ರೈತರ ಖಾತೆಗೆ 74 ಕೋಟಿ ರೂ. ಬರ ಪರಿಹಾರ

32

Get real time updates directly on you device, subscribe now.


ತುಮಕೂರು: ಜಿಲ್ಲೆಯ 132332 ರೈತರ ಖಾತೆಗೆ 74 ಕೋಟಿ ರೂ. ಬರ ಪರಿಹಾರ ಹಣ ಜಮೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಕೆಸ್ವಾನ್ ಸಭಾಂಗಣದಲ್ಲಿ ತಾಲೂಕು ಅಧಿಕಾರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ಸಭೆ ನಡೆಸಿ ಮಾತನಾಡಿ, ಜಿಲ್ಲೆಯ ಚಿಕ್ಕನಾಯಕನ ಹಳ್ಳಿ ತಾಲೂಕಿನ 15975 ರೈತರಿಗೆ 92823283 ರೂ., ಗುಬ್ಬಿಯ 8234 ರೈತರಿಗೆ 41029295 ರೂ., ಕೊರಟಗೆರೆ- 12144 ರೈತರಿಗೆ 72813925 ರೂ., ಕುಣಿಗಲ್- 19022 ರೈತರಿಗೆ 96453201 ರೂ., ಮಧುಗಿರಿ- 15548 ರೈತರಿಗೆ 89783195 ರೂ., ಪಾವಗಡ- 5641 ರೈತರಿಗೆ 42583561 ರೂ., ಶಿರಾ- 17013 ರೈತರಿಗೆ 111928237 ರೂ., ತಿಪಟೂರು- 14955 ರೈತರಿಗೆ 77865493 ರೂ., ತುಮಕೂರು- 11004 ರೈತರಿಗೆ 52055965 ರೂ. ಹಾಗೂ ತುರುವೇಕೆರೆ ತಾಲೂಕಿನ 12796 ರೈತರಿಗೆ 64809796 ರೂ. ಸೇರಿದಂತೆ 132332 ರೈತರಿಗೆ 742145951 ರೂ. ಬರ ಪರಿಹಾರ ವಿತರಿಸಲಾಗಿದೆ ಎಂದು ಮಾಹಿತಿ ನೀಡಿದರು.

ಬರ ಪರಿಹಾರ ಹಣವನ್ನು ಖಾತೆಗೆ ಜಮೆ ಮಾಡಿದ ರೈತರ ಪಟ್ಟಿಯ ವಿವರವನ್ನು ಜಿಲ್ಲಾಧಿಕಾರಿಗಳ ಕಚೇರಿ ಜಾಲತಾಣ, ಎಲ್ಲಾ ತಾಲೂಕು ಕಚೇರಿ, ಗ್ರಾಮ ಪಂಚಾಯತಿ ಹಾಗೂ ರೈತ ಸಂಪರ್ಕ ಕೇಂದ್ರಗಳಲ್ಲಿ ಪ್ರಚುರಪಡಿಸಬೇಕೆಂದು ಸೂಚನೆ ನೀಡಿದರು. ಖಾತೆಗೆ ಬರ ಪರಿಹಾರದ ಹಣ ಜಮೆಯಾಗದ ರೈತರು ಸಮೀಪದ ರೈತ ಸಂಪರ್ಕ ಕೇಂದ್ರಗಳಿಗೆ ಫ್ರೂಟ್ ಐಡಿ ಹಾಗೂ ಆಧಾರ್ ಸಂಖ್ಯೆಯೊಂದಿಗೆ ಭೇಟಿ ನೀಡಿ ಪರಿಶೀಲಿಸಿಕೊಳ್ಳಬೇಕು ಎಂದು ತಿಳಿಸಿದರು.

