ಜಿಲ್ಲೆಯಲ್ಲಿ ಸಮರ್ಪಕವಾಗಿ ಬರ ನಿರ್ವಹಿಸಿ

ಅಧಿಕಾರಿಗಳಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸೂಚನೆ

80

Get real time updates directly on you device, subscribe now.


ತುಮಕೂರು: ರಾಜ್ಯ ಸರ್ಕಾರ ರಾಜ್ಯದಲ್ಲಿ ತಲೆದೋರಿರುವ ಬರ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಬರ ನಿರ್ವಹಿಸಲು ಅನುದಾನ ಹಂಚಿಕೆ ಮಾಡಿದೆ, ರಾಜ್ಯ ಸರ್ಕಾರವು ಬಿಡುಗಡೆ ಮಾಡಿರುವ ಅನುದಾನ ಬಳಸಿಕೊಂಡು ಮುಂದಿನ ದಿನಗಳಲ್ಲಿ ಕುಡಿಯುವ ನೀರು ಮತ್ತು ಜಾನುವಾರುಗಳ ಮೇವಿಗೆ ಯಾವುದೇ ರೀತಿಯಲ್ಲೂ ಸಮಸ್ಯೆಯಾಗದಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಸೂಚಿಸಿದರು.

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಿದ್ದ 2023-24ನೇ ಸಾಲಿನ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ರಾಜ್ಯದ 226 ತಾಲ್ಲೂಕುಗಳ ಪೈಕಿ 223 ತಾಲ್ಲೂಕುಗಳಲ್ಲಿ ತೀವ್ರ ಬರ ತಲೆದೋರಿದ್ದು, ಕಂದಾಯ ಇಲಾಖೆ 37 ಸಾವಿರ ಕೋಟಿ ನಷ್ಟ ಅಂದಾಜು ಮಾಡಿದೆ, ಈ ಪೈಕಿ 17 ಸಾವಿರ ಕೋಟಿ ರೂ. ಅನುದಾನವನ್ನು ಬರನಿರ್ವಹಣೆಗಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದು, ಈವರೆಗೂ ಅನುದಾನ ಬಂದಿಲ್ಲ, ಆದರೆ ರಾಜ್ಯ ಸರ್ಕಾರ ಎಲ್ಲಾ ಜಿಲ್ಲಾಧಿಕಾರಿಗಳ ಪಿಡಿ ಖಾತೆಗೆ ಅನುದಾನ ಬಿಡುಗಡೆ ಮಾಡಿದ್ದು, ಇದನ್ನು ಬರ ಕಾಮಗಾರಿಗಳಿಗೆ ಉಪಯೋಗಿಸಲು ಸರ್ಕಾರ ಒಪ್ಪಿಗೆ ನೀಡಿದೆ ಎಂದು ತಿಳಿಸಿದರು.

ಕೃಷಿ ಇಲಾಖೆಯ ಪ್ರಗತಿ ಪರಿಶೀಲಿಸಿ ಮಾತನಾಡಿದ ಸಚಿವರು, ನೀರಿನ ಸದ್ಭಳಕೆಗಾಗಿ ಸರ್ಕಾರದ ಸಹಾಯಧನದಡಿ ಜಿಲ್ಲೆಯ 18 ಸಾವಿರ ರೈತರಿಗೆ ಒಟ್ಟು 46 ಕೋಟಿ ರೂ. ತುಂತುರು ನೀರಾವರಿ ಘಟಕಗಳನ್ನು ಈ ತಿಂಗಳೊಳಗಾಗಿ ವಿತರಿಸುವಂತೆ ಕೃಷಿ ಅಧಿಕಾರಿಗಳಿಗೆ ಸೂಚಿಸಿದರು.
ಕುಡಿಯುವ ನೀರಿನ ಕೊರತೆ ಇರುವಂತಹ ಸಮಸ್ಯಾತ್ಮಕ ಗ್ರಾಮಗಳನ್ನು ಗುರುತಿಸಿ ಶಾಸಕರ ನೇತೃತ್ವದ ಟಾಸ್ಕ್ಪೋರ್ಸ್ ಸಮಿತಿ ಸಭೆ ಕರೆದು ಚರ್ಚಿಸಿ ಕೊಳವೆ ಬಾವಿ ಕೊರೆಸುವುದಕ್ಕೆ ಪ್ರಸ್ತಾವನೆ ಕಳುಹಿಸಿದಲ್ಲಿ ಜಿಲ್ಲಾಡಳಿತ ವತಿಯಿಂದ ತ್ವರಿತಗತಿಯಲ್ಲಿ ಅನುಮತಿ ನೀಡಲಾಗುವುದು ಎಂದು ತಿಳಿಸಿದರು.
ಶುದ್ಧ ನೀರಿನ ಘಟಕಗಳ ನಿರ್ವಹಣೆ ಸಂಬಂಧಿಸಿದಂತೆ ತ್ರಿಸದಸ್ಯರುಳ್ಳ ಟಾಸ್ಕಪೋರ್ಸ್ ಸಮಿತಿ ರಚಿಸಬೇಕು ಮತ್ತು ಪ್ರತಿ 2 ದಿನಗಳಿಗೊಮ್ಮೆ ಇಓ ಮತ್ತು ಪಿಡಿಓಗಳು ಕುಡಿಯುವ ನೀರಿನ ವಸ್ತುಸ್ಥಿತಿ ಕುರಿತಂತೆ ಜಿಲ್ಲಾಧಿಕಾರಿಗಳು ಮತ್ತು ಜಿಪಂ ಸಿಇಓ ಅವರಿಗೆ ವರದಿ ನೀಡಬೇಕು, ಯಾವುದೇ ಹಳ್ಳಿಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗಬಾರದು ಎಂದು ಸಚಿವರು ಸೂಚಿಸಿದರು.
ಮಹಾತ್ಮಗಾಂಧಿ ಉದ್ಯೋಗ ಖಾತರಿ ಯೋಜನೆಯಡಿ ಜಿಲ್ಲೆಯಲ್ಲಿ 16 ಕೋಟಿ ಮಾನವ ದಿನಗಳ ಗುರಿ ನೀಡಲಾಗಿದ್ದು, ಈ ಪೈಕಿ 13 ಕೋಟಿ ಮಾನವ ದಿನಗಳನ್ನು ಈಗಾಗಲೇ ಸೃಜಿಸಲಾಗಿದೆ, ಹೆಚ್ಚುವರಿಯಾಗಿ 28 ಕೋಟಿ ರೂ. ಮಾನವ ದಿನಗಳ ಗುರಿ ಒದಗಿಸುವಂತೆ ಕೇಂದ್ರಕ್ಕೆ ಪತ್ರ ಬರೆಯಲಾಗಿದೆ ಎಂದು ತಿಳಿಸಿದರು.

