ಎಸ್ ಸಿ ಪಿ,ಟಿ ಎಸ್ ಪಿ ಯೋಜನೆ ಅನುಷ್ಠಾನಗೊಳಿಸಿ

ಶೇ.100 ರಷ್ಟು ಗುರಿ ಸಾಧಿಸಿ- ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

71

Get real time updates directly on you device, subscribe now.


ತುಮಕೂರು: ಪರಿಶಿಷ್ಟ ಜಾತಿ ಹಾಗೂ ಗಿರಿಜನರ ಕಲ್ಯಾಣಕ್ಕಾಗಿ ಸರ್ಕಾರ ಅನುಷ್ಠಾನಗೊಳಿಸುವರ ಹಲವು ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಶೇ.100 ರಷ್ಟು ಗುರಿ ಸಾಧಿಸುವಂತೆ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ ಅಧಿಕಾರಿಗಳಿಗೆ ಸೂಚಿಸಿದರು.
ಪರಿಶಿಷ್ಟ ಜಾತಿ ಉಪಯೋಜನೆ, ಗಿರಿಜನ ಉಪಯೋಜನೆ ಕಾಯ್ದೆ-2013 2017ರ ಅನುಷ್ಠಾನದ ಕುರಿತು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮೇಲ್ವಿಚಾರಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅಕ್ಟೋಬರ್ 2023ರ ಮಾಹೆಯ ಅಂತ್ಯಕ್ಕೆ ವಿವಿಧ ಇಲಾಖೆಗಳು ಸಾಧಿಸಿರುವ ಪ್ರಗತಿ ಮಾಹಿತಿ ಪರಿಶೀಲಿಸಿ ಮಾತನಾಡಿ, ಮೀನುಗಾರಿಕೆ ಇಲಾಖೆಯ ಎಸ್ಸಿಪಿ ಯೋಜನೆಯಡಿ 20 ಲಕ್ಷ ಹಾಗೂ ಟಿಎಸ್ಪಿ ಯೋಜನೆಯಡಿ 30 ಲಕ್ಷ ರೂ. ಅನುದಾನ ಬಿಡುಗಡೆಯಗಿದ್ದು, ಫಲಾನುಭವಿಗಳನ್ನು ಪಾರದರ್ಶಕವಾಗಿ ಆಯ್ಕೆ ಮಾಡಿ ಶೇ.100ರಷ್ಟು ಗುರಿ ಸಾಧಿಸುವಂತೆ ಮೀನುಗಾರಿಕೆ ಇಲಾಖೆ ಅಧಿಕಾರಿ ಶಿವಶಂಕರ್ ಗೆ ಸೂಚಿಸಿದರು.

ಪರಿಶಿಷ್ಟ ಜಾತಿ, ಪ.ವರ್ಗದವರು ಹೆಚ್ಚಾಗಿ ವಾಸಿಸುವ ಸ್ಥಳಗಳಲ್ಲಿ ಎಸ್ ಸಿ ಪಿ ಯೋಜನೆಯಡಿ ಜಿಲ್ಲೆಯಲ್ಲಿ ರಸ್ತೆಗಳನ್ನು ನಿರ್ಮಾಣ ಮಾಡಲಾಗಿದ್ದು, ರಸ್ತೆಗಳನ್ನು ನಿದಿಪಡಿಸಿದ ಮಾರ್ಗದಲ್ಲಿ ಹೊರತು ಪಡಿಸಿ ಬೇರೆ ಮಾರ್ಗದಲ್ಲಿ ನಿರ್ಮಾಣ ಮಾಡಲಾಗಿರುವ ಬಗ್ಗೆ ಪರಿಶೀಲಿಸಿ ವರದಿ ನೀಡುವಂತೆ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪಗೆ ಸೂಚಿಸಿದರು.
ಶಾಲಾ ಶಿಕ್ಷಣ ಇಲಾಖೆಯಲ್ಲಿ ಒಟ್ಟು ಪರಿಶಿಷ್ಟ ಜಾತಿ, ಪ.ವರ್ಗದ 14,651 ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ ಸೇರಿದಂತೆ ವಿವಿಧ ಸೌಲಭ್ಯ ಒದಗಿಸಲಾಗಿದ್ದು, ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಹಾಗೂ ಕೈಗಾರಿಕಾ ವಲಯಗಳ ವ್ಯಾಪ್ತಿಯಲ್ಲಿ ಇರುವ ಶಾಲೆಗಳಿಗೆ ಅಗತ್ಯವಿರುವ ಕೊಠಡಿ ನಿರ್ಮಾಣ, ಇತ್ಯಾದಿ ದುರಸ್ತಿ ಕಾರ್ಯಗಳನ್ನು ಸಿ ಎಸ್ ಆರ್ ಅನುದಾನದಲ್ಲಿ ದುರಸ್ತಿಪಡಿಸಿ ಪೂರಕ ಕಲಿಕಾ ವಾತಾವರಣ ಕಲ್ಪಿಸಲು ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ರಂಗಧಾಮಯ್ಯಗೆ ಸೂಚಿಸಿದರು.
ಎಲ್ಲಾ ಅರ್ಹ ರೈತರಿಗೆ ಮೇವಿನ ಕಿಟ್ ಗಳನ್ನು ವಿತರಿಸುವಂತೆ ಪಶುಪಾಲನಾ ಇಲಾಖೆ ಉಪ ನಿರ್ದೇಶಕರಿಗೆ ಸೂಚಿಸಿದರು.

