ಆದ್ಯತೆ ಮೇರೆಗೆ ನೀರಿನ ಸಮಸ್ಯೆ ಬಗೆಹರಿಸಿ: ಸಚಿವ ಜೆ.ಸಿ.ಮಾಧುಸ್ವಾಮಿ

ಕುಡಿವ ನೀರಿಗೆ ತೊಂದರೆಯಾಗದಂತೆ ನೋಡಿಕೊಳ್ಳಿ

553

Get real time updates directly on you device, subscribe now.

ತುಮಕೂರು: ಬೇಸಿಗೆ ಕಾಲದಲ್ಲಿ ನೀರಿನ ಸಮಸ್ಯೆ ತಲೆದೋರದಂತೆ ಜಿಲ್ಲೆಯಲ್ಲಿ ಆದ್ಯತೆ ಮೇರೆಗೆ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅಧಿಕಾರಿಗಳಿಗೆ ನಿರ್ದೇಶಿಸಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕೆಡಿಪಿ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಗ್ರಾಮ ಪಂಚಾಯತಿಯಲ್ಲಿ ಕುಡಿಯುವ ನೀರಿಗಾಗಿ ಮೀಸಲಿಟ್ಟ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಬೇಕು, ಓವರ್ ಹೆಡ್ ಟ್ಯಾಂಕ್ಗಳ ಮೂಲಕ ನೀರು ಪೂರೈಕೆಗೆ ಒತ್ತು ಕೊಡಬೇಕು, ನರೇಗಾ ಯೋಜನೆಯಡಿ ಸಂಪ್ಗಳನ್ನು ನಿರ್ಮಿಸಿ ಕುಡಿಯುವ ನೀರಿನ ಪೂರೈಕೆ ಮಾಡಬೇಕು, ಒಟ್ಟಾರೆ ಜಿಲ್ಲೆಯಾದ್ಯಂತ ಅದರಲ್ಲೂ ಗ್ರಾಮೀಣ ಪ್ರದೇಶಗಳಲ್ಲಿ ನೀರಿನ ಸಮಸ್ಯೆಯಾಗದಂತೆ ಕ್ರಮಕೈಗೊಳ್ಳಬೇಕು ಎಂದು ಸೂಚಿಸಿದರು.
ಚಿಕ್ಕನಾಯಕನಹಳ್ಳಿ ಸೇರಿದಂತೆ ಜಿಲ್ಲೆಯ ಯಾವ ತಾಲೂಕಿನಲ್ಲಿಯೂ ಗ್ರಾಮ ವಿಕಾಸ ಯೋಜನೆ ಪ್ರಗತಿ ಕಂಡಿಲ್ಲ. ಹಾಗಾಗಿ ಯೋಜನೆಗೆ ಮೀಸಲಾಗಿರುವ ಪೂರ್ಣ ಪ್ರಮಾಣದ ಅನುದಾನ ಬಳಸಿ ಶೇ.100ರಷ್ಟು ಗುರಿ ಸಾಧಿಸಬೇಕು ಎಂದು ತಿಳಿಸಿದರು.
ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ಗಳು ತಾಲೂಕುವಾರು ಜಿಲ್ಲಾಭಿವೃದ್ಧಿಗೆ ಪೂರಕವಾದ ಮ್ಯಾಪಿಂಗ್ ರೂಪುರೇಷೆ ತಯಾರಿಸಬೇಕು. ಇದರಿಂದ ಆದ್ಯತೆ ಮೇರೆಯಲ್ಲಿ ಅಭಿವೃದ್ಧಿ ಕಾಮಗಾರಿಗೆ ಒತ್ತು ಕೊಡಲು ಸುಲಭಾ ಸಾಧ್ಯವಾಗುತ್ತದೆ. ಮುಂದಿನ ಕೆಡಿಪಿ ಸಭೆಯೊಳಗೆ ಮ್ಯಾಪಿಂಗ್ ತಯಾರಿಸುವಂತೆ ಹೇಳಿದರು.
