ಪೊಲೀಸರಿಂದ ನಾಗರಿಕ ಸಮಾಜ ನೆಮ್ಮದಿಯಾಗಿದೆ

ಪೊಲೀಸ್ ಹುತಾತ್ಮರ ದಿನಾಚರಣೆಯಲ್ಲಿ ನ್ಯಾಯಾಧೀಶರ ಅಭಿಮತ

4

Get real time updates directly on you device, subscribe now.


ತುಮಕೂರು: ತಮ್ಮ ಪ್ರಾಣದ ಹಂಗನ್ನು ತೊರೆದು ಸದಾ ಕಾರ್ಯ ನಿರ್ವಹಿಸುವ ಪೊಲೀಸರ ಸೇವೆ ಶ್ಲಾಘನೀಯ ಎಂದು ಜಿಲ್ಲಾ ಪ್ರಧಾನ ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಬಿ.ಜಯಂತ್ ಕುಮಾರ್ ಹೇಳಿದರು.

ನಗರದ ಬಿ.ಹೆಚ್. ರಸ್ತೆಯಲ್ಲಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯ ಆವರಣದಲ್ಲಿ ನಡೆದ ಪೊಲೀಸ್ ಹುತಾತ್ಮರ ದಿನಾಚರಣೆಯಲ್ಲಿ ಹುತಾತ್ಮ ಪೊಲೀಸರ ಸ್ಮಾರಕದ ಪುತ್ಥಳಿಗೆ ಪುಷ್ಪಗುಚ್ಛ ಇರಿಸಿ ಗೌರವ ಸಲ್ಲಿಸಿ ಮಾತನಾಡಿ, ದೇಶದಲ್ಲಿ ನಾವುಗಳು ರಾತ್ರಿ ವೇಳೆ ನೆಮ್ಮದಿಯಾಗಿ ನಿದ್ದೆ ಮಾಡುತ್ತಿದ್ದೇವೆ ಎಂದರೆ ಅದಕ್ಕೆ ಪೊಲೀಸರ ಸೇವೆಯೇ ಕಾರಣ, ಪೊಲೀಸರು ದೇಶಕ್ಕಾಗಿ, ಸಮಾಜಕ್ಕಾಗಿ ದಿನದ 24 ಗಂಟೆಯೂ ಸಾಕಷ್ಟು ಸೇವೆ ಸಲ್ಲಿಸುತ್ತಾ ಬಂದಿದ್ದಾರೆ, ಕೆಲ ಸಂದರ್ಭದಲ್ಲಿ ತಮ್ಮ ಪ್ರಾಣದ ಹಂಗನ್ನು ತೊರೆದು ಕಾರ್ಯ ನಿರ್ವಹಿಸುವ ಸನ್ನಿವೇಶಗಳು ಎದುರಾಗುತ್ತವೆ ಎಂದರು.

ಪ್ರಾಸ್ತಾವಿಕ ನುಡಿಗಳನ್ನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್.ಕೆ.ವಿ. ಪ್ರತಿ ವರ್ಷದಂತೆ ಈ ವರ್ಷವೂ ಪೊಲೀಸ್ ಹುತಾತ್ಮರ ದಿನಾಚರಣೆ ಆಚರಿಸುತ್ತಿದ್ದೇವೆ, ನಮ್ಮ ದೇಶದ ಉತ್ತರದ ಗಡಿ ಭಾಗವು ವರ್ಷವಿಡೀ ಹಿಮದಿಂದ ಆವೃತವಾಗಿರುವ ದುರ್ಗಮ ಪ್ರದೇಶವಾಗಿದೆ, ಇಂತಹ ಸಂದರ್ಭದಲ್ಲಿ 1959 ರ ಅ. 21 ರಂದು ಬೆಳಗ್ಗೆ 8 ಗಂಟೆ ಸಮಯದಲ್ಲಿ ಕರಣ್ ಸಿಂಗ್ ಎಂಬ ಡಿವೈಎಸ್ಪಿ ನಾಯಕತ್ವದಲ್ಲಿ ಸಿಆರ್ ಪಿ ತಂಡದವರು ನಮ್ಮ ದೇಶದ ಗಡಿ ಭಾಗದ ಲಡಾಕ್ ಎಂಬಲ್ಲಿ ಕಾವಲು ಕಾಯುತ್ತಿರುವಾಗ ಚೀನಾ ದೇಶದ ಅಸಂಖ್ಯಾತ ಸೈನಿಕರು ನಮ್ಮ ದೇಶದ ಗಡಿ ಭಾಗದಲ್ಲಿ ಒಳನುಗ್ಗಿದರು, ಅಲ್ಲಿದ್ದ ನಮ್ಮ ಸೈನಿಕರು ದೇಶದ ರಕ್ಷಣೆಗಾಗಿ ಕೊನೆಯ ಹನಿ ರಕ್ತ ಇರುವವರೆಗೂ ಅಪ್ರತಿಮವಾಗಿ ಹೋರಾಡಿ ವೀರ ಮರಣ ಹೊಂದಿದರು ಎಂದು ಸ್ಮರಿಸಿದರು.

ಕಾರ್ಯಕ್ರಮದಲ್ಲಿ ಅಡಿಷಲ್ ಎಸ್ಪಿಗಳಾದ ಮರಿಯಪ್ಪ, ಅಬ್ದುಲ್ ಖಾದರ್, ಕೆ ಎಸ್ ಆರ್ ಪಿ ಕಮಾಂಡೆಂಟ್ ಸತ್ಯನಾರಾಯಣ ಸೇರಿದಂತೆ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ಪೊಲೀಸ್ ಅಧಿಕಾರಿಗಳು, ನಿವೃತ್ತ ಪೊಲೀಸರು ಭಾಗವಹಿಸಿದ್ದರು.

Get real time updates directly on you device, subscribe now.

Comments are closed.

error: Content is protected !!