ತುಮಕೂರು: ಪ್ರತಿಭಟನಾ ಸಭೆಯಲ್ಲಿ ಪಾಲ್ಗೊಳ್ಳಲು ನಗರಕ್ಕೆ ಆಗಮಿಸುತ್ತಿದ್ದ ಭಜರಂಗದಳ ಮುಖಂಡ ಪುತ್ತೂರಿನ ಮುರಳಿಕೃಷ್ಣ ಅಸಂತಡ್ಕ ಅವರನ್ನು ಪೊಲೀಸರು ಬಂಧಿಸಿದ ಕ್ರಮ ಖಂಡಿಸಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದ ಶಾಸಕ ಜಿ.ಬಿ.ಜ್ಯೋತಿಗಣೇಶ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಹೆಬ್ಬಾಕ ರವಿಶಂಕರ್ ಹಾಗೂ ಮುಖಂಡರನ್ನು ಪೊಲೀಸರು ಬಂಧಿಸಿ ವಶಕ್ಕೆ ಪಡೆದರು.
ಬುಧವಾರ ನಗರದ ಜಿಲ್ಲಾಧಿಕಾರಿಕಚೇರಿ ಬಳಿ ಭಯೋತ್ಪಾದನಾ ವಿರೋಧಿ ಹೋರಾಟ ಸಮಿತಿ ಪ್ರತಿಭಟನೆ ಹಮ್ಮಿಕೊಂಡಿತ್ತು, ಶಾಸಕ ಜಿ.ಬಿ.ಜ್ಯೋತಿಗಣೇಶ್ ಸೇರಿದಂತೆ ಬಿಜೆಪಿಯ ಮುಖಂಡರು ಭಾಗವಹಿಸಿದ್ದ ಈ ಸಭೆಯಲ್ಲಿ ಪಾಲ್ಗೊಳ್ಳಲು ಮಂಗಳೂರಿನ ಪುತ್ತೂರಿನಿಂದ ಆಗಮಿಸುತ್ತಿದ್ದ ಭಜರಂಗದಳ ರಾಜ್ಯ ಸಹ ಸಂಯೋಜಕ್ ಮುರಳಿಕೃಷ ಅಸಂತಡ್ಕ ಅವರನ್ನು ಪೊಲೀಸರು ಕುಣಿಗಲ್ ಬಳಿ ಬಂಧಿಸಿದ್ದರು, ಸಕಾರಣವಿಲ್ಲದೆ ಮುರಳಿಕೃಷ್ಣರನ್ನು ಬಂಧಿಸಿದ್ದನ್ನು ಖಂಡಿಸಿ ಪ್ರತಿಭಟನಾಕಾರರು ಸರ್ಕಾರ ಹಾಗೂ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಬಿಡುಗಡೆಗೆ ಒತ್ತಾಯಿಸಿದರು.
ರಾಜ್ಯದಲ್ಲಿ ಭಯೋತ್ಪಾದನಾ ಚಟುವಟಿಕೆ ಹೆಚ್ಚಾಗುತ್ತಿದೆ, ದೇಶವಿರೋಧ ಕೃತ್ಯ ವ್ಯಾಪಕವಾಗಿ ನಡೆಯುತ್ತಿವೆ, ಇವುಗಳನ್ನು ತಡೆಯಬೇಕಾಗಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರ ದೇಶ ದ್ರೋಹಿಗಳಿಗೆ ಕುಮ್ಮಕ್ಕು ನೀಡುತ್ತಾ ಪೋಷಿಸಿತ್ತಿದೆ ಎಂದು ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಶಾಸಕ ಜಿ.ಬಿ.ಜ್ಯೋತಿಗಣೇಶ್, ಭಜರಂಗದಳದ ಮುಖಂಡ ಮುರಳಿಕೃಷ್ಣರನ್ನು ಪೊಲೀಸರು ಬಂಧಿಸಿದ ಕ್ರಮಖಂಡನೀಯ, ಅವರನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.
ಪಾಕಿಸ್ತಾನ ಪರ ಘೋಷಣೆ ಕೂಗುವವರನ್ನು ವಿಧಾನಸೌಧದ ಒಳಗೆ ಬಿಡುತ್ತಾರೆ, ಅವರನ್ನು ಬಂಧಿಸಲು ಮೀನಾಮೇಷ ಎಣಿಸುವ ಪೊಲೀಸರು, ರಾಜ್ಯ ಕಾಂಗ್ರೆಸ್ ಸರ್ಕಾರ ಮುರಳಿಕೃಷ್ಣರನ್ನು ಬಂಧಿಸಿ ನಮ್ಮ ಪ್ರತಿಭಟನೆ ಹತ್ತಿಕ್ಕುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆಪಾದಿಸಿದರು.
