ಬೃಹತ್ ಸಂವಿಧಾನ ಕೊಟ್ಟ ಅಂಬೇಡ್ಕರ್ ಸ್ಮರಣೀಯರು

ಜನರ ಕಲ್ಯಾಣಕ್ಕೆ ರಾಜ್ಯ ಸರ್ಕಾರ ಬದ್ಧ: ಡಾ.ಜಿ.ಪರಮೇಶ್ವರ್

27

Get real time updates directly on you device, subscribe now.


ತುಮಕೂರು: ಸ್ವತಂತ್ರ ಭಾರತದ ಇತಿಹಾಸದಲ್ಲಿ 26 ಜನವರಿ 1950 ಭಾರತೀಯರಾದ ನಾವೆಲ್ಲರೂ ಅತ್ಯಂತ ಹೆಮ್ಮೆ ಪಡುವಂತಹ ದಿನ, ಭಾರತ ಸರ್ವತಂತ್ರ ಸ್ವತಂತ್ರವಾದ ದಿನ, ಭಾರತೀಯರ ಸ್ವಾತಂತ್ರದ ಕನಸನ್ನು ನನಸಾಗಿಸಿ ಅವರ ಹಕ್ಕು ಮತ್ತು ಕರ್ತವ್ಯಗಳನ್ನು ಮಾನವೀಯ ಮೌಲ್ಯಗಳೊಂದಿಗೆ ಭಾರತೀಯರೆಲ್ಲರಿಗೂ ಸರ್ವ ಸಮ್ಮತವಾಗುವಂತೆ ರೂಪಿಸಿ, ಸಂವಿಧಾನದ ರೂಪದಲ್ಲಿ ಜಾರಿಗೊಳಿಸಿದ ದಿನವಾಗಿದೆ, ಉತ್ತಮ ಆದರ್ಶ, ಮೌಲ್ಯ ಹೊಂದಿರುವ ಒಂದು ಬೃಹತ್ ಸಂವಿಧಾನವನ್ನು ಅಂಗೀಕರಿಸಿ ಸ್ವತಂತ್ರ್ಯ ದೇಶವಾಗಿ ಭಾರತ ರೂಪುಗೊಂಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮತ್ತು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.
ಜಿಲ್ಲಾಡಳಿತದ ವತಿಯಿಂದ ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಭಾರತ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಇಂತಹ ಮಹಾನ್ ಆಶಯ ಹೊಂದಿರುವ ಬೃಹತ್ ಸಂವಿಧಾನ ರೂಪಿಸಿಕೊಟ್ಟ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಕಾರ್ಯ ಚಿರಸ್ಮರಣೀಯ ಎಂದರು.

ಜಾತಿ ಪದ್ಧತಿ, ಆರ್ಥಿಕ ಅಸಮಾನತೆ, ಭಾಷಾ ವೈವಿಧ್ಯತೆ, ವಿಭಿನ್ನ ಸಂಸ್ಕೃತಿ, ಆಚಾರ- ವಿಚಾರಗಳು ಗಡಿ ಸಮಸ್ಯೆ, ಭಾರತೀಯ ಒಕ್ಕೂಟ ವ್ಯವಸ್ಥೆಯಲ್ಲಿನ ಕಠಿಣ ಸವಾಲುಗಳಾಗಿದ್ದವು, ಇಂತಹ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಂಡು ಕೊಳ್ಳುವಲ್ಲಿ ಭಾರತದ ಸಂವಿಧಾನ ಯಶಸ್ವಿಯಾಗಿದೆ ಎಂದರು.

ಮಾನವ ಸಂಪನ್ಮೂಲಗಳ ಅಭಿವೃದ್ಧಿ, ನಗರಗಳ ವ್ಯವಸ್ಥಿತ ಬೆಳವಣಿಗೆ, ಸಾಮಾಜಿಕ ನ್ಯಾಯ ಮತ್ತು ಕನ್ನಡ ನುಡಿ ಮತ್ತು ಸಂಸ್ಕೃತಿಯ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ, ರಾಜ್ಯದ ಜನತೆಯ ಜೀವನ ಮಟ್ಟ ಕಾಯ್ದುಕೊಳ್ಳಲು ಮತ್ತು ಭವಿಷ್ಯದ ಬೆಳವಣಿಗೆಗಾಗಿ ಅಗತ್ಯವಿರುವ ತಳಹದಿ ನಿರ್ಮಿಸಲು ನಮ್ಮ ಸರ್ಕಾರದಿಂದ ಪ್ರಾಮಾಣಿಕ ಪ್ರಯತ್ನ ಮಾಡಲಾಗಿದೆಯೆಂದು ತಿಳಿಸಲು ಹೆಮ್ಮೆ ಪಡುತ್ತೇನೆ ಎಂದರು.

