ರಾಷ್ಟ್ರೀಯ ಜನತಾ ನ್ಯಾಯಾಲಯ ಜುಲೈ 13ಕ್ಕೆ

22

Get real time updates directly on you device, subscribe now.


ತುಮಕೂರು: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಜುಲೈ 13 ರಂದು ಜಿಲ್ಲೆಯಾದ್ಯಂತ ಎಲ್ಲಾ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಜನತಾ ನ್ಯಾಯಾಲಯ ಹಮ್ಮಿಕೊಂಡಿರುವುದಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಜಯಂತ್ ಕುಮಾರ್ ತಿಳಿಸಿದರು.
ನ್ಯಾಯಾಲಯದ ಆವರಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮಾ.16 ರಂದು ಆಯೋಜಿಸಲಾಗಿದ್ದ ಜನತಾ ನ್ಯಾಯಾಲಯದಲ್ಲಿ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿ ಇದ್ದ 94564 ಪ್ರಕರಣಗಳಲ್ಲಿ 9923 ಪ್ರಕರಣ ಹಾಗೂ ವ್ಯಾಜ್ಯ ಪೂರ್ವ 129386 ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದ್ದು ಒಟ್ಟು 139309 ಪ್ರಕರಣ ಇತ್ಯರ್ಥ ಪಡಿಸಲಾಗಿದೆ ಎಂದರು.

ಸರ್ವರಿಗೂ ನ್ಯಾಯ ಎಂಬುದು ಭಾರತ ಕಾನೂನು ಸೇವೆಗಳ ಧ್ಯೇಯವಾಗಿದ್ದು, ಯಾವುದೇ ಪ್ರಜೆಯೂ ತನ್ನ ಆರ್ಥಿಕ ಅಥವಾ ಇತರೆ ದೌರ್ಬಲ್ಯಗಳ ಕಾರಣಗಳಿಂದಾಗಿ ನ್ಯಾಯದಿಂದ ವಂಚಿತವಾಗಬಾರದೆಂಬ ಉದ್ದೇಶದಿಂದ ಉಚಿತ ಮತ್ತು ಸಕ್ಷಮ ಕಾನೂನು ಸೇವೆಗಳನ್ನು ಸಮಾಜದ ದುರ್ಬಲ ವರ್ಗಗಳಿಗೆ ಒದಗಿಸುವ ಸಲುವಾಗಿ ಜನತಾ ನ್ಯಾಯಾಲಯ ಸ್ಥಾಪಿಸಲಾಗಿದೆ ಎಂದರು.

ಸುಪ್ರೀಮ್ ವಿಶೇಷ ಲೋಕ ಅದಾಲತ್: ಭಾರತದ ಸರ್ವೋಚ್ಛ ನ್ಯಾಯಾಲಯವು ಜು.29 ರಿಂದ ಆ.3ರ ವರೆಗೆ ವಿಶೇಷ ಲೋಕ್ ಅದಾಲತ್ ನಡೆಸಲು ಉದ್ದೇಶಿಸಿದ್ದು, ಈ ಹಿನ್ನೆಲೆಯಲ್ಲಿ ಪಕ್ಷಗಾರರಿಗೆ, ಎದುರುದಾರರ ಜೊತೆ ಪೂರ್ವಭಾವಿ ಲೋಕ ಅದಾಲತ್ ನಡೆಸಲು ತಾಲ್ಲೂಕು ಮತ್ತು ಜಿಲ್ಲಾ ಕೇಂದ್ರಗಳಲ್ಲಿ ವೀಡಿಯೋ ಕಾನ್ಸರೆನ್ಸ್ ಮಾಡಲಾಗಿದೆ ಎಂದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಎಲ್ಲಾ ತಾಲ್ಲೂಕು ಕಾನೂನು ಸೇವಾ ಸಮಿತಿಗಳಲ್ಲಿ ವೀಡಿಯೋ ಕಾನ್ಸರೆನ್ಸ್ ಸ್ಥಾಪಿಸಲಾಗಿದ್ದು, ಎಲ್ಲಾ ಪಕ್ಷಗಾರರು ಇದರ ಮೂಲಕ ಸರ್ವೋಚ್ಛ ನ್ಯಾಯಾಲಯ ನಡೆಸುವ ಲೋಕ್ ಅದಾಲತ್ನಲ್ಲಿ ಭಾಗವಹಿಸಲು ಅವಕಾಶ ಮಾಡಿ ಕೊಡಲಾಗಿದೆ ಎಂದರು.

ಭಾರತ ಸರ್ವೋಚ್ಛ ನ್ಯಾಯಾಲಯ ನಡೆಸುವ ವಿಶೇಷ ಅದಾಲತ್ ನಲ್ಲಿ ತುಮಕೂರು ಜಿಲ್ಲೆಗೆ ಸಂಬಂಧಿಸಿದಂತೆ 18 ಪ್ರಕರಣಗಳನ್ನು ರಾಜೀ ಸಂಧಾನದಲ್ಲಿ ವೀಡಿಯೋ ಕಾನ್ಸರೆನ್ಸ್ ಮೂಲಕ ಇತ್ಯರ್ಥ ಪಡಿಸಲು ಅವಕಾಶ ಮಾಡಿರುವುದಾಗಿ ತಿಳಿಸಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮತ್ತು ಹಿರಿಯ ಸಿವಿಲ್ ನ್ಯಾಯಾಧೀಶರಾದ ನೂರುನ್ನೀಸ ಮಾತನಾಡಿ, ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ತಮ್ಮ ತಮ್ಮ ವಕೀಲರನ್ನು ಸಂಪರ್ಕಿಸಿ ರಾಜಿ ಮಾಡಿಕೊಳ್ಳಬಹುದು, ಹೆಚ್ಚಿನ ಮಾಹಿತಿಗಾಗಿ ದೂ.0816- 2255133 ಅಥವಾ 9141193959ನ್ನು ಸಂಪರ್ಕಿಸಿ ಎಂದು ಮನವಿ ಮಾಡಿದರು.

Get real time updates directly on you device, subscribe now.

Comments are closed.

error: Content is protected !!