ಬರ ಪರಿಹಾರ ಹಾಗೂ ಪ್ರಕೃತಿ ವಿಕೋಪಕ್ಕೆ ಸಂಬಂಧಿಸಿದ ಸಮಸ್ಯೆಯ ಅಹವಾಲು ಸಲ್ಲಿಸಲು ಜಿಲ್ಲೆಯಲ್ಲಿ ಸ್ಥಾಪಿಸಿರುವ 18 ಮೇವು ಬ್ಯಾಂಕುಗಳಲ್ಲಿಯೂ ಸಹಾಯವಾಣಿ ಕೇಂದ್ರ ತೆರೆಯಬೇಕು, ಸ್ವೀಕರಿಸಿದ ಅಹವಾಲುಗಳಿಗೆ ಅಧಿಕಾರಿಗಳು ಆದ್ಯತೆ ಮೇಲೆ ಸ್ಪಂದಿಸಿ ಪರಿಹರಿಸಲು ಕ್ರಮ ವಹಿಸಬೇಕೆಂದರಲ್ಲದೆ ಮೇವು ಬ್ಯಾಂಕ್ ಗೆ ಖರೀದಿಸಿದ ಮೇವಿನ ಬಿಲ್ ಮೊತ್ತವನ್ನು ಸರಬರಾಜುದಾರರಿಗೆ ಆದಷ್ಟು ಬೇಗ ಪಾವತಿಸಬೇಕೆಂದು ಸೂಚಿಸಿದರು.
ಆಶ್ರಯ ವಸತಿ ಯೋಜನೆ ಪ್ರಗತಿ ಪರಿಶೀಲಿಸಿದ ಅವರು ಜಿಲ್ಲೆಯಲ್ಲಿ ಆಶ್ರಯ ವಸತಿ ಯೋಜನೆಯಡಿ ನಿವೇಶನ ರಹಿತರಿಗೆ ವಸತಿ ಸೌಲಭ್ಯ ಕಲ್ಪಿಸಲು ಈಗಾಗಲೇ ಜಿಲ್ಲೆಯಲ್ಲಿ 1728- 19 ಎಕರೆ ಜಮೀನು ಗುರುತಿಸಿ ಜಿಲ್ಲಾಧಿಕಾರಿಗಳ ಕಚೇರಿಯಿಂದ ಮಂಜೂರಾತಿ ಆದೇಶ ನೀಡಲಾಗಿದ್ದು, 1199.19 ಎಕರೆ ಪ್ರದೇಶವನ್ನು ಗ್ರಾಮ ಪಂಚಾಯತಿಗಳಿಗೆ ಹಸ್ತಾಂತರಿಸಲಾಗಿದೆ, ಹಸ್ತಾಂತರವಾದ ಜಮೀನನ್ನು ಬಡಾವಣೆಗಳನ್ನಾಗಿ ನಿರ್ಮಿಸಲು ಸಂಬಂಧಿಸಿದ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ನಗರ ಯೋಜನಾ ಪ್ರಾಧಿಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕೆಂದು ನಿರ್ದೇಶನ ನೀಡಿದರು.

ಆಧಾರ್ ಲಿಂಕಿಂಗ್, ಸೀಡಿಂಗ್, ಜನನ ಮತ್ತು ಮರಣ ಪ್ರಮಾಣ ಪತ್ರ, ಸಕಾಲ, ಭಗರ್ ಹುಕುಂ, 3 ಮತ್ತು 9 ತಿದ್ದುಪಡಿ, ಭೂಮಿ ಪೆಂಡೆನ್ಸಿ, ಭೂ ಪರಿವರ್ತನೆ, ಸಿಎಂ ಹಾಗೂ ಜಿಲ್ಲಾಧಿಕಾರಿಗಳ ಜನತಾದರ್ಶನ, ಅಭಿಲೇಖಾಲಯ ಡಿಜಿಟಲೀಕರಣ, ಲ್ಯಾಂಡ್ ಬೀಟ್, ಕಂದಾಯ ಗ್ರಾಮಗಳ ಪ್ರಗತಿ ಸಂಬಂಧಿಸಿದಂತೆ ಬಾಕಿ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡುವ ಮೂಲಕ ಕಂದಾಯ ಪ್ರಗತಿಯಲ್ಲಿ ಜಿಲ್ಲೆಯನ್ನು ರಾಜ್ಯದಲ್ಲಿ ಮೊದಲ ಸ್ಥಾನಕ್ಕೆ ತರಬೇಕು ಎಂದು ನಿರ್ದೇಶಿಸಿದರು.
ಸಭೆಯಲ್ಲಿ ಭೂದಾಖಲೆಗಳ ಉಪ ನಿರ್ದೇಶಕ ನಿರಂಜನ್.ಎಂ.ಎನ್, ಜಿಲ್ಲೆಯ ಉಪ ವಿಭಾಗಧಿಕಾರಿಗಳು, ತಹಶೀಲ್ದಾರರು, ತಾಲ್ಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿಗಳು ಹಾಗೂ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!