ಗೆಲ್ಲುವ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೆಟ್

47

Get real time updates directly on you device, subscribe now.


ತುಮಕೂರು: ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಎಐಸಿಸಿ ಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿ ಮಯೂರ ಜಯಕುಮಾರ್ ಸಮ್ಮುಖದಲ್ಲಿ ತುಮಕೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಸಂಬಂಧ ಪಕ್ಷದ ಮುಖಂಡರು, ಕಾರ್ಯಕರ್ತರು, ಮಂಚೂಣಿ ಘಟಕಗಳ ಅಧ್ಯಕ್ಷರುಗಳ ಅಭಿಪ್ರಾಯ ಆಲಿಸುವ ನಿಟ್ಟಿನಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರಗೌಡ ನೇತೃತ್ವದಲ್ಲಿ ಸಭೆ ಕರೆಯಲಾಗಿತ್ತು.

ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾಧ್ಯಕ್ಷ ಚಂದ್ರಶೇಖರಗೌಡ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತುಮಕೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆಗೆ ಸಂಬಂಧಿಸಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರ ಸಲಹೆ ಪಡೆಯುವ ನಿಟ್ಟಿನಲ್ಲಿ ಎಐಸಿಸಿ ಕಾರ್ಯದರ್ಶಿ ಮಯೂರ ಜಯಕುಮಾರ್ ಸೂಚನೆಯಂತೆ ಸಭೆ ಕರೆದಿದ್ದು, ಸಭೆಯಲ್ಲಿ ಭಾಗವಹಿಸಿರುವ ಸಚಿವರು, ಶಾಸಕರು, ಮಾಜಿ ಶಾಸಕರು, ಮಾಜಿ ಕಾಂಗ್ರೆಸ್ ಅಧ್ಯಕ್ಷರು ಹಾಗೂ ವಿವಿಧ ಮುಂಚೂಣಿ ಘಟಕಗಳ ಅಧ್ಯಕ್ಷರು ಸ್ಪಷ್ಟವಾಗಿ ತಮ್ಮ ಅಭಿಪ್ರಾಯವನ್ನು ಸಭೆಯಲ್ಲಿ ಮಂಡಿಸಬೇಕು, ನಮ್ಮ ಸಲಹೆ ಕ್ರೂಢೀಕರಿಸಿ ಜಿಲ್ಲೆಯ ಇಬ್ಬರು ಸಚಿವರಾದ ಡಾ.ಜಿ.ಪರಮೇಶ್ವರ್ ಮತ್ತು ಕೆ.ಎನ್.ರಾಜಣ್ಣ ಅವರ ಅಭಿಪ್ರಾಯ ಆಲಿಸಿ ಪಕ್ಷದ ಹೈಕಮಾಂಡ್ ಓರ್ವ ಸೂಕ್ತ, ಗೆಲ್ಲುವ ಎಲ್ಲಾ ಅರ್ಹತೆ ಇರುವ ಅಭ್ಯರ್ಥಿಯನ್ನು ಆಯ್ಕೆ ಮಾಡಲಿದೆ, ಪಕ್ಷ ಆಯ್ಕೆ ಮಾಡಿದ ಅಭ್ಯರ್ಥಿಯ ಪರ ನಾವೆಲ್ಲರೂ ಒಗ್ಗೂಡಿ ಕೆಲಸ ಮಾಡುವ ಮೂಲಕ ಅವರ ಗೆಲುವಿಗೆ ಶ್ರಮಿಸಬೇಕಿದೆ, ನಮಗೆ ಅಭ್ಯರ್ಥಿ ಯಾರು ಎಂಬುದು ಮುಖ್ಯವಲ್ಲ, ಪಕ್ಷ ಮುಖ್ಯ, ಹಾಗಾಗಿ ಎಲ್ಲರೂ ಪಕ್ಷದ ನಿಲುವಿಗೆ ಬದ್ಧವಾಗಿ ಕೆಲಸ ಮಾಡಿ, ನಮ್ಮ ಅಭ್ಯರ್ಥಿ ಗೆಲ್ಲಿಸಿಕೊಳ್ಳಲು ಶ್ರಮಿಸೋಣ ಎಂದರು.

