದ ಮುಖಂಡರು ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!