ತುಮಕೂರು ದಸರಾಗೆ ಅದ್ದೂರಿ ಚಾಲನೆ

ಧಾರ್ಮಿಕ ಆಚರಣೆ, ಸಂಸ್ಕೃತಿ ಉಳಿಸಲು ದಸರಾ: ಡಾ.ಪರಮೇಶ್ವರ್

2

Get real time updates directly on you device, subscribe now.


ತುಮಕೂರು: ನಮ್ಮ ಧಾರ್ಮಿಕ ಆಚರಣೆ, ವಿಚಾರಧಾರೆ, ಭವ್ಯ ಸಂಸ್ಕೃತಿ ಉಳಿಸಿ ಬೆಳೆಸಿ ಮುಂದಿನ ಪೀಳಿಗೆಗೆ ಪರಿಚಯಿಸಲು ತುಮಕೂರಿನಲ್ಲಿ ಪ್ರಪ್ರಥಮ ಬಾರಿಗೆ ತುಮಕೂರು ದಸರಾ ಉತ್ಸವ ಆಚರಣೆ ಪ್ರಾರಂಭಿಸಲಾಗಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.

ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಅದ್ದೂರಿ ಉತ್ಸವಕ್ಕೆ ಚಾಲನೆ ನೀಡಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ತುಮಕೂರು ದಸರಾ ಉತ್ಸವ ಪ್ರಾರಂಭಿಸಿರುವುದು ಮೈಸೂರು ದಸರಾಗೆ ಹೋಲಿಕೆ ಮಾಡಲು ಅಲ್ಲ ಎಂದು ಸ್ಪಷ್ಟನೆ ನೀಡಿದರು.
ತುಮಕೂರು ದಸರಾ ಆಚರಣೆಗೆ ಮುಖ್ಯಮಂತ್ರಿಯವರು 1 ಕೋಟಿ ರೂ. ಅನುದಾನ ನೀಡಿ ಪ್ರೋತ್ಸಾಹಿಸಿದ್ದಾರೆ, ದಸರಾ ಪ್ರಯುಕ್ತ ಮುಂದಿನ 9 ದಿನ ವೈವಿಧ್ಯಮಯ ಕಾರ್ಯಕ್ರಮ ಆಯೋಜಿಸಲಾಗಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಚಾಮುಂಡೇಶ್ವರಿ ದೇವಿ ಕೃಪೆಗೆ ಪಾತ್ರರಾಗಿ ಖ್ಯಾತ ಕಲಾವಿದರಿಂದ ಜರುಗಲಿರುವ ಸಾಂಸ್ಕೃತಿಕ ಕಾರ್ಯಕ್ರಮ ಕಣ್ತುಂಬಿಕೊಳ್ಳಬೇಕೆಂದು ಮನವಿ ಮಾಡಿದರು.

ಶ್ರೀಸಿದ್ಧಗಂಗಾ ಮಠದ ಅಧ್ಯಕ್ಷ ಸಿದ್ಧಲಿಂಗ ಮಹಾಸ್ವಾಮೀಜಿ ಮಾತನಾಡಿ, ದಸರಾ ಉತ್ಸವ ಆಚರಣೆಯಿಂದ ಮೈಸೂರಿನಂತೆ ತುಮಕೂರು ನಗರವೂ ಸಹ ಸಾಂಸ್ಕೃತಿಕ ನಗರವಾಗಿ ರೂಪುಗೊಳ್ಳುತ್ತಿದೆ, ವಿಜಯನಗರ ಅರಸರಿಂದ ಮೈಸೂರು ಅರಸರ ವರೆಗೆ ದಸರಾ ಉತ್ಸವ ಆಚರಿಸಿಕೊಂಡು ಬರಲಾಗುತ್ತಿದೆ, ನಮ್ಮಲ್ಲಿರುವ ಕೆಟ್ಟ ಭಾವನೆ ಹೋಗಲಾಡಿಸಿ ಒಳ್ಳೆಯದ್ದನ್ನು ಅಳವಡಿಸಿಕೊಳ್ಳಬೇಕು ಎಂಬ ಪ್ರತೀಕವೇ ದಸರಾ ಆಚರಣೆ ಎಂದರು.

ಕೊರಟಗೆರೆ ತಾಲೂಕು ಎಲೆರಾಂಪುರದ ಕುಂಚಿಟಿಗರ ಮಹಾಸಂಸ್ಥಾನ ಮಠದ ಪೀಠಾಧಿಪತಿ ಡಾ.ಹನುಮಂತನಾಥ ಮಹಾ ಸ್ವಾಮೀಜಿ, ನವದೆಹಲಿ ವಿಶೇಷ ಪ್ರತಿನಿಧಿ ಹಾಗೂ ಶಾಸಕ ಟಿ.ಬಿ.ಜಯಚಂದ್ರ, ಶಾಸಕರಾದ ಜಿ.ಬಿ.ಜ್ಯೋತಿಗಣೇಶ್, ಶಾಸಕ ಕೆ.ಷಡಕ್ಷರಿ, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಪಂ ಸಿಇಒ ಜಿ.ಪ್ರಭು, ಪಾಲಿಕೆ ಆಯುಕ್ತ ಬಿ.ವಿ.ಅಶ್ವಿಜ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ಡಿವೈಎಸ್ ಪಿ ಮರಿಯಪ್ಪ, ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ, ಉಪ ವಿಭಾಗಾಧಿಕಾರಿ ಗೌರವ್ ಕುಮಾರ್ ಶೆಟ್ಟಿ ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!