ನರೇಗಾ ಹಾಗೂ ಸಿ ಎಸ್ ಆರ್ ಯೋಜನೆಯಡಿ ಈಗಾಗಲೇ ಜಿಲ್ಲೆಯ ಹಲವು ಶಾಲೆಗಳಿಗೆ ಸಿಂಥೆಟಿಕ್ ಟ್ರ್ಯಾಕ್, ಶೌಚಾಲಯ, ಅಂಗನವಾಡಿಗಳಿಗೆ ಕಾಂಪೌಂಡ್ ಮುಂತಾದವುಗಳನ್ನು ನಿರ್ಮಾಣ ಮಾಡಲಾಗಿದೆ. ಇನ್ನು 2 ವರ್ಷದೊಳಗಾಗಿ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಶೌಚಾಲಯ, ಕಾಂಪೌಂಡ್, ಅಂಗನವಾಡಿ ಕಟ್ಟಡಗಳಿಗೆ ಕಾಂಪೌಂಡ್ ಮುಂತಾದ ಕೆಲಸಗಳನ್ನು ನರೇಗಾ ಹಾಗೂ ಸಿ ಎಸ್ ಆರ್ ಯೋಜನೆಯಡಿ ಪೂರ್ಣಗೊಳಿಸಲಾಗುವುದು ಎಂದು ಭರವಸೆ ನೀಡಿದರು.
ವೈದ್ಯರು ಮತ್ತು ಇತರೆ ಸಿಬ್ಬಂದಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಕಾಲದಲ್ಲಿ ಸಿಗುವುದಿಲ್ಲ ಎಂಬ ದೂರಿಗೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿದ ಸಚಿವರು ಇನ್ನು ಮುಂದೆ ಡಿ ಹೆಚ್ ಓ ತಿಂಗಳಿಗೊಮ್ಮೆ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಬೇಕು, ಆಸ್ಪತ್ರೆಗಳಲ್ಲಿ ವೈದ್ಯರ ಹಾಗೂ ಸಿಬ್ಬಂದಿ ಹಾಜರಾತಿಗೆ ಸಂಬಂಧಿಸಿದಂತೆ ತಂತ್ರಜ್ಞಾನ ಬಳಸಿ ವೈದ್ಯರ ಲಭ್ಯತೆ ಕುರಿತು ಪರಿಶೀಲಿಸಬೇಕು, ಪ್ರತಿ ಪಿ ಹೆಚ್ ಸಿಯಲ್ಲಿ ಒಂದು ರಿಜಿಸ್ಟರ್ ಇಡಬೇಕು ಮತ್ತು ಆಸ್ಪತ್ರೆಗೆ ಭೇಟಿ ನೀಡಿದಂತಹ ಅಧಿಕಾರಿಗಳು ರಿಜಿಸ್ಟರ್ ನಲ್ಲಿ ತಮ್ಮ ಅಭಿಪ್ರಾಯ ನಮೂದಿಸಬೇಕೆಂದು ಸೂಚಿಸಿದರು.
ಹೇಮಾವತಿ ನೀರನ್ನು ಸಮರ್ಪಕವಾಗಿ ಜಿಲ್ಲೆಗೆ ಹರಿಸುವ ಸಂಬಂಧ ಸಭೆಯಲ್ಲಿ ಉಪಸ್ಥಿತರಿದ್ದಂತಹ ಶಾಸಕರ ಮನವಿಗೆ ಸ್ಪಂದಿಸಿದ ಸಹಕಾರ ಸಚಿವ ಕೆ.ಎನ್. ರಾಜಣ್ಣ, ಸದ್ಯದಲ್ಲೇ ಈ ಕುರಿತಂತೆ ಐಸಿಸಿ ಸಭೆ ಕರೆಯಲಿದ್ದು, ಸಭೆಯಲ್ಲಿ ಜಿಲ್ಲೆಯ ಶಾಸಕರೆಲ್ಲರೂ ಸೇರಿ ಹೇಮಾವತಿ ನೀರಿನ ಹಂಚಿಕೆ ಕುರಿತು ಚರ್ಚಿಸಿ ತೀರ್ಮಾನಿಸೋಣ ಎಂದು ತಿಳಿಸಿದರು.

