ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿ- ಅಧಿಕಾರಿಗಳಿಗೆ ಸಚಿವ ಮಾಧುಸ್ವಾಮಿ ಸೂಚನೆ

ಹಳ್ಳಿಗಳಲ್ಲಿ ಕೊರೊನಾ ಕಂಟ್ರೋಲ್‌ ಮಾಡಿ

551

Get real time updates directly on you device, subscribe now.

ತುಮಕೂರು: ಗ್ರಾಮಗಳು ಕೊರೊನಾ ಬಾಧಿತ ಪ್ರದೇಶಗಳಾಗದಂತೆ ಸೋಂಕಿನ ಸಂಪೂರ್ಣ ನಿಯಂತ್ರಣಕ್ಕೆ ಕಟ್ಟುನಿಟ್ಟಾಗಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸಣ್ಣ ನೀರಾವರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಮಾತನಾಡಿ, ಸೋಂಕು ಪತ್ತೆಯಾಗಿರುವ ಗ್ರಾಮಗಳಲ್ಲಿ ಸೋಂಕಿನ ನಿಯಂತ್ರಣಕ್ಕೆ ಗರಿಷ್ಠ ಮುನ್ನೆಚ್ಚರಿಕಾ ಕ್ರಮ ಅನುಸರಿಸಬೇಕು ಎಂದು ನಿರ್ದೇಶಿಸಿದರು.
ಸೋಂಕಿತರನ್ನು ಕಡ್ಡಾಯವಾಗಿ ಕೊರೊನಾ ಆರೈಕೆ ಕೇಂದ್ರಕ್ಕೆ ಸ್ಥಳಾಂತರಿಸಬೇಕು, ಕೊರೊನಾ ಆರೈಕೆ ಕೇಂದ್ರಕ್ಕೆ ಬರಲು ಹಿಂದೇಟು ಹಾಕುವ ಸೋಂಕಿತರಿಗೆ ಆಯಾ ಸ್ಥಳೀಯ ಜನಪ್ರತಿನಿಧಿಗಳು ಅವರಿಗೆ ಮನವರಿಕೆ ಮಾಡಿ ಆರೈಕೆ ಕೇಂದ್ರಕ್ಕೆ ಸ್ಥಳಾಂತರಿಸಲು ಹೆಚ್ಚು ಜವಾಬ್ದಾರಿವಹಿಸಿ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.
ಹೆಚ್ಚು ಪ್ರಕರಣಗಳಿರುವ ಗ್ರಾಮಗಳನ್ನು ಲಾಕ್ ಡೌನ್‌ ಮಾಡಿ, ಸಾರ್ವಜನಿಕರ ಅನಗತ್ಯ ಸಂಚಾರಕ್ಕೆ ಸಂಪೂರ್ಣ ಕಡಿವಾಣ ಹಾಕಬೇಕು, ಈಗಾಗಲೇ ನಿಗದಿಯಾಗಿರುವ ಮದುವೆ ನಡೆಯಲು ಅನುಮತಿ ನೀಡಿ, ಹೊಸ ಮದುವೆ ನಡೆಯಲು ಅವಕಾಶ ಮಾಡಿಕೊಡಬೇಡಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಅಂಗನವಾಡಿ, ಆಶಾ ಕಾರ್ಯಕರ್ತೆರನ್ನು ಬಳಸಿಕೊಂಡು ಈಗಾಗಲೇ ಸೋಂಕಿಗೆ ಒಳಗಾಗಿ ಹೋಂ ಐಸೋಲೇಷನ್‌ ನಲ್ಲಿರುವ ಸೋಂಕಿತರ ಆರೈಕೆಗೆ ಹೆಚ್ಚು ಆದ್ಯತೆ ಕೊಡಬೇಕು, ಸೋಂಕು ದೃಢಪಟ್ಟ ಸೋಂಕಿತರಿಗೆ ಆರಂಭದ ದಿನದಿಂದಲೇ ಚಿಕಿತ್ಸೆ ನೀಡುವ ಕಾರ್ಯ ಪರಿಣಾಮಕಾರಿಯಾಗಿ ಆಗಬೇಕು ಎಂದು ತಿಳಿಸಿದರು.