ದೇಶ ವಿರೋಧಿಗಳಿಗೆ ಕಾಂಗ್ರೆಸ್ ಸರ್ಕಾರ ಮೃದು ಧೋರಣೆ ತಳೆದಿದೆ, ವೋಟಿನ ಓಲೈಕೆ ರಾಜಕಾರಣ ಮಾಡುತ್ತಿರುವ ಕಾಂಗ್ರೆಸ್ ನವರು ದೇಶ ದ್ರೋಹಿಗಳಿಗೆ ಕುಮ್ಮಕ್ಕು ನೀಡುತ್ತಾ ರಾಜ್ಯವನ್ನು ಭಯೋತ್ಪಾದಕರ ತಾಣ ಮಾಡಲು ಹೊರಟಿದ್ದಾರೆ, ಇದೇ ಕಾರಣಕ್ಕೆ ಬಾಂಬ್ ಬ್ಲಾಸ್ಟ್ ಪ್ರಕರಣಗಳು ರಾಜ್ಯದಲ್ಲಿ ಹೆಚ್ಚಾಗುತ್ತಿವೆ ಎಂದು ಟೀಕಿಸಿದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ಹೆಬ್ಬಾಕ ರವಿಶಂಕರ್ ಮಾತನಾಡಿ, ಇದು ಭಾರತೀಯಜನತಾ ಪಕ್ಷದ ಸಭೆಯಲ್ಲ, ರಾಜ್ಯದಲ್ಲಿ ಹೆಚ್ಚಾಗುತ್ತಿರುವ ದೇಶ ದ್ರೋಹ, ಭಯೋತ್ಪಾದನ ಚಟುವಟಿಕೆ ಖಂಡಿಸಿ ಸಮಾನ ಮನಸ್ಕರು ಆಯೋಜಿಸಿರುವ ಸಭೆ, ಹಿಂದೂ ಕಾರ್ಯಕರ್ತ ಮುರಳಿಕೃಷ್ಣ ಅವರು ಈ ಸಭೆಯಲ್ಲಿಪಾಲ್ಗೊಳ್ಳಲು ಬರುತ್ತಿದ್ದರು, ಅವರು ಜಿಲ್ಲೆಗೆ ಪ್ರವೇಶಿಸುತ್ತಿದಂತೆ ಬಂಧಿಸಲಾಗಿದೆ, ಅವರ ವಿರುದ್ಧ ಯಾವುದೇ ಅಪರಾಧ ಪ್ರಕರಣಗಳಿಲ್ಲ, ಆದರೂ ವಿನಾಕಾರಣ ಬಂಧಿಸಿ ಸಭೆಗೆ ಬಾರದಂತೆ ತಡೆದಿದ್ದಾರೆ ಎಂದು ದೂರಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಒಂದಲ್ಲಾ ಒಂದುರೀತಿಯಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ದೌರ್ಜನ್ಯ ನಡೆಯುತ್ತಲೇ ಇವೆ, ಸರ್ಕಾರದ ಹಿಂದೂ ವಿರೋಧಿ ಧೋರಣೆ ಸಂವಿಧಾನ, ಪ್ರಜಾಪ್ರಭುತ್ವದ ಆಶಯಗಳಿಗೆ ಮಾಡುತ್ತಿರುವ ಅಪಚಾರ, ಅಂಬೇಡ್ಕರ್ ಅವರ ಆಶಯಗಳಿಗೆ ವಿರೋಧಿಯಾಗಿದೆ ಎಂದರು.
ರಾಜ್ಯ ಬಿಜೆಪಿ ಕಾರ್ಯದರ್ಶಿ ವಿನಯ್ ಬಿದರೆ, ರಾಜ್ಯರೈತ ಮೋರ್ಚಾ ಉಪಾಧ್ಯಕ್ಷ ಬ್ಯಾಟರಂಗೇಗೌಡ ಮಾತನಾಡಿ, ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ವ್ಯಾಪಕ ಭ್ರಷ್ಟಾಚಾರದ ಜೊತೆಗೆ ದೇಶ ವಿದ್ರೋಹಿ ಚಟುವಟಿಕೆಗಳು ಅವ್ಯಾಹತವಾಗಿ ನಡೆಯುತ್ತಿವೆ, ನಿಯಂತ್ರಿಸ ಬೇಕಾದ ಸರ್ಕಾರ ಒಂದು ಕೋಮಿನ ಮತ ಓಲೈಕೆಗಾಗಿ ಅಂತಹವರಿಗೆ ಕುಮ್ಮಕ್ಕು ನೀಡುತ್ತಿದೆ, ಹಿಂದೂ ಕಾರ್ಯಕರ್ತರ ಮೇಲೆ ಕಾಂಗ್ರೆಸ್ ನವರಿಗೆ ಯಾಕಿಷ್ಟು ಆಕ್ರೋಶ? ವಾಕ್ ಸ್ವಾತಂತ್ರ್ಯ ಎಲ್ಲರ ಹಕ್ಕು ಎಂಬ ಅಂಬೇಡ್ಕರ್ ಅವರ ಆಶಯಕ್ಕೆ ವಿರುದ್ಧವಾಗಿ ಸರ್ಕಾರ ನಡೆದುಕೊಳ್ಳುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮುಖಂಡರಾದ ಎಸ್.ಶಿವಪ್ರಸಾದ್, ವೈ.ಹೆಚ್.ಹುಚ್ಚಯ್ಯ, ಹೆಚ್.ಎನ್.ಚಂದ್ರಶೇಖರ್, ಹೆಚ್.ಟಿ.ಭೈರಪ್ಪ, ಭೈರಣ್ಣ, ಜಿ.ಕೆ.ಶ್ರೀನಿವಾಸ್, ಟಿ.ಆರ್.ಸದಾಶಿವಯ್ಯ, ರುದ್ರೇಶ್, ಹನುಮಂತರಾಜು, ನವ ಚೇತನ್, ಹೆಚ್.ಎಂ.ರವೀಶಯ್ಯ, ಸಂದೀಪ್ಗೌಡ, ಜಗದೀಶ್, ಬೆಳ್ಳಿ ಲೋಕೇಶ್, ಬಾವಿಕಟ್ಟೆ ನಾಗಣ್ಣ, ಸಿ.ಎನ್.ರಮೇಶ್, ವಿಷ್ಣುವರ್ಧನ್, ಸತ್ಯಮಂಗಲ ಜಗದೀಶ್, ಗಣೇಶ್, ಲತಾ ಬಾಬು, ಶಕುಂತಲಾ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
Comments are closed.