ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಗೆಲುವು ನಿಶ್ಚಿತ: ಪುಟ್ಟಣ್ಣ

18

Get real time updates directly on you device, subscribe now.


ತುಮಕೂರು: ಆಗ್ನೇಯ ಶಿಕ್ಷಕರ ಕ್ಷೇತ್ರ ಸೇರಿದಂತೆ ರಾಜ್ಯದ 6 ಶಿಕ್ಷಕರ ಕ್ಷೇತ್ರಗಳಿಗೆ ಈ ಬಾರಿ ಚುನಾವಣೆ ನಡೆಯುತ್ತಿದ್ದು, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳನ್ನು ಒಳಗೊಂಡ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿರುವ ಡಿ.ಟಿ.ಶ್ರೀನಿವಾಸ್ ಗೆಲುವು ಸಾಧಿಸಲಿದ್ದಾರೆ ಎಂಬ ವಿಶ್ವಾಸವನ್ನು ವಿಧಾನಪರಿಷತ್ ಸದಸ್ಯ ಪುಟ್ಟಣ್ಣ ವ್ಯಕ್ತಪಡಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಆಗ್ನೇಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿರುವ ಡಿ.ಟಿ.ಶ್ರೀನಿವಾಸ್ ಶಿಕ್ಷಣ ಸಂಸ್ಥೆಯೊಂದರ ಕಾರ್ಯದರ್ಶಿಯಾಗಿ ಶಿಕ್ಷಕರ ಸಮಸ್ಯೆಯನ್ನು ಮೂಲದಿಂದ ಬಲ್ಲವರಾಗಿದ್ದಾರೆ, ಸಮಸ್ಯೆಯ ಮೂಲ ಮತ್ತು ಪರಿಹಾರ ಎರಡು ಅವರಿಗೆ ತಿಳಿದಿದೆ, ಇಂತಹವರು ವಿಧಾನ ಪರಿಷತ್ ಗೆ ಆಯ್ಕೆಯಾಗಿ ಬಂದರೆ ಶಿಕ್ಷಣ ಕ್ಷೇತ್ರದ ಜಲ್ವಂತ ಸಮಸ್ಯೆ ಪರಿಹರಿಸಲು ಸಾಧ್ಯವಾಗುತ್ತದೆ ಎಂದರು.

ರಾಜ್ಯದಲ್ಲಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಶಿಕ್ಷಕ ಸ್ನೇಹಿ ಆಡಳಿತ ನೀಡುತ್ತಾ ಬಂದಿದೆ, 2006ರ ನಂತರ ನೇಮಕವಾದ ಸರಕಾರಿ ನೌಕರರಿಗೆ ಎನ್ ಪಿಎಸ್ ಬದಲು ಒಪಿಎಸ್ ನೀಡಲು ಈಗಾಗಲೇ ಸಮಿತಿ ರಚಿಸಿದ್ದು, ಸಮಿತಿಯ ವರದಿಯಿಂದ ಶಿಕ್ಷಕರಿಗೂ ಅನುಕೂಲವಾಗಲಿದೆ, ಅಲ್ಲದೆ ಪೂರಕ ಭೋದನೆಗೆ ಸಂಬಂಧಿಸಿದಂತೆ ಹೊರಡಿಸಿದ್ದ ರಜೆ ಕಡಿತ ಮಾಡಿ ಹೊರಡಿಸಿದ್ದ ಆದೇಶ ರದ್ದು ಪಡಿಸಿ ಮೇ 29 ರಿಂದಲೇ ಶಾಲೆಗಳ ಆರಂಭಕ್ಕೆ ಆದೇಶ ನೀಡಲಾಗಿದೆ, ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳು ಶ್ರೀನಿವಾಸ್ ಅವರಿಗೆ ಟಿಕೆಟ್ ನೀಡಿದ್ದಾರೆ, ಅವರನ್ನು ಗೆಲ್ಲಿಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ ಎಂದರು.

ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಒಳ್ಳೆಯ ವ್ಯಕ್ತಿಯಾಗಿದ್ದು, ಸಾವಿರಾರು ಜನರಿಗೆ ಉದ್ಯೋಗ ನೀಡಿದ್ದಾರೆ, ಇವರ ಎರಡು ವಿದ್ಯಾಸಂಸ್ಥೆಗಳಲ್ಲಿ ಸುಮಾರು 15 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಲಿಯುತ್ತಿದ್ದು, 1500 ಕ್ಕೂ ಹೆಚ್ಚು ಶಿಕ್ಷಕರು ಸೇವೆ ಸಲ್ಲಿಸುತ್ತಿದ್ದಾರೆ, ಈ ಹಿಂದೆ ಬಿಜೆಪಿಯಲ್ಲಿದ್ದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿರುವ ಕಾರಣ ಬಿಜೆಪಿಯಲ್ಲಿನ ಕೆಲವರು ಇವರಿಗೆ ಮತ ನೀಡಲಿದ್ದಾರೆ, ಹಾಗಾಗಿ ಶ್ರೀನಿವಾಸ ಗೆಲ್ಲುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಪಟ್ಟಣ್ಣ ತಿಳಿಸಿದರು.

ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಮಾತನಾಡಿ, ಕಳೆದ ಬಾರಿಯ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಕೂದಲೆಳೆಯ ಅಂತರದಲ್ಲಿ ಸೋಲು ಅನುಭವಿಸಿದ್ದು, ಈ ಬಾರಿ ಮತದಾರರು ಹೆಚ್ಚಿನ ರೀತಿಯ ಒಲವು ತೋರಲಿದ್ದಾರೆ ಎಂಬ ವಿಶ್ವಾಸವಿದೆ, ಸ್ವತಃ ಶಿಕ್ಷಕನಾಗಿ, ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಯಾಗಿ, ಕೆಎಎಸ್ ಅಧಿಕಾರಿಯಾಗಿ ನನ್ನ ಅನುಭವವನ್ನು ಶಿಕ್ಷಣ ಕ್ಷೇತ್ರದಲ್ಲಿನ ಸಮಸ್ಯೆಗಳ ಪರಿಹಾರಕ್ಕೆ ಬಳಕೆ ಮಾಡಿಕೊಳ್ಳಲಿದ್ದೇನೆ ಎಂದರು.

ಸುದ್ದಿಗೋಷ್ಠಿಯಲ್ಲಿ ಡಾ.ಬ್ರಿಜೇಶ್, ಹುಚ್ಚಾಚಾರ್, ರಾಜೇಶ್ ದೊಡ್ಡಮನಿ ಮತ್ತಿತರರು ಇದ್ದರು.

Get real time updates directly on you device, subscribe now.

Comments are closed.

error: Content is protected !!