ಜಿಲ್ಲೆಯಲ್ಲಿ ಹೊಸಬಡಾವಣೆ ನಿರ್ಮಾಣ ಮಾಡುವಾಗ ಸಿಎ ಸೈಟ್ನಲ್ಲಿ ಸಮುದಾಯ ಭವನಗಳಿಗೆ ಜಾಗ ಮೀಸಲಿಡುವಂತೆ ಎಲ್ಲಾ ನಗರ, ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳಿಗೆ ಸೂಚನೆ ನೀಡುವ ಮೂಲಕ ಸಮುದಾಯ ಭವನ ನಿರ್ಮಾಣಕ್ಕೆ ಅಡಚಣೆಯಾಗಿರುವ ಜಾಗದ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರಿಗೆ ಸೂಚನೆ ನೀಡಿದರು.
ಗ್ರಾಮೀಣ ವಸತಿ ಯೋಜನೆಗಳಡಿ 2010- 11ನೇ ಸಾಲಿನಿಂದ ಬಾಕಿ ಉಳಿದಿರುವ ಮನೆಗಳನ್ನು ಶೀಘ್ರ ಪೂರ್ಣಗೊಳಿಸಬೇಕು. 2011- 15ನೇ ಸಾಲಿನಲ್ಲಿ ವಸತಿ ಸೌಲಭ್ಯಕ್ಕೆ ಆಯ್ಕೆಯಾದ ಫಲಾನುಭವಿಗಳ ಪೈಕಿ ಈವರೆಗೂ ವಸತಿ ನಿರ್ಮಿಸಿಕೊಳ್ಳದವರ ಫಲಾನುಭವಿಗಳಿಗೆ ನೋಟಿಸ್ ನೀಡಬೇಕು, ಅಲ್ಲದೆ ಪೂರ್ಣವಾಗಿ ವಸತಿ ನಿರ್ಮಾಣ ಪ್ರಕ್ರಿಯೆ ಆರಂಭಿಸದ ಫಲಾನುಭವಿಗಳ ಮಂಜೂರಾತಿಯನ್ನು ರದ್ದುಗೊಳಿಸಿ ಪ್ರಸಕ್ತ ಸಾಲಿನ ಆಯ್ಕೆಯಲ್ಲಿ ಆದ್ಯತೆ ಕೊಡಬೇಕು ಎಂದರಲ್ಲದೆ, ವಸತಿ ರಹಿತ ಅಲೆಮಾರಿ ಜನಾಂಗದವರಿಗೆ ವಸತಿ ಕಟ್ಟಿಕೊಳ್ಳಲು ನಿವೇಶನ ಕಲ್ಪಿಸಬೇಕು, ನಿವೇಶನ ರಹಿತ, ವಸತಿ ರಹಿತ ಫಲಾನುಭವಿಗಳ ಪಟ್ಟಿಯನ್ನು ಪ್ರತ್ಯೇಕವಾಗಿ ಪಂಚಾಯಿತಿವಾರು ತಯಾರಿಸಿ ನಿವೇಶನ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶಿಸಿದರು.
ಬೇಸಿಗೆ ಅವಧಿಯಲ್ಲಿ ವಿದ್ಯುತ್ ಸಮಸ್ಯೆಯಾಗದಂತೆ ಸಮರ್ಪಕವಾಗಿ ವಿದ್ಯುತ್ ಪೂರೈಕೆ ಮಾಡಬೇಕು, ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿರುವ ಫಲಾನುಭವಿಗಳ ಪಟ್ಟಿ ತಾಲೂಕುವಾರು ಮತ್ತು ಸ್ಟೇಷನ್ವಾರು ಮಾಹಿತಿ ಮತ್ತು ಜಿಲ್ಲೆಯಲ್ಲಿ ಸರಬರಾಜಾಗುತ್ತಿರುವ ವಿದ್ಯುತ್ ಪೂರೈಕೆಯ ಮಾಹಿತಿಯನ್ನು ಕೆಡಿಪಿ ಸಭೆಗೆ ಒದಗಿಸುವಂತೆ ಬೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯಲ್ಲಿ ಎಣ್ಣೆ ಕಾಳು ಬೀಜ ಉತ್ಪಾದನೆ ಶೂನ್ಯ ಸ್ಥಿತಿಯತ್ತ ಸಾಗುತ್ತಿದ್ದು, ಕಡಿಮೆ ಪ್ರಮಾಣದ ನೀರಿನಲ್ಲೂ ಬೆಳೆಯಬಹುದಾದ ಎಳ್ಳು, ಸೂರ್ಯಕಾಂತಿ, ಶೇಂಗಾ ಸೇರಿದಂತೆ ಇತರೆ ಎಣ್ಣೆಕಾಳು ಬೆಳೆಗಳನ್ನು ಬೆಳೆಯುವುದಕ್ಕೆ ರೈತರನ್ನು ಉತ್ತೇಜನ ನೀಡಬೇಕು. ಗುಣಮಟ್ಟ ಬಿತ್ತನೆ ಬೀಜ ದಾಸ್ತಾನು ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ನರೇಗಾ ಯೋಜನೆಯಡಿ ಪಿಆರ್ಇಡಿ ವಿಭಾಗದಿಂದ ಕೈಗೊಂಡ ಕಾಮಗಾರಿಗಳು ಪ್ರಗತಿಯಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಸಚಿವರು, ನರೇಗಾ ಯೋಜನೆಯಡಿ ಪ್ರಗತಿಯಲ್ಲಿರುವ ಅಂಗನವಾಡಿ ಕಟ್ಟಡ ಕಾಮಗಾರಿಗಳನ್ನು ಶೀಘ್ರ ಮುಗಿಸುವುದರ ಜೊತೆಗೆ ಉಳಿದ ಇತರೆ ಎಲ್ಲಾ ಇಲಾಖೆಗಳ ಪ್ರಗತಿ ಕಾರ್ಯಗಳು ನೂರಕ್ಕೆ ನೂರರಷ್ಟು ಅನುಷ್ಠಾನಗೊಳ್ಳಬೇಕು. ಅಧಿಕಾರಿಗಳು ಕಾರ್ಯ ವ್ಯಾಪ್ತಿಯ ಬಗ್ಗೆ ಕನಿಷ್ಟ ಜ್ಞಾನ ಹೊಂದಿರಬೇಕು ಎಂದರಲ್ಲದೆ, ಕೆಡಿಪಿ ಸಭೆಗೆ ಸಮರ್ಪಕ ಮಾಹಿತಿ ಒದಗಿಸಬೇಕು ಎಂದು ಇಲಾಖಾವಾರು ಅಧಿಕಾರಿಗಳಿಗೆ ನಿರ್ದೇಶಿಸಿದರು.
ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ವಿದ್ಯಾಕುಮಾರಿ ಮಾತನಾಡಿ, ಸಚಿವರು ನೀಡಿರುವ ಎಲ್ಲಾ ನಿರ್ದೇಶನಗಳನ್ನು ಪಾಲಿಸಬೇಕು, ಕೆಡಿಪಿ ಸಭೆಗೆ ಸಚಿವರ ನಿರ್ದೇಶನದಂತೆ ಸಮರ್ಪಕ ಮಾಹಿತಿ ಒದಗಿಸಬೇಕು ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಟಿ.ಕೆ. ರಮೇಶ್ ಸೇರಿದಂತೆ ಮತ್ತಿತರ ಇಲಾಖಾವಾರು ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.
ಸಭೆ ಬಳಿಕ ಸಚಿವ ಜೆ.ಸಿ. ಮಾಸ್ವಾಮಿ ಅವರು, 2019- 20 ತುಮಕೂರು ಜಿಲ್ಲಾ ಅಂಕಿ ಅಂಶಗಳ ನೋಟ ಪುಸ್ತಕ ಅನಾವರಣಗೊಳಿಸಿದರು. ಈ ವೇಳೆ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ರಂಗಸ್ವಾಮಿ ಡಿ. ಮತ್ತಿತರರಿದ್ದರು.

Get real time updates directly on you device, subscribe now.

Comments are closed.

error: Content is protected !!