ಎತ್ತಿನ ಗಾಡಿಯಲ್ಲಿ ಆಗಮಿಸಿ ಎಸ್ ಪಿ ಎಂ ನಾಮಿನೇಷನ್

ಕಾಂಗ್ರೆಸ್ ಅಭ್ಯರ್ಥಿಗೆ ಸಚಿವರಾದ ಪರಮೇಶ್ವರ್, ರಾಜಣ್ಣ ಸಾಥ್

18

Get real time updates directly on you device, subscribe now.


ತುಮಕೂರು: ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿ ಕಾಂಗ್ರೆಸ್ ನ ಎಸ್.ಪಿ.ಮುದ್ದಹನುಮೇ ಗೌಡರ ಅಪಾರ ಜನಸ್ತೋಮದೊಂದಿಗೆ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ತಮ್ಮ ಉಮೇದುವಾರಿಕೆ ಸಲ್ಲಿಸಿದರು.
ನಾಮಪತ್ರ ಸಲ್ಲಿಕೆ ಮೆರವಣಿಗೆಗೆ ವಿಶೇಷವಾಗಿ ವಾಹನ ಸಿದ್ಧಗೊಂಡಿದ್ದರೂ ಕೊನೆಯ ಗಳಿಗೆಯಲ್ಲಿ ಚಿಕ್ಕಣ್ಣಸ್ವಾಮಿ ದೇವಾಲಯದ ಧರ್ಮದರ್ಶಿ ಪಾಪಣ್ಣ ಅವರು ಸಾರಥಿಯಾಗಿ, ತಾವು ಸಾಕಿರುವ ಎತ್ತುಗಳಿಗೆ ಟೈರ್ ಗಾಡಿ ಹೂಡಿ, ಅದರಲ್ಲಿ ಲೋಕಸಭಾ ಅಭ್ಯರ್ಥಿ ಎಸ್.ಪಿ.ಮುದ್ದ ಹನುಮೇ ಗೌಡ, ಡಾ.ಜಿ.ಪರಮೇಶ್ವರ್, ಕೆ.ಎನ್.ರಾಜಣ್ಣ, ಎಸ್, ಆರ್.ಶ್ರೀನಿವಾಸ್, ಎಐಸಿಸಿ ಕಾರ್ಯದರ್ಶಿ ಮಯೂರ ಜಯಕುಮಾರ್, ಮಾಜಿ ಸಚಿವ ವೆಂಕಟರವಣಪ್ಪ, ಕೆ.ಎಸ್.ಕಿರಣ್ ಕುಮಾರ್ ಸೇರಿದಂತೆ ಹಲವರು ಟೌನ್ ಹಾಲ್ ನಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಅಶೋಕ ರಸ್ತೆ ಮೂಲಕ ಮೆರವಣಿಗೆ ನಡೆಸಿ ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಕೆಗೂ ಮುನ್ನ ಗೃಹ ಸಚಿವ ಡಾ.ಜಿಪರಮೇಶ್ವರ್ ಮಾತನಾಡಿ, ಸಂವಿಧಾನಿಕ ಸಂಸ್ಥೆಗಳಾದ ಐಟಿ, ಇಡಿ, ಸಿಪಿಐ ಮೂಲಕ ವಿರೋಧ ಪಕ್ಷಗಳನ್ನು ಧಮನ ಮಾಡಿ ಸರ್ವಾಧಿಕಾರಿ ಗಳಂತೆ ವರ್ತಿಸುತ್ತಿರುವ ಬಿಜೆಪಿ ಸೋಲಿಸುವ ಮೂಲಕ ಅಪಾಯದಲ್ಲಿರುವ ಪ್ರಜಾ ಪ್ರಭುತ್ರವ ರಕ್ಷಿಸಬೇಕಾಗಿದೆ ಎಂದರು.

ಪದೇ ಪದೇ ಸಂವಿಧಾನ ಬದಲಾವಣೆಯ ವಿಚಾರಗಳನ್ನು ಬಿಜೆಪಿ ಸಂಸದರು ಮಾತನಾಡುತ್ತಿದ್ದರು ಮೌನ ವಹಿಸಿ ಅವರ ಮಾತುಗಳಿಗೆ ಕುಮ್ಮಕ್ಕು ನೀಡುತ್ತಿರುವ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾದ ಸಂವಿಧಾನಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ, ಹಾಗಾಗಿ ಪ್ರಪಂಚದಲ್ಲಿಯೇ ಅತ್ಯಂತ ಶ್ರೇಷ್ಠವೆನಿಸಿಕೊಂಡಿರುವ ಭಾರತದ ಸಂವಿಧಾನ ಉಳಿಸಿಕೊಳ್ಳಲು ನಾವೆಲ್ಲರೂ ಬಿಜೆಪಿ ಸೋಲಿಸುವುದು ಅನಿವಾರ್ಯವಾಗಿದೆ ಎಂದರು.