ಪ್ರತಿ ಕೊರೊನಾ ಆರೈಕೆ ಕೇಂದ್ರಗಳಲ್ಲಿಯೂ ಗುಣಮಟ್ಟದ ಆಹಾರ ವಿತರಣೆ ಮಾಡುವುದರ ಜೊತೆಗೆ ಉತ್ತಮ ನಿರ್ವಹಣೆ ಮಾಡಬೇಕು. ಸೋಂಕಿತರಿಂದ ದೂರುಗಳು ಕೇಳಿಬರದಂತೆ ಆರೈಕೆ ಕೇಂದ್ರಗಳನ್ನು ನಿರ್ವಹಿಸಬೇಕು ಎಂದು ನಿರ್ದೇಶಿಸಿದರು.
ಹಲವು ಹೋಬಳಿ, ಗ್ರಾಮಗಳಲ್ಲಿ ಸಾರ್ವಜನಿಕರ ಅನಗತ್ಯ ಓಡಾಟ ಹೆಚ್ಚಿದ್ದು, ಅದರಲ್ಲೂ ಮುಖ್ಯವಾಗಿ ಜೂಜಾಟದ ಅಕ್ರಮ ಚಟುವಟಿಕೆಗೆ ಕಡಿವಾಣ ಹಾಕುವುದಕ್ಕೆ ಪೊಲೀಸ್‌ ಇಲಾಖೆ ತಕ್ಷಣವೇ ಕ್ರಮವಹಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಎಲ್ಲಿಯೂ ಸೋಂಕಿತರಿಗೆ ಔಷಧದ ಕೊರತೆಯಾಗಬಾರದು, ಚಿಕಿತ್ಸಾ ಆರೈಕೆಯಲ್ಲೂ ಸಮಸ್ಯೆಯಾಗದಂತೆ ಕ್ರಮವಹಿಸಬೇಕು, ಕೊರೊನಾ ನಿಯಂತ್ರಣಕ್ಕಾಗಿ ಈಗಾಗಲೇ ಆದೇಶಿಸಿರುವ ಸೂಚನೆಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು, ತಾಲೂಕುವಾರು ನಿಗದಿಪಡಿಸಿದ ಕೋವಿಡ್‌ ಪರೀಕ್ಷೆ ಮಾಡುವುದರ ಜೊತೆಗೆ ಸೋಂಕಿತರ ಪ್ರಾಥಮಿಕ ಸಂಪರ್ಕಿತರನ್ನು ಗುರುತಿಸಿ ಅವರನ್ನೂ ಕೋವಿಡ್‌ ಪರೀಕ್ಷೆಗೆ ಒಳಪಡಿಸುವ ಕಾರ್ಯವೂ ಅಚ್ಚುಕಟ್ಟಾಗಿ ನಡೆಯಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು ಮತ್ತು ಆಯಾ ತಾಲೂಕಿನ, ಗ್ರಾಮದ ಜನಪ್ರತಿನಿಧಿಗಳೊಂದಿಗೆ ಕೊರೊನಾ ನಿರ್ವಹಣೆಗೆ ಕೈಗೊಂಡಿರುವ ಕ್ರಮಗಳನ್ನು ಪರಿಶೀಲಿಸಿ, ಮಾಹಿತಿ ಪಡೆದರು, ಅಗತ್ಯವಿದ್ದರೆ ಕೊರೋನಾ ಆರೈಕೆ ಕೇಂದ್ರಗಳನ್ನು ತೆರೆಯಬೇಕು. ಹಳ್ಳಿಗಳಲ್ಲಿ ಹೆಚ್ಚು ಜಾಗೃತಿ ಮೂಡಿಸಬೇಕು ಎಂದು ನಿರ್ದೇಶಿಸಿದರು.
ನ್ಯಾಯಬೆಲೆ ಅಂಗಡಿಗಳಲ್ಲಿ ನೀಡಲಾಗುವ ಆಹಾರ ಪಡಿತರಕ್ಕೆ ಹೆಬ್ಬೆಟ್ಟು ಕಡ್ಡಾಯವಲ್ಲ. ತಂಬಿಂಗ್‌ನಿಂದ ಸೋಂಕು ಹರಡುವ ಸಾಧ್ಯತೆಯಿದೆ, ಹಾಗಾಗಿ ದಿನಕ್ಕೆ 20- 30 ಪಡಿತರದಾರರಿಗೆ ಕೂಪನ್‌ ನೀಡಿ ಪಡಿತರ ವಿತರಣೆಗೆ ಅಧಿಕಾರಿಗಳು ಕ್ರಮ ವಹಿಸುವಂತೆ ಸೂಚನೆ ನೀಡಿದರು.
ಸಂಸದ ಜಿ.ಎಸ್‌.ಬಸವರಾಜು ಮಾತನಾಡಿ, ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್‌ ಸೋಂಕಿತರನ್ನು ಸಿಸಿ ಕೇಂದ್ರಕ್ಕೆ ಸ್ಥಳಾಂತರಿಸಲು ಮನೆಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಆಶಾ, ಅಂಗನವಾಡಿ ಕಾರ್ಯಕರ್ತೆಯರೊಂದಿಗೆ ಜನರು ಸಹಕಾರ ನೀಡದೆ ಬೆದರಿಕೆ ಹಾಕುತ್ತಿದ್ದಾರೆ, ಇದನ್ನು ತಪ್ಪಿಸಲು ಸ್ಥಳೀಯ ಕಾರ್ಯಪಡೆ ನೆರವಿನೊಂದಿಗೆ ಪೊಲೀಸ್‌ ಸಿಬ್ಬಂದಿ ನೇಮಕ ಮಾಡಬೇಕು. ಸಿಬ್ಬಂದಿ ಕೊರತೆ ಇದ್ದರೆ ಮೀಸಲು ಪಡೆ ಬಳಸಿಕೊಳ್ಳಿ ಎಂದು ಸಲಹೆ ನೀಡಿದರು.
ಜಿಲ್ಲಾ ಪಂಚಾಯತ್‌ ಮುಖ್ಯ ನಿರ್ವಹಣಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಮಾತನಾಡಿ ಪಲ್ಸ್ ಆಕ್ಸಿಮೀಟರ್‌, ಸ್ಯಾನಿಟೈಸರ್‌, ಮಾಸ್ಕ್, ಮಾತ್ರೆ ಸೇರಿದಂತೆ ಮತ್ತಿತರ ಕೋವಿಡ್‌ ನಿರ್ವಹಣೆಗಾಗಿ ದಾನಿಗಳಿಂದ ನೆರವು ಬಂದಿದ್ದು, ಕೋವಿಡ್‌ ನಿರ್ವಹಣೆಗಾಗಿ ಪ್ರತಿ ಪಂಚಾಯತಿಗೆ ಸರ್ಕಾರ ನೀಡಿರುವ ತಲಾ 50,000 ರೂ. ಕುಡಿಯುವ ನೀರು ನಿರ್ವಹಣೆಗೆ ಬಳಸಿಕೊಳ್ಳಬೇಕೆಂದು ತಿಳಿಸಿದರು.
ಸಭೆಯಲ್ಲಿ ಶಾಸಕ ಜ್ಯೋತಿಗಣೇಶ್‌, ಜಿಲ್ಲಾಧಿಕಾರಿ ವೈ.ಎಸ್‌.ಪಾಟೀಲ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಕೆ.ವಂಶಿಕೃಷ್ಣ, ಅಪರ ಜಿಲ್ಲಾಧಿಕಾರಿ ಕೆ.ಚೆನ್ನಬಸಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗೇಂದ್ರಪ್ಪ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಸುರೇಶ್‌ ಬಾಬು ಇತರರಿದ್ದರು.

Get real time updates directly on you device, subscribe now.

Comments are closed.

error: Content is protected !!