ಸರ್ಕಾರಿ ದಾಖಲೆ ಮನೆಗಳಲ್ಲಿಟ್ರೆ ಕ್ರಿಮಿನಲ್ ಕೇಸ್

ಡೀಸಿಗೆ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಸೂಚನೆ

22

Get real time updates directly on you device, subscribe now.


ತುಮಕೂರು: ಅಧಿಕಾರಿಗಳು ನಿವೃತ್ತಿಯಾದ ನಂತರವೂ ಸರ್ಕಾರಿ ದಾಖಲೆಗಳನ್ನು ಮನೆಗಳಲ್ಲಿ ಇಟ್ಟುಕೊಂಡರೆ ಅಂಥವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡುವಂತೆ ದೆಹಲಿಯ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ್ ಕಚೇರಿ ವೀಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿ ನಡೆದ ಶಿರಾ ತಾಲ್ಲೂಕಿನ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ತಾಲ್ಲೂಕು ಕಚೇರಿ ಮಾಹಿತಿಯನ್ವಯ ಶಿರಾ ತಾಲೂಕಿನಲ್ಲಿ ಜೂನ್ 24 ರಂದು ನಡೆದ ಜನ ಸ್ಪಂದನ ಕಾರ್ಯಕ್ರಮದಲ್ಲಿ 347 ಅರ್ಜಿ ಸಲ್ಲಿಕೆಯಾಗಿದ್ದು, 47 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ, ಬಾಕಿ ಉಳಿದ ಬಹುತೇಕ ಅರ್ಜಿಗಳು ಕಂದಾಯ ಇಲಾಖೆಗೆ ಸಂಬಂಧಿಸಿವೆ, ಅವುಗಳನ್ನು ವಿಲೇವಾರಿ ಮಾಡಲು ಅಗತ್ಯವಿರುವ ಕೆಲವು ದಾಖಲೆಗಳನ್ನು ಈ ಹಿಂದೆ ಶಿರಾ ತಾಲ್ಲೂಕಿನಲ್ಲಿ ಕಾರ್ಯ ನಿರ್ವಹಿಸಿರುವ ತಹಶೀಲ್ದಾರ್ ಗಳು ಕೆಲವು ಸರ್ಕಾರಿ ದಾಖಲೆಗಳನ್ನು ಇಲಾಖೆಗೆ ಸಲ್ಲಿಸದೇ ತಮ್ಮ ಬಳಿಯೇ ಇಟ್ಟುಕೊಂಡಿರುವುದರಿಂದ ಸಾರ್ವಜನಿಕರಿಗೆ ಸಾಕಷ್ಟು ಸಮಸ್ಯೆಯಾಗುತ್ತಿದೆ, ಸರ್ಕಾರಿ ದಾಖಲೆಗಳನ್ನು ತಮ್ಮ ಬಳಿ ಇಟ್ಟುಕೊಂಡು ಸಾರ್ವಜನಿಕರ ಕೆಲಸಕ್ಕೆ ಅಡ್ಡಿಯುಂಟು ಮಾಡಿದವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಕಡತಗಳನ್ನು ಇಲಾಖೆಗಳಿಗೆ ಹಿಂತಿರುಗಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರಿಗೆ ಸೂಚಿಸಿದರು.

ಜನ ಸ್ಪಂದನ ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದ ಅರ್ಜಿಗಳು ಹೆಚ್ಚಾಗಿ ಸ್ವೀಕೃತವಾಗಿರುವುದರಿಂದ ಸಂಬಂಧಿಸಿದ ಗ್ರಾಮ ಆಡಳಿತ ಅಧಿಕಾರಿಗಳು ಖುದ್ದು ಸ್ಥಳ ಪರಿಶೀಲನೆ ನಡೆಸಿ ಸಮಸ್ಯೆ ಬಗೆಹರಿಸುವಂತೆ ಮತ್ತು ನಕಾಶೆ ರಸ್ತೆಗಳನ್ನು ಸರ್ವೇ ಮಾಡಿಸಿ ಒತ್ತುವರಿಯಾಗಿದ್ದರೆ ಅಂಥಹ ರಸ್ತೆಗಳನ್ನು ತೆರವು ಮಾಡಿಸುವಂತೆ ಸಚಿವರು ಸೂಚಿಸಿದರು.

ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮಾತನಾಡಿ, ಶಿರಾ ತಾಲೂಕಿನಲ್ಲಿ ಬೀದಿ ನಾಯಿಗಳ ಹಾವಳಿ ತಪ್ಪಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಶಿರಾ ನಗರಸಭೆ ಪೌರಾಯುಕ್ತರಿಗೆ ಸೂಚನೆ ನೀಡಿದರು, ಸರ್ಕಾರಿ ದಾಖಲೆಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡಬೇಕು, ನಕಲಿ ಸಾಗುವಳಿ ಚೀಟಿ ಕೊಟ್ಟಿರುವ ಬಗ್ಗೆ ದೂರು ಕೇಳಿ ಬಂದಿದ್ದು ಅವುಗಳನ್ನು ಪರಿಶೀಲಿಸಲು ವಿಶೇಷ ತಂಡವನ್ನು ಜಿಲ್ಲೆಗೆ ಕರೆಸಲಾಗುವುದು ಎಂದು ಅಧಿಕಾರಿಗೆ ಎಚ್ಚರಿಕೆ ನೀಡಿದರು.

ಜಿಲ್ಲೆಯಲ್ಲಿ ಕೃಷಿ ಮತ್ತು ತೋಟಗಾರಿಕೆ ಇಲಾಖೆ ಜಂಟಿಯಾಗಿ ರೈತರ ಬೆಳೆ ಸಮೀಕ್ಷೆ ಬಗ್ಗೆ ವ್ಯಾಪಕ ಪ್ರಚಾರ ಕೈಗೊಂಡು ಹೆಚ್ಚು ರೈತರು ತಮ್ಮ ಬೆಳೆಗಳನ್ನು ನೋಂದಾಯಿಸಿಕೊಳ್ಳುವಂತೆ ಅರಿವು ಮೂಡಿಸಬೇಕು, ಜಿಲ್ಲೆಯ ಎಲ್ಲಾ ರೈತರಿಗೂ ಈ ಯೋಜನೆ ತಲುಪಿಸಬೇಕು ಎಂದು ತಿಳಿಸಿದರು.
ಶಿರಾ ತಾಲ್ಲೂಕಿನಲ್ಲಿ ಕೊಳಚೆ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ಸುಮಾರು 1000 ಮನೆಗಳ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಡಿಸೆಂಬರ್ ಮಾಹೆಯ ಅಂತ್ಯಕ್ಕೆ ಮನೆ ನಿರ್ಮಾಣ ಪೂರ್ಣಗೊಳಿಸಿ ಅರ್ಹ ಫಲಾನುಭವಿಗಳಿಗೆ ಮನೆಗಳನ್ನು ವಿತರಿಸಲಾಗುವುದು ಎಂದು ತಿಳಿಸಿದರು.
ಆಶ್ರಯ ಯೋಜನೆಯಲ್ಲಿ ಜಿಲ್ಲೆಯಲ್ಲಿ ಮೊದಲ ಬಾರಿಗೆ ದೊಡ್ಡ ಮಟ್ಟದಲ್ಲಿ ನಿವೇಶನ ನೀಡಲು ತಯಾರಿ ನಡೆಸುತ್ತಿದ್ದು, ಶಿರಾ ತಾಲ್ಲೂಕಿನಲ್ಲಿ ಈಗಾಗಲೇ 1500 ನಿವೇಶನಗಳ ಹಕ್ಕು ಪತ್ರಗಳು ಸಿದ್ಧವಾಗಿವೆ, ಶಿರಾ ತಾಲ್ಲೂಕಿನಲ್ಲಿಯೇ ಅತೀ ಹೆಚ್ಚು ನಿವೇಶನಗಳನ್ನು ಫಲಾನುಭವಿಗಳಿಗೆ ಹಂಚಿಕೆ ಮಾಡಲಾಗುವುದು ಎಂದು ಜಿಪಂ ಸಿಇಒ ಜಿ.ಪ್ರಭು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಉಪ ವಿಭಾಗಾಧಿಕಾರಿ ಗೋಟೂರು ಶಿವಪ್ಪ, ತಹಶೀಲ್ದಾರ್ ದತ್ತಾತ್ರೇಯ ಗಾದ, ತಾಲ್ಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಅನಂತರಾಜು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

Get real time updates directly on you device, subscribe now.

Comments are closed.

error: Content is protected !!