ಕುಡಿಯುವ ನೀರಿಗೆ ಸಂಬಂಧಿಸಿದಂತೆ ಕೆರೆ ನೀರಿನ ಮೇಲೆ ಅವಲಂಬಿತವಾಗಿರುವ ಹಳ್ಳಿಗಳನ್ನು ಗುರುತಿಸಿ ಅಂತಹ ಕೆರೆಗಳಿಗೆ ಆದ್ಯತೆ ಮೇರೆಗೆ ನೀರು ಹರಿಸಲಾಗುವುದು ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆದಂತಹ ಕೆ.ಶ್ರೀನಿವಾಸ್ ಅವರು ವಿಪತ್ತು ನಿರ್ವಹಣೆ ಬಗ್ಗೆ ಸಭೆಗೆ ಸಮಗ್ರ ಮಾಹಿತಿ ನೀಡುತ್ತಾ, ತಾಲ್ಲೂಕು ಮಟ್ಟದಲ್ಲಿ ಶಾಸಕರ ನೇತೃತ್ವದಲ್ಲಿ ಈಗಾಗಲೇ ಟಾಸ್ಕಪೋರ್ಸ್ಗಳನ್ನು ರಚಿಸಲಾಗಿದೆ, ಕುಡಿಯುವ ನೀರು ಮತ್ತು ಮೇವಿಗೆ ಆಧ್ಯತೆ ನೀಡಿ ಕ್ರಮಕೈಗೊಳ್ಳಲಾಗಿದೆ, ಕೊಳವೆ ಬಾವಿಗಳನ್ನು ಕೊರೆಸಲಾಗಿದೆ, ಪ್ರತಿ ಗ್ರಾಮ ಪಂಚಾಯತಿಗಳಿಗೆ ಸದ್ಯದಲ್ಲೇ ಮೇವಿನ ಕಿಟ್ ಗಳನ್ನು ಒದಗಿಸಲಾಗುವುದು, ಜಿಲ್ಲೆಯಿಂದ ಮೇವು ಹೊರ ಹೋಗುವುದನ್ನು ನಿರ್ಬಂಧಿಸಲಾಗಿದೆ ಮತ್ತು ಬರ ನಿರ್ವಹಣೆ ಸಂಬಂಧ ಈಗಾಗಲೇ ಸಹಾಯವಾಣಿ ತೆರೆದು ರೈತಾಪಿ ವರ್ಗದವರಿಗೆ ಈ ಕುರಿತಂತೆ ಮಾಹಿತಿ ನೀಡಲಾಗಿದೆ ಎಂದು ವಿವರಿಸಿದರು.

ಸಭೆಯಲ್ಲಿ ನವದೆಹಲಿಯ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ, ಸಂಸದ ಜಿ.ಎಸ್.ಬಸವರಾಜು, ಶಾಸಕರಾದ ಸುರೇಶ್ ಬಾಬು, ರಾಜೇಂದ್ರ, ತಿಪ್ಪೇಸ್ವಾಮಿ, ಎಂ.ಟಿ.ಕೃಷ್ಣಪ್ಪ, ಚಿದಾನಂದ ಗೌಡ, ಷಡಕ್ಷರಿ, ರಂಗನಾಥ್, ಸುರೇಶ್ ಗೌಡ, ಜ್ಯೋತಿಗಣೇಶ್, ಮೇಯರ್ ಪ್ರಭಾವತಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ತುಳಸಿ ಮದ್ದಿನೇನಿ, ಜಿಪಂ ಸಿಇಓ ಜಿ.ಪ್ರಭು, ಪಾಲಿಕೆ ಆಯುಕ್ತೆ ಅಶ್ವಿಜ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!