ಲೋಪವಿಲ್ಲದಂತೆ ಕೆ ಪಿ ಎಸ್ ಸಿ ಪರೀಕ್ಷೆ ನಡೆಸಿ: ಡೀಸಿ

17

Get real time updates directly on you device, subscribe now.


ತುಮಕೂರು: ನಗರದ 16 ಕೇಂದ್ರಗಳಲ್ಲಿ ಆಗಸ್ಟ್ 27 ರಂದು ಕೆ ಪಿ ಎಸ್ ಸಿ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಯನ್ನು ಯಾವುದೇ ಲೋಪ ದೋಷವಾಗದಂತೆ ನಡೆಸಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಜರುಗಿದ ಕೆಪಿಎಸ್ಸಿ ಪರೀಕ್ಷೆ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಪರೀಕ್ಷೆ ನಡೆಯುವ ಕೊಠಡಿಗಳಲ್ಲಿ ಬೆಳಕು, ಕುಡಿಯುವ ನೀರು, ಸುಸ್ಥಿತಿಯಲ್ಲಿರುವ ಗಡಿಯಾರ ಸೇರಿದಂತೆ ಮೂಲಭೂತ ಸೌಕರ್ಯಗಳ ವ್ಯವಸ್ಥೆ ಮಾಡಬೇಕೆಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಲು ಸೂಚನೆ
ಕೆಪಿಎಸ್ಸಿ ಪರೀಕ್ಷೆ ನಡೆಯಲಿರುವ ಕೇಂದ್ರಗಳಿಗೆ ನಿಯೋಜಿತ ಅಧಿಕಾರಿಗಳು ಭೇಟಿ ನೀಡಿ ಸಿಸಿ ಕ್ಯಾಮರಾ, ವಿದ್ಯುತ್ ಸಂಪರ್ಕ, ಡೆಸ್ಕ್ ಗಳು ಸುಸ್ಥಿತಿಯಲ್ಲಿರುವಂತೆ ಪೂರ್ವ ಸಿದ್ಧತೆ ಕೈಗೊಳ್ಳಬೇಕು ಹಾಗೂ ಪ್ರಶ್ನೆ ಪತ್ರಿಕೆಯನ್ನು ನಿಗದಿತ ಸಮಯಕ್ಕೆ ಸರಿಯಾಗಿ ಪರಿಕ್ಷಾರ್ಥಿಗಳಿಗೆ ವಿತರಿಸಬೇಕು ಎಂದು ಅಧಿಕಾರಿಗಳಿಗೆ ಮಾರ್ಗದರ್ಶನ ನೀಡಿದರು.

ಪರೀಕ್ಷಾ ಕೇಂದ್ರಗಳ ಸುತ್ತ ಮುತ್ತ ಆಗಸ್ಟ್ 27 ರಂದು ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮ ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕೆಂದು ಸಂಭಂದಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ, ಉಪ ವಿಭಾಗಾಧಿಕಾರಿಗಳಾದ ಗೌರವ್ ಕುಮಾರ್ ಶೆಟ್ಟಿ, ಸಪ್ತಶ್ರೀ, ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅಬ್ದುಲ್ ಖಾದರ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಅನುಮಪ, ಜಿಲ್ಲಾ ಪಂಚಾಯತ್ ಯೋಜನಾಧಿಕಾರಿ ನಾರಾಯಣ ಸ್ವಾಮಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಬಾಲಗುರು ಮೂರ್ತಿ, ಡಿಡಿಪಿಐ ಕೆ.ಮಂಜುನಾಥ್ ಮತ್ತಿತರ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!