ತುಮಕೂರು: ಸಫಾಯಿ ಕರ್ಮಚಾರಿಗಳು ನಿಗದಿಪಡಿಸಿದ ದಿನಾಂಕದೊಳಗೆ ಪೂರಕ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿದಲ್ಲಿ ಬ್ಯಾಂಕಿನ ಮೂಲಕ ಸಾಲ ಸೌಲಭ್ಯ ಕಲ್ಪಿಸಿಕೊಡಲಾಗುವುದೆಂದು ನವದೆಹಲಿಯ ರಾಷ್ಟ್ರೀಯ ಸಫಾಯಿ ಕರ್ಮಚಾರಿಗಳ ಹಣಕಾಸು ಮತ್ತು ಅಭಿವೃದ್ಧಿ ನಿಗಮದ ಉಪ ಪ್ರಧಾನ ವ್ಯವಸ್ಥಾಪಕ ಕೃಷ್ಣಭಗತ್ ಕರೆ ನೀಡಿದರು.
ನವದೆಹಲಿ ರಾಷ್ಟ್ರೀಯ ಸಫಾಯಿ ಕರ್ಮಚಾರಿ ಹಣಕಾಸು ಮತ್ತು ಅಭಿವೃದ್ಧಿ ನಿಗಮ (ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದಡಿ ಬರುವ ಭಾರತ ಸರ್ಕಾರ ಸ್ವಾಮ್ಯದ ಉದ್ದಿಮೆ), ಸಮಾಜ ಕಲ್ಯಾಣ ಇಲಾಖೆ, ರಾಜ್ಯ ಹಾಗೂ ಜಿಲ್ಲೆಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮ, ಮಹಾ ನಗರಪಾಲಿಕೆಗಳ ಸಂಯುಕ್ತಾಶ್ರಯದಲ್ಲಿ ನಗರದ ಬಾಲಭವನದಲ್ಲಿ ಸಫಾಯಿ ಕರ್ಮಚಾರಿಗಳು ಮತ್ತು ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್ಗಳಿಗಾಗಿ ಆಯೋಜಿಸಲಾಗಿದ್ದ ಅರಿವು ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿ, ಕೇಂದ್ರ ಸರ್ಕಾರದಿಂದ ಬ್ಯಾಂಕ್ ಮೂಲಕ ಸಫಾಯಿ ಕರ್ಮಚಾರಿಗಳಿಗೆ ದೊರೆಯಬಹುದಾದ ವಿವಿಧ ಯೋಜನೆ ಮತ್ತು ಸಾಲ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.
ನಿಗಮದ ರಾಜ್ಯ ವ್ಯವಸ್ಥಾಪಕ ನಿರ್ದೇಶಕ ಮಲ್ಲಿಕಾರ್ಜುನ ಮಾತನಾಡಿ ಈಗಾಗಲೇ 157 ಮ್ಯಾನುಯಲ್ ಸ್ಕ್ಯಾವೆಂಜೆರ್ಸ್ಗಳ ಖಾತೆಗೆ ತಲಾ 40 ಸಾವಿರ ರೂ.ಗಳಂತೆ ಹಣ ಜಮಾ ಮಾಡಲಾಗಿದೆ ಎಂದರು.
ಜಿಲ್ಲಾ ವ್ಯವಸ್ಥಾಪಕ ಮಂಜುನಾಥ್.ಆರ್. ಮಾತನಾಡಿ, ಈ ಕಾಯಕ್ರಮದಲ್ಲಿ ಅರ್ಜಿ ಪಡೆದು ಭರ್ತಿ ಮಾಡಿ ವಿಳಂಬ ಮಾಡದೇ ಸೂಕ್ತ ದಾಖಲಾತಿಗಳೊಂದಿಗೆ ಮೂರು ದಿನದೊಳಗೆ ಸಲ್ಲಿಸಿದಲ್ಲಿ ಲೀಡ್ ಬ್ಯಾಂಕ್ ಮೂಲಕ ಸಂಬಂಧಿಸಿದ ಬ್ಯಾಂಕುಗಳಿಗೆ ಕಳುಹಿಸಲಾಗುವುದು, ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಿದಲ್ಲಿ ಅರ್ಹರಿಗೆ ಸೌಲಭ್ಯ ದೊರೆಯಲಿದೆ ಎಂದು ಸಫಾಯಿ ಕರ್ಮಚಾರಿಗಳಿಗೆ ತಿಳಿಸಿದರು.
ಕರ್ನಾಟಕ ರಾಜ್ಯ ಸಫಾಯಿ ಅಭಿವೃದ್ಧಿ ನಿಗಮ ವ್ಯವಸ್ಥಾಪಕ ನಿರ್ದೇಶಕ ಮಲ್ಲಿಕಾರ್ಜುನ, ಸಮಾಜಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ, ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ ವ್ಯವಸ್ಥಾಪಕ ಪ್ರಕಾಶ್, ರಾಜ್ಯ ಜಾಗೃತಿ ದಳದ ಸದಸ್ಯ ಓಬಳೇಶ್, ಜಿಲ್ಲಾ ಜಾಗೃತಿ ಸದಸ್ಯ ಕದ್ರಪ್ಪ ಮತ್ತಿತರರು ಹಾಜರಿದ್ದರು.
Comments are closed.