ಗುಬ್ಬಿ ಕ್ಷೇತ್ರದ ಶಾಸಕ ಎಸ್.ಆರ್.ಶ್ರೀನಿವಾಸ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ನಮ್ಮೆಲ್ಲಾ ಕಾರ್ಯಕರ್ತರ ಶ್ರಮವಿದೆ, ಬಡವರು, ದಲಿತರು, ಅಲ್ಪಸಂಖ್ಯಾತರು, ಹಿಂದುಳಿದ ವರ್ಗದವರ ಹಿತ ಕಾಯುವಂತಹ ಪಕ್ಷವಿದ್ದರೆ ಅದು ಕಾಂಗ್ರೆಸ್ ಮಾತ್ರ, ಆ ನಂಬಿಕೆಯಿಂದಲೇ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ನಂಬಿ ಜನತೆ ಮತ ನೀಡಿದ ಪರಿಣಾಮ 136 ಸೀಟು ಗೆದ್ದು ಅಧಿಕಾರ ಹಿಡಿದಿದೆ, ಅಲ್ಲದೆ ಅಧಿಕಾರಕ್ಕೆ ಬಂದ 7 ತಿಂಗಳ ಒಳಗೆ ಜನತೆಗೆ ನೀಡಿದ್ದ ಐದು ಗ್ಯಾರಂಟಿಗಳನ್ನು ಜಾರಿಗೆ ತಂದು ನುಡಿದಂತೆ ನಡೆದ ಸರಕಾರವಾಗಿದೆ, ಜಾತಿ, ಮತ ಭೇದವಿಲ್ಲದೆ ಎಲ್ಲರಿಗೂ ಅಧಿಕಾರ ನೀಡುವ ಪಕ್ಷ ಕಾಂಗ್ರೆಸ್ ಎಂದರು.
ಪಾವಗಡ ಕ್ಷೇತ್ರದ ಶಾಸಕ ವಿ.ವೆಂಟಕೇಶ್ ಮಾತನಾಡಿ, ಪಕ್ಷದ ಕಾರ್ಯಕರ್ತರಲ್ಲಿ ಗೊಂದಲ ಮೂಡದಂತೆ ಒಮ್ಮತದ ಅಭ್ಯರ್ಥಿಯನ್ನು ಪಕ್ಷದ ಹೈಕಮಾಂಡ್ ಆಯ್ಕೆ ಮಾಡಲಿದೆ, ಹಾಗಾಗಿ ಪಕ್ಷದ ಕಾರ್ಯಕರ್ತರು ತಮ್ಮ ಅಭಿಪ್ರಾಯಗಳನ್ನು ಮುಕ್ತವಾಗಿ ಹೇಳುವುದರ ಜೊತೆಗೆ ಪಕ್ಷ ತೀರ್ಮಾನಿಸುವ ಅಭ್ಯರ್ಥಿಯ ಗೆಲುವಿಗೆ ದುಡಿಯುವುದಾಗಿ ವಾಗ್ಧಾನ ನೀಡಬೇಕಾಗಿದೆ ಎಂದರು.

ಸಹಕಾರ ಸಚಿವ ಹಾಗೂ ಮಧುಗಿರಿ ಕ್ಷೇತ್ರದ ಶಾಸಕ ಕೆ.ಎನ್.ರಾಜಣ್ಣ ಮಾತನಾಡಿ, ಯಾವುದೇ ಪಕ್ಷ ಸದೃಢವಾಗಬೇಕಿದ್ದರೆ ಆ ಪಕ್ಷದ ಕಾರ್ಯಕರ್ತರು ಸದೃಢರಾಗಿದ್ದಾಗ ಮಾತ್ರ ಸಾಧ್ಯ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಇದು ಸಾಬೀತಾಗಿದೆ, ಗೆಲ್ಲುವ ಅಭ್ಯರ್ಥಿಗೆ ಟಿಕೆಟ್ ನೀಡಬೇಕೆಂಬ ಆಶಯ ನಮ್ಮದು, ನಾವೇನು ಅಭಿಪ್ರಾಯ ಮಂಡಿಸಿದರೂ ಅಂತಿಮವಾಗಿ ತೀರ್ಮಾನ ತೆಗೆದುಕೊಳ್ಳುವವರು ಮುಖ್ಯಮಂತ್ರಿಗಳು ಮತ್ತು ಎಐಸಿಸಿ ಮುಖಂಡರು, 28 ಸೀಟುಗಳಲ್ಲಿ ಕನಿಷ್ಠ 20 ಸೀಟುಗಳನ್ನಾದರೂ ಈ ಬಾರಿಯ ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಬೇಕಿದೆ, ಇಲ್ಲದಿದ್ದರೆ ಸರಕಾರ ನಡೆಸುವ ನೈತಿಕತೆ ನಮಗೆ ಇರುವುದಿಲ್ಲ, ಪಕ್ಷ ಮಾಡಿರುವ ಜನಪರ ಕಾರ್ಯಕ್ರಮಗಳನ್ನು ಜನರ ಮುಂದಿಟ್ಟು ಅವರು ಕಾಂಗ್ರೆಸ್ ಗೆ ಮತ ಹಾಕುವಂತೆ ಮಾಡುವ ಗುರುತರ ಜವಾಬ್ದಾರಿ ಕಾರ್ಯಕರ್ತರು ಮತ್ತು ಮುಖಂಡರ ಮೇಲಿದೆ ಎಂದರು.

ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಶ್ರಮಿಸಿದ ಕಾರ್ಯಕರ್ತರನ್ನು ವಿವಿಧ ನಿಗಮ ಮಂಡಳಿ, ಜಿಲ್ಲಾ ಮಟ್ಟದ ಸಮಿತಿಗಳಿಗೆ ನೇಮಕ ಮಾಡುವ ಪ್ರಕ್ರಿಯೆ ಆರಂಭವಾಗಿದೆ, ಫೆ.10 ರಿಂದ ರಾಜ್ಯದಲ್ಲಿ ಆರಂಭವಾಗುವ ಬಜೆಟ್ ಅಧಿವೇಶನದ ವೇಳೆಗೆ ಎಲ್ಲಾ ಜಿಲ್ಲೆಗಳಿಂದ ಪಟ್ಟಿ ಪಡೆದು ಫೆ.16 ರಂದು ಬಜೆಟ್ ಮಂಡಿಸಿ, ಫೆ.24 ರೊಳಗೆ ಎಲ್ಲಾ ನಿಗಮ, ಮಂಡಳಿ, ಜಿಲ್ಲಾ ಮಟ್ಟದ ಸಮಿತಿಗಳ ನೇಮಕ ಪೂರ್ಣಗೊಳ್ಳಲಿದ್ದು, ಮಾರ್ಚ್ 01 ರಿಂದ ಲೋಕಸಭಾ ಚುನಾವಣೆಗೆ ತಯಾರಿ ಆರಂಭ ವಾಗಲಿದೆ, ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನಿಗೂ ಟಿಕೆಟ್ ಕೇಳುವ ಅಧಿಕಾರವಿದೆ, ಕಾಂಗ್ರೆಸ್ ಪಕ್ಷದ ಜೀವಾಳವೇ ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಟಿಕೆಟ್ ನೀಡಲು ಗೆಲುವೇ ಮಾನದಂಡ ಎಂದರು.

ದೆಹಲಿ ವಿಶೇಷ ಪ್ರತಿನಿಧಿ ಹಾಗೂ ಶಿರಾ ಶಾಸಕ ಟಿ.ಬಿ.ಜಯಚಂದ್ರ, ಮಾಜಿ ಶಾಸಕರಾದ ಎಸ್.ಷಪಿ ಅಹಮದ್, ಡಾ.ರಫಿಕ್ ಅಹಮದ್, ಗಂಗಹನುಮಯ್ಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್, ಮಾಜಿ ಅಧ್ಯಕ್ಷ ಆರ್.ರಾಮಕೃಷ್ಣ, ನರಸಿಂಹಯ್ಯ, ಇಕ್ಬಾಲ್ ಅಹಮದ್, ಮುರುಳೀಧರ ಹಾಲಪ್ಪ, ನಿಖೇತರಾಜ್ ಮೌರ್ಯ, ಷಣ್ಮುಖಪ್ಪ, ರಾಯಸಂದ್ರ ರವಿಕುಮಾರ್, ಗೀತಾ ರಾಜಣ್ಣ, ಸುಜಾತ, ನಾಗಮಣಿ ಇತರರು ಇದ್ದರು.

Get real time updates directly on you device, subscribe now.

Comments are closed.

error: Content is protected !!