ತ್ವರಿತವಾಗಿ ಸ್ಮಾರ್ಟ್ ಸಿಟಿ ಕಾಮಗಾರಿ ಪೂರ್ಣಗೊಳಿಸಿ: ಜಿಲ್ಲಾಧಿಕಾರಿ

533

Get real time updates directly on you device, subscribe now.

ತುಮಕೂರು: ಸ್ಮಾರ್ಟ್‌ ಸಿಟಿ ಯೋಜನೆಯಡಿ ನಗರದಲ್ಲಿ ಕೈಗೊಂಡಿರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸ್ಮಾರ್ಟ್‌ ಸಿಟಿ ಯೋಜನೆ ಕುರಿತು ಜರುಗಿದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ನಾಗರಿಕರಿಗೆ ಅತ್ಯವಶ್ಯಕವಾಗಿರುವ ಕಾಮಗಾರಿಗಳನ್ನು ಬೇಗ ಪೂರ್ಣಗೊಳಿಸಿ ಜನರ ಬಳಕೆಗೆ ಅನುವು ಮಾಡಿಕೊಡಬೇಕು ಎಂದು ನಿರ್ದೇಶಿಸಿದರು.
ಕೆಸ್ಸಾರ್ಟಿಸಿ ನಿಲ್ದಾಣ ಕಾಮಗಾರಿಯನ್ನು ತ್ವರಿತವಾಗಿ ಮುಗಿಸಲು ಸರ್ಕಾರದ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚಿಸಿ ಕಾಮಗಾರಿ ಚುರುಕುಗೊಳಿಸಲು ಕ್ರಮ ವಹಿಸಬೇಕು. ಜೊತೆಗೆ ಕುಡಿಯುವ ನೀರು ಒದಗಿಸುವ ಯೋಜನೆ, ಉದ್ಯಾನವನ, ರಸ್ತೆ ಅಭಿವೃದ್ಧಿ ಸೇರಿದಂತೆ ಜನರಿಗೆ ಅತ್ಯವಶ್ಯಕವಾಗಿರುವ ಕಾಮಗಾರಿಗಳನ್ನು ತುರ್ತಾಗಿ ಮುಗಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ರಾಜ್ಯದ ಏಳು ನಗರದಲ್ಲಿ ತುಮಕೂರು ಜಿಲ್ಲೆಯು ಸ್ಮಾರ್ಟ್‌ಸಿಟಿ ಕಾಮಗಾರಿ ಪ್ರಗತಿಯಲ್ಲಿ ಉತ್ತಮ ಸ್ಥಾನ ಪಡೆದಿರುವುದು ಶ್ಲಾಘನೀಯ. ಸ್ಮಾರ್ಟ್‌ಸಿಟಿ ಯೋಜನೆಯ ಒಟ್ಟು 154 ಕಾಮಗಾರಿಗಳ ಪೈಕಿ 97 ಕಾಮಗಾರಿಗಳು ಪೂರ್ಣಗೊಂಡಿವೆ. ಉಳಿದಂತೆ 55 ಯೋಜನೆಗಳು ಪ್ರಗತಿ ಹಂತದಲ್ಲಿದ್ದು, 2 ಕಾಮಗಾರಿ ಟೆಂಡರ್‌ ಹಂತದಲ್ಲಿವೆ. ಅಪೂರ್ಣ ಕಾಮಗಾರಿಗಳನ್ನೂ ನಿಗದಿತ ಗಡುವಿನೊಳಗೆ ಮುಗಿಸಲು ಕ್ರಮ ವಹಿಸುವಂತೆ ನಿರ್ದೇಶಿಸಿದರು.