ತುಮಕೂರು ವಿಶ್ವ ವಿದ್ಯಾಲಯದ ಪ.ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ಭೋಜನ ವೆಚ್ಚ, ಸಂಶೋಧನಾ ವಿದ್ಯಾರ್ಥಿಗಳಿಗೆ ಶಿಷ್ಯ ವೇತನವನ್ನು ಆಂತರಿಕ ಸಂಪನ್ಮೂಲಗಳಿಂದ ವಿಶ್ವವಿದ್ಯಾಲಯ ಭರಿಸುತ್ತಿದ್ದು, ಶೇ.23 ರಷ್ಟು ಅನುದಾನ ಮೀಸಲಿರಿಸಲಾಗಿದೆ ಎಂದು ಕುಲಸಚಿವೆ ನಹೀದಾ ಜಂ ಜಂ ಹೇಳಿದರು, ಮೀಸಲಿರಿಸಿದ ಅನುದಾನವನ್ನು ಸಮರ್ಪಕವಾಗಿ ಬಳಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು.
ಕೃಷಿ ಇಲಾಖೆಯಲ್ಲಿ ಹನಿ ನೀರಾವರಿ ಉಪಕರಣಗಳ ವಿತರಣೆಗೆ ಬಾಕಿ ಇರುವ 4 ಸಾವಿರ ಫಲಾನುಭವಿಗಳಲ್ಲಿ 2 ಸಾವಿರ ಫಲಾನುಭವಿಗಳಿಗೆ ಹನಿ ನೀರಾವರಿ ಉಪಕರಣ ಒಂದು ವಾರದೊಳಗೆ ವಿತರಿಸಿ, ಬಾಕಿ 2 ಸಾವಿರ ಫಲಾನುಭವಿ ರೈತರಿಗೆ ಮಾಹೆಯ ಅಂತ್ಯಕ್ಕೆ ವಿತರಿಸಿ ಶೇ.100 ರಷ್ಟು ಗುರಿಯನ್ನು ತ್ವರಿತವಾಗಿ ಸಾಧಿಸುವಂತೆ ಕೃಷಿ ಇಲಾಖೆ ಜಂಟಿ ನಿರ್ದೇಶಕ ಎನ್.ರಮೇಶ್ ಗೆ ಸೂಚಿಸಿದರು.

ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜಿ.ಪ್ರಭು ಮಾತನಾಡಿ, ಸರ್ಕಾರಿ ಯೋಜನೆಗಳ ಸಮರ್ಪಕ ಜಾರಿಗೆ ಫಲಾನುಭವಿಗಳ ಲಭ್ಯತೆ ಕಡಿಮೆ ಇರುವ ಬಗ್ಗೆ ಕೆಲವು ಇಲಾಖಾ ವರದಿಯಲ್ಲಿ ತಿಳಿಸಲಾಗಿದ್ದು, ಜಿಲ್ಲೆಯ ಎಲ್ಲಾ 330 ಗ್ರಾಮ ಪಂಚಾಯತಿಯಲ್ಲಿ ಸರ್ಕಾರಿ ಯೋಜನೆಗಳ ಸಮಗ್ರ ಮಾಹಿತಿ ಒಳಗೊಂಡ ಕರಪತ್ರಗಳನ್ನು ಅಂಟಿಸಿ ಯೋಜನೆಗಳ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು, ಸಮರ್ಪಕವಾಗಿ ಬರ ನಿರ್ವಹಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕರ್ತವ್ಯ ನಿರ್ವಹಿಸಿ ನಿಗದಿತ ಅವಧಿಯೊಳಗೆ ಸರ್ಕಾರಿ ಯೋಜನೆಗಳ ಗುರಿ ಸಾಧಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಡಿ ಹೆಚ್ ಓ ಮಂಜುನಾಥ್, ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ಶ್ರೀಧರ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ತ್ಯಾಗರಾಜ್, ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಮಂಜುನಾಥ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!