ಕರ್ನಾಟಕ ರಾಜ್ಯ ಘನ ಸರ್ಕಾರದ ಆದೇಶದಂತೆ ಭಾರತ ಸಂವಿಧಾನದ 75ನೇ ವರ್ಷದ ಅಮೃತ ಮಹೋತ್ಸವದ ಅಂಗವಾಗಿ ಭಾರತ ಸಂವಿಧಾನ ಜಾಗೃತಿ ಜಾಥಾ ಸ್ಥಬ್ಧಚಿತ್ರಗಳೊಂದಿಗೆ ಸಂವಿಧಾನದ ಮಹತ್ವ, ಆಶಯ ಮತ್ತು ಸಮಾನತೆ, ತತ್ವಗಳ ಬಗ್ಗೆ ಸಮಾಜದ ಸರ್ವರಿಗೂ ಅರಿವು ಮೂಡಿಸುವ ಉದ್ದೇಶದಿಂದ ಜಿಲ್ಲೆಯ ಎಲ್ಲಾ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ ಹಾಗೂ ಜಿಲ್ಲೆಯ ಎಲ್ಲಾ 330 ಗ್ರಾಮಪಂಚಾಯತಿಗಳಲ್ಲಿ ಇಂದಿನಿಂದ ಫೆಬ್ರವರಿ 23ರ ವರೆಗೆ ಸಂಚರಿಸಲಿದೆ, ಈ ಅವಿಸ್ಮರಣೀಯ ಜಾಥಾಕ್ಕೆ ತುಮಕೂರು ಜಿಲ್ಲೆಯಲ್ಲಿ ತಾವು ಚಾಲನೆ ನೀಡಿದ್ದು, ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಭಾಗಿಯಾಗುವ ಮೂಲಕ ವಿಶ್ವ ಶ್ರೇಷ್ಠ ಭಾರತ ಸಂವಿಧಾನ ಮತ್ತು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸೋಣ ಎಂದರು.

ರಾಜ್ಯದ ಎಲ್ಲಾ ವರ್ಗದ ಜನರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಬದ್ಧವಾಗಿದ್ದು, ಅದರಂತೆ ರಾಜ್ಯದ ಜನತೆಯ ಶ್ರೇಯೋಭಿವೃದ್ಧಿಗಾಗಿ ಘೋಷಿಸಿದ್ದ ಪಂಚ ಗ್ಯಾರಂಟಿ ಯೋಜನೆಗಳನ್ನು ಯಥಾವತ್ತಾಗಿ ಅನುಷ್ಠಾನಗೊಳಿಸಿ ನುಡಿದಂತೆ ನಡೆದಿದೆ, ಯುವನಿಧಿ, ಗೃಹಲಕ್ಷ್ಮಿ, ಅನ್ನಭಾಗ್ಯ, ಗೃಹಜ್ಯೋತಿ ಮತ್ತು ಶಕ್ತಿ ಯೋಜನೆಯ ಲಾಭವನ್ನು ರಾಜ್ಯದ ಅರ್ಹ ಫಲಾನುಭವಿಗಳು ಪಡೆಯುವ ಮೂಲಕ ನೆಮ್ಮದಿಯ ಜೀವನ ಕಂಡುಕೊಂಡಿದ್ದಾರೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಶಾಸಕರಾದ ಜ್ಯೋತಿ ಗಣೇಶ್, ಸುರೇಶ್ ಗೌಡ, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಜಿ.ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್.ಕೆ.ವಿ, ಮಹಾನಗರ ಪಾಲಿಕೆ ಆಯುಕ್ತರಾದ ಅಶ್ವಿಜ.ಬಿ.ವಿ, ಮಹಾನಗರ ಪಾಲಿಕೆ ಮಹಾಪೌರರಾದ ಪ್ರಭಾವತಿ.ಎಂ. ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ವಿವಿಧ ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಹಾಜರಿದ್ದರು.

ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ
ಗಣರಾಜ್ಯೋತ್ಸವ ಪ್ರಯುಕ್ತ ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು, ರಾಷ್ಟ್ರ ಭಕ್ತಿ ಸಾರುವ ಹಾಡುಗಳಿಗೆ ವಿದ್ಯಾರ್ಥಿಗಳು ಹೆಜ್ಜೆ ಹಾಕಿ ನೆರೆದಿದ್ದ ಪ್ರೇಕ್ಷಕರ ಮನ ಗೆದ್ದರು, ಸ್ವಾತಂತ್ರ್ಯ ಹೋರಾಟಗಾರರ ವೇಷದಲ್ಲಿಯೂ ವಿದ್ಯಾರ್ಥಿಗಳು ಮಿಂಚಿದ್ದು ವಿಶೇಷವಾಗಿತ್ತು.

Get real time updates directly on you device, subscribe now.

Comments are closed.

error: Content is protected !!