ಎಲ್ಲಿಂದಲೋ ಬಂದ ವಿ.ಸೋಮಣ್ಣ ಅವರಿಗೆ ಮತ ಹಾಕುವುದರಿಂದ ಯಾವುದೇ ಪ್ರಯೋಜನವಿಲ್ಲ, ಹಾಲಿ ಸಂಸದ ಜಿ.ಎಸ್.ಬಸವರಾಜು ಸೇರಿದಂತೆ ರಾಜ್ಯದಿಂದ ಆರಿಸಿ ಹೋದ 26 ಬಿಜೆಪಿ ಸಂಸದರು ಒಂದು ದಿನವೂ ರಾಜ್ಯದ ನೆಲ,ಜಲ, ಭಾಷೆಯ ವಿಚಾರದಲ್ಲಿ ಧ್ವನಿ ಎತ್ತಿ ಮಾತನಾಡಲಿಲ್ಲ, ಅವರ ಹಾದಿಯಲ್ಲಿಯೇ ಇರುವ ವಿ.ಸೋಮಣ್ಣ ಅವರಿಂದ ಏನನ್ನಾದರೂ ನಿರೀಕ್ಷೆ ಮಾಡಲು ಸಾಧ್ಯವೆ ಎಂದು ಡಾ.ಜಿ.ಪರಮೇಶ್ವರ್ ಪ್ರಶ್ನಿಸಿದರು.
ಸಹಕಾರ ಸಚಿವ ಕೆ.ಎನ್.ರಾಜಣ್ಣ ಮಾತನಾಡಿ, ಹತ್ತು ವರ್ಷಗಳ ಕಾಲ ಡಿಸಿಸಿ ಅಧ್ಯಕ್ಷರಾಗಿ, ಮೂರು ಬಾರಿ ಶಾಸಕರಾಗಿ, ಸಂಸದರಾಗಿ ಕೆಲಸ ಮಾಡಿರುವ ಎಸ್.ಪಿ.ಮುದ್ದಹನುಮೇ ಗೌಡರು ಸರಳ ಸಜ್ಜನಿಕೆಗೆ ಹೆಸರಾದವರು, ಅವರನ್ನು ಈ ಬಾರಿ ಗೆಲ್ಲಿಸುವ ಜವಾಬ್ದಾರಿ ನಮ್ಮ ನಿಮ್ಮೆಲ್ಲರ ಮೇಲಿದೆ, ಬಿಜೆಪಿ- ಜೆಡಿಎಸ್ ದು ಅಪವಿತ್ರ ಮೈತ್ರಿ, ಈ ಹಿಂದೆ ಎರಡು ಪಕ್ಷಗಳ ನಾಯಕರು ಪರಸ್ವರರ ಕುರಿತು ಯಾವ ರೀತಿ ಮಾತನಾಡಿಕೊಂಡಿದ್ದಾರೆ ಎಂಬುದನ್ನು ಒಮ್ಮೆ ಅವಲೋಕಿಸಿದರೆ ಇದು ಸ್ವಾರ್ಥ ಕುಟುಂಬ ರಾಜಕಾರಣಕ್ಕೆ, ದೇವೇಗೌಡರು ತಮ್ಮ ಕುಟುಂಬದಲ್ಲಿಯೇ ಅಧಿಕಾರ ಉಳಿಯಬೇಕೆಂಬ ಕಾರಣಕ್ಕೆ ಮಾಡಿಕೊಂಡ ಒಪ್ಪಂದವಾಗಿದೆ, ಮಗ, ಮೊಮ್ಮಗ, ಅಳಿಯನಿಗಾಗಿ ದೇವೇಗೌಡರು ಈ ಇಳಿವಯಸ್ಸಿನಲ್ಲಿ ಸುತ್ತುತ್ತಿರುವುದನ್ನು ನೋಡಿದರೆ ನಿಜಕ್ಕೂ ನೋವಾಗುತ್ತದೆ, ಅಧಿಕಾರದ ಆಸೆಗೆ ಅವರ ಮಕ್ಕಳು, ಮೊಮ್ಮಕ್ಕಳು ಸಾಯವ ಕಾಲದಲ್ಲಿಯೂ ಅವರಿಗೆ ನೆಮ್ಮದಿ ಕೊಡಲಿಲ್ಲವಲ್ಲ ಎಂದು ಅನುಕಂಪ ಮೂಡುತ್ತದೆ ಎಂದರು.

