ಮುಖ್ಯಮಂತ್ರಿ ಕಾರ್ಯಕ್ರಮಕ್ಕೆ ಸಿದ್ಧರಾಗಿ

ಕಾಮಗಾರಿಗಳ ಉದ್ಘಾಟನೆ ಬಗ್ಗೆ ಮಾಹಿತಿ ನೀಡಿ- ಅಧಿಕಾರಿಗಳಿಗೆ ಡೀಸಿ ಸೂಚನೆ

43

Get real time updates directly on you device, subscribe now.


ತುಮಕೂರು: ಪ್ರಸಕ್ತ ಮಾಹೆಯಲ್ಲಿ ಮುಖ್ಯ ಮಂತ್ರಿಗಳು ತುಮಕೂರು ಜಿಲ್ಲೆಗೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ವಿವಿಧ ಇಲಾಖೆಗಳಿಂದ ಫಲಾನುಭವಿಗಳಿಗೆ ವಿತರಿಸಲು ಯೋಜಿಸಿರುವ ಸವಲತ್ತು ಹಾಗೂ ಉದ್ಘಾಟನೆಗೆ ಸಿದ್ಧವಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಸಮಗ್ರವಾಗಿ ಚರ್ಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಈ ಸಂಬಂಧ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿವಿಧ ಇಲಾಖೆಗಳ ಉದ್ಘಾಟನೆಗೆ ಸಿದ್ಧವಿರುವ ಕಟ್ಟಡ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಇಲಾಖಾ ಮುಖ್ಯಸ್ಥರು ಖುದ್ದು ಸ್ಥಳಕ್ಕೆ ತೆರಳಿ ಕಾಮಗಾರಿ ಪರಿಶೀಲಿಸಿ ತಮಗೆ ವರದಿ ಸಲ್ಲಿಸುವಂತೆ ಸೂಚಿಸಿದರು.

ಸವಲತ್ತುಗಳ ವಿತರಣೆಗೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳಿಂದ ಫಲಾನುಭವಿಗಳ ಆಯ್ಕೆ ತ್ವರಿತಗತಿಯಲ್ಲಿ ಆಗಬೇಕು, ಫಲಾನುಭವಿ ಆಯ್ಕೆಗೆ ಸಂಬಂಧಿಸಿದಂತೆ ಕಡತಗಳು ಶಾಸಕರು ಅಥವಾ ಸಿಇಓ ಅಥವಾ ಜಿಲ್ಲಾಧಿಕಾರಿಗಳ ಬಳಿ ವಿಲೇವಾರಿಗೆ ಬಾಕಿ ಇದ್ದಲ್ಲಿ ಇಲಾಖಾ ಮುಖ್ಯಸ್ಥರು ಖುದ್ದು ನಿಗಾ ವಹಿಸಿ ಕಡತಗಳ ವಿಲೇವಾರಿ ಮಾಡಬೇಕು, ಜನವರಿ 15 ರೊಳಗಾಗಿ ಎಲ್ಲಾ ಪ್ರಕ್ರಿಯೆ ಪೂರ್ಣಗೊಳ್ಳಬೇಕು ಎಂದು ತಿಳಿಸಿದರು.
ಲ್ಯಾಪ್ ಟಾಪ್ ವಿತರಣೆ ಕಾರ್ಯಕ್ರಮಕ್ಕೆ ಆಗಮಿಸುವ ಕಾರ್ಮಿಕರ ಮಕ್ಕಳಿಗೆ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ನೀಡುವಂತೆ ಮತ್ತು ಲ್ಯಾಪ್ ಟಾಪ್ ಸಂಗ್ರಹ ಕಾರ್ಯ ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಮಧುಗಿರಿ ಹಾಗೂ ತುಮಕೂರು ಉಪ ವಿಭಾಗದ ಕಾರ್ಮಿಕ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಸರ್ಕಾರಿ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ವಿವಿಧ ಇಲಾಖೆಗಳ ಮಳಿಗೆಗಳ ಪ್ರದರ್ಶನ ಮಾಹಿತಿ ಒದಗಿಸುವಂತೆ ಮತ್ತು ರೂಟ್ ಮ್ಯಾಪ್ ಸಿದ್ಧಪಡಿಸುವಂತೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತಿ ಸಿಇಓ ಜಿ.ಪ್ರಭು, ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ.ಕರಾಳೆ ಸೇರಿದಂತೆ ವಿವಿಧ ಇಲಾಖಾ ಮುಖ್ಯಸ್ಥರು ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!