ಭಾರತ ಸರ್ಕಾರದ ನಗರಾಭಿವೃದ್ಧಿ ಸಚಿವಾಲಯದ ಮಾರ್ಗಸೂಚಿಯಂತೆ ದೇಶದ ನೂರು ಸ್ಮಾರ್ಟ್ ಸಿಟಿಗಳಲ್ಲಿ ಎರಡನೇ ಹಂತದ 27 ಸ್ಮಾರ್ಟ್‌ ಸಿಟಿಗಳ ಪೈಕಿ ತುಮಕೂರು 4ನೇ ರ್ಯಾಂಕ್‌ ಪಡೆದಿದ್ದು, ರಾಜ್ಯದ ಏಳು ಸ್ಮಾರ್ಟ್ ಸಿಟಿಗಳ ಪೈಕಿ ಜಿಲ್ಲೆಯು ಮೊದಲ ಸ್ಥಾನದಲ್ಲಿದೆ. ಕೇಂದ್ರ ನಗರಾಭಿವೃದ್ಧಿ ಸಚಿವಾಲಯ ನೀಡಲಾಗುವ ಸಾಮಾಜಿಕ ವಿಭಾಗದಲ್ಲಿ ಜಿಲ್ಲೆಯು ಡಿಜಿಟಲ್‌ ಗ್ರಂಥಾಲಯ ಯೋಜನೆಗೆ ಪ್ರತಿಷ್ಠಿತ ಪ್ರಶಸ್ತಿ ಜೊತೆಗೆ ಸ್ಮಾರ್ಟ್‌ ಲಾಂಜ್‌, ಬೆಸ್ಟ್ ಸ್ಮಾರ್ಟರ್‌, ಡಿಜಿಟಲ್‌ ನಾರ್ವೆ ಸೆಂಟರ್‌ ಪ್ರಶಸ್ತಿಗಳು ಬಂದಿರುವುದು ಹೆಮ್ಮೆಯ ಸಂಗತಿ ಎಂದರು.
ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ರಂಗಸ್ವಾಮಿ ಮಾತನಾಡಿ, ನಗರದಲ್ಲಿರುವ 53 ಉದ್ಯಾನವನಗಳ ಪೈಕಿ ಸ್ಮಾರ್ಟ್‌ ಸಿಟಿ ಯೋಜನೆಯಡಿ 25 ಕೋಟಿ ರೂ. ವೆಚ್ಚ ಮಾಡಿ 27 ಉದ್ಯಾನವನಗಳನ್ನು ಅಭಿವೃದ್ಧಿಪಡಿಸಲಾಗಿದ್ದು, 29 ಉದ್ಯಾನವನ ಪ್ರಗತಿಯಲ್ಲಿವೆ ಎಂದು ಮಾಹಿತಿ ನೀಡಿದರು.
ನಂತರ ಜಿಲ್ಲಾಧಿಕಾರಿ ಮಾತನಾಡಿ, ನಗರದಲ್ಲಿ ಸಂಗ್ರಹವಾಗುವ ಕಸವನ್ನು ತುಮಕೂರು ನಗರ ಹೊರವಲಯದ ಅಜ್ಜಗೊಂಡನಹಳ್ಳಿ ಕಸ ವಿಲೇವಾರಿ ಘಟಕದಲ್ಲಿ ವಿಲೇವಾರಿ ಮಾಡಲಾಗುತ್ತಿದೆ. ಈ ವಿಲೇವಾರಿ ಘಟಕವನ್ನು ಮತ್ತಷ್ಟು ಆಧುನಿಕ ತಂತ್ರಜ್ಞಾನದ ಮೂಲಕ ಕಸ ನಿರ್ವಹಣೆ ಮಾಡಲು ಕ್ರಮ ವಹಿಸಬೇಕು ಎಂದು ತಿಳಿಸಿದರು.
ನಗರದಲ್ಲಿರುವ ಕೆರೆಗಳನ್ನು ಸ್ಮಾರ್ಟ್ ಗೊಳಿಸುವ ಕುರಿತು ಎರಡು ಹಂತದಲ್ಲಿ ಹಣ ಬಿಡುಗಡೆ ಗೊಂಡಿದ್ದು, ಕೆರೆಗಳ ಒತ್ತುವರಿ ತೆರವು ಜೊತೆಗೆ ಅಭಿವೃದ್ಧಿಪಡಿಸಬೇಕು. ರಾಜಗಾಲುವೆಗಳ ಒತ್ತುವರಿ ತೆರವು, ಬಹು ಆಧುನಿಕ ಕಾಲುವೆ ನಿರ್ಮಾಣ, ಬಗುಡನಹಳ್ಳಿ ಕೆರೆ ಕಾಲುವೆಗಳ ಆಧುನಿಕ ದುರಸ್ತಿ ಕೆಲಸಗಳು ನಡೆಯಬೇಕು