ಕಾಂಗ್ರೆಸ್ ಪಕ್ಷದ ಲೋಕಸಭಾ ಅಭ್ಯರ್ಥಿ ಎಸ್.ಪಿ.ಮುದ್ದಹನುಮೇಗೌಡ ಮಾತನಾಡಿ, 2014 ರಿಂದ 2019ರ ವರೆಗೆ ಐದು ವರ್ಷಗಳ ಕಾಲ ಸಂಸದನಾಗಿ ಈ ಜಿಲ್ಲೆ, ರಾಜ್ಯದ ಹಲವಾರು ವಿಚಾರಗಳನ್ನು ಸಂಸತ್ತಿನಲ್ಲಿ ಪ್ರಾಸ್ತಾಪಿಸುವ ಮೂಲಕ ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಹುಡುಕುವ ಪ್ರಯತ್ನ ನಡೆಸಿದ್ದೇನೆ, ವಿಶ್ವಸಂಸ್ಥೆಯಲ್ಲಿ ಭಾರತವನ್ನು ಪ್ರತಿನಿಧಿಸುವ ಮೂಲಕ ಜಿಲ್ಲೆಗೆ ಕೀರ್ತಿ ತರುವ ಕೆಲಸ ಮಾಡಿದ್ದೇನೆ, ರಾಜ್ಯದ ನೆಲ, ಜಲ, ಭಾಷೆ, ಕೈಗಾರಿಕೆ, ರೈತರ ಸಮಸ್ಯೆ, ಕೊಬ್ಬರಿ ಸಮಸ್ಯೆ ಕುರಿತು ಅಧಿವೇಶನದಲ್ಲಿ ಚರ್ಚಿಸಿ, ಪರಿಹಾರ ದೊರಕಿಸುವ ಪ್ರಯತ್ನ ನಡೆಸಿದ್ದು, ಮುಂದೆ ಜನತೆ ಅವಕಾಶ ಮಾಡಿಕೊಟ್ಟರೆ ಜಿಲ್ಲೆಯ ಜಲ್ವಂತ ಸಮಸ್ಯೆಗಳಿಗೆ ಪರಿಹಾರ ಕಂಡು ಹಿಡಿಯಲು ಪಾರ್ಲಿಮೆಂಟಿನ ಒಳ, ಹೊರಗೆ ಪ್ರಯತ್ನಿಸುವುದಾಗಿ ಭರವಸೆ ನೀಡಿದರು.

ಗುಬ್ಬಿ ಶಾಸಕ ಹಾಗೂ ಕೆ ಎಸ್ ಆರ್ ಟಿ ಸಿ ಅಧ್ಯಕ್ಷ ಎಸ್.ಆರ್.ಶ್ರೀನಿವಾಸ್, ಮಾಜಿ ಶಾಸಕರಾದ ಡಿ.ಸಿ.ಗೌರಿಶಂಕರ್, ವೆಂಕಟರಮಣಪ್ಪ, ಎಸ್.ಷಫಿ ಅಹಮದ್,ಬೆಮೆಲ್ ಕಾಂತರಾಜು, ಕೆ.ಎಸ್.ಕಿರಣ್ ಕುಮಾರ್, ಎಐಸಿಸಿ ಕಾರ್ಯದರ್ಶಿ ಮಯೂರು ಜಯಕುಮಾರ್ ರಾಜ್ಯ ವಕ್ತಾರ ನಿಕೇತ್ ರಾಜ್ ಮೌರ್ಯ ಮಾತನಾಡಿದರು, ಮಾಜಿ ಶಾಸಕರಾದ ಡಾ.ರಫಿಕ್ ಅಹಮದ್, ಗಂಗಹನುಮಯ್ಯ, ಇಕ್ಬಾಲ್ ಅಹಮದ್, ಜಿಪಂ ಮಾಜಿ ಅಧ್ಯಕ್ಷೆ ಶಾಂತಲ ರಾಜಣ್ಣ, ಸದಸ್ಯರಾದ ರಾಧಾ ದೇವರಾಜು, ಮಾಜಿ ಮೇಯರ್ ಗಳಾದ ಪ್ರಭಾವತಿ, ಫರ್ಹಾನ ಬೇಗಂ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷ ಗೀತಾ ರಾಜಣ್ಣ ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!