ತುಮಕೂರು: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಯಾವುದೇ ಅಭಿವೃದ್ಧಿ ಕೆಲಸಗಳಾಗಿಲ್ಲ, ಶಾಸಕರಿಗೆ ನೀಡಬೇಕಾದ ಅನುದಾನ ಬಿಡುಗಡೆ ಮಾಡಿಲ್ಲ, ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಆಡಳಿತ ಹಿಡಿದ ಕಾಂಗ್ರೆಸ್ ನುಡಿದಂತೆ ನಡೆಯುತ್ತಿಲ್ಲ, ಪ್ರತಿ ತಿಂಗಳು ಗೃಹಲಕ್ಷ್ಮಿಯೋಜನೆಯಡಿ ಕೊಡಬೇಕಾದ ಹಣವನ್ನು 3-4 ತಿಂಗಳಿನಿಂದ ಕೊಟ್ಟಿಲ್ಲ ಎಂದು ತಾಯಂದಿರು ಸರ್ಕಾರದ ವಿರುದ್ಧ ಸಿಡಿದೆದ್ದಿದ್ದಾರೆ, ಬೇಸಿಗೆಯಲ್ಲಿ ವಿದ್ಯುತ್ ಇಲ್ಲದೆ ರೈತರು ತಮ್ಮ ಬೆಳೆಗೆ ನೀರು ಹಾಯಿಸಲಾಗದೆ ಸಂಕಷ್ಟ ಅನುಭವಿಸುತ್ತಿದ್ದಾರೆ, ಸರ್ಕಾರ ರೈತರ ಕಷ್ಟ ಕೇಳುತ್ತಿಲ್ಲ ಎಂದು ರಾಜ್ಯ ಜೆಡಿಎಸ್ ಯುವ ಘಟಕ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆರೋಪಿಸಿದರು.
ಶನಿವಾರ ನಗರದ ಹೊರವಲಯದ ರೆಸಾರ್ಟ್ನಲ್ಲಿ ತುಮಕೂರು, ಚಿತ್ರದುರ್ಗ, ದಾವಣಗೆರೆ ಜಿಲ್ಲೆಯ ಜೆಡಿಎಸ್ ಪ್ರಮುಖರ ಸಭೆ ನಡೆಸಿದ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಅಭಿವೃದ್ಧಿ ಕಾರ್ಯ ಕಡೆಗಣಿಸಿ ಭ್ರಷ್ಟಾಚಾರದಲ್ಲಿ ತೊಡಗಿದೆ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ, ಪೊಲೀಸ್ ವಾಹನ, ಠಾಣೆ ಮೇಲೆ ಕಲ್ಲು ತೂರುವ, ಕಾನೂನಿನ ಭಯವಿಲ್ಲದ ವಾತಾವರಣ ನಿರ್ಮಾಣವಾಗಿದೆ, ಸರ್ಕಾರದ ಸೇವೆಗಳ ಬೆಲೆ, ದಿನ ಬಳಕೆ ಪದಾರ್ಥಗಳ ಬೆಲೆ ದುಬಾರಿಯಾಗಿ ಜನಸಾಮಾನ್ಯರು ಜೀವನ ನಡೆಸಲು ಸಂಕಟ ಪಡುತ್ತಿದ್ದಾರೆ, ಸರ್ಕಾರಕ್ಕೆ ಜನರ ಹಿತ ಬೇಕಾಗಿಲ್ಲ, ಬೇಸಿಗೆಯಲ್ಲಿ ರೈತರಿಗೆ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡುವಲ್ಲಿ ವಿಫಲವಾಗಿ ಎಂಬುದನ್ನು ಎರಡು ವರ್ಷಗಳಿಂದ ಸಾಬೀತು ಪಡಿಸಿದೆ ಎಂದು ಟೀಕಿಸಿದರು.
ಶಾಸಕರಾದ ಸಿ.ಬಿ.ಸುರೇಶ್ಬಾಬು, ಎಂ.ಟಿ.ಕೃಷ್ಣಪ್ಪ, ವಿಧಾನ ಪರಿಷತ್ ಸದಸ್ಯ ತಿಪ್ಪೇಸ್ವಾಮಿ, ಮಾಜಿ ಶಾಸಕರಾದ ಡಿ.ನಾಗರಾಜಯ್ಯ, ಎಂ.ವಿ.ವೀರಭದ್ರಯ್ಯ, ಕೆ.ಎಂ.ತಿಮ್ಮರಾಯಪ್ಪ, ಸುಧಾಕರಲಾಲ್, ಶಿವಶಂಕರ್, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಆರ್.ಸಿ.ಆಂಜನಪ್ಪ, ಕಾರ್ಯಾಧ್ಯಕ್ಷ ಟಿ.ಆರ್.ನಾಗರಾಜು, ಮುಖಂಡರಾದ ಕೆ.ಟಿ.ಶಾಂತಕುಮಾರ್, ಗುಬ್ಬಿ ನಾಗರಾಜು, ಡಾ.ರವಿ ನಾಗರಾಜಯ್ಯ, ಕೊಂಡವಾಡಿ ಚಂದ್ರಶೇಖರ್, ಸೋಲಾರ್ ಕೃಷ್ಣಮೂರ್ತಿ ಮೊದಲಾದವರು ಭಾಗವಹಿಸಿದ್ದರು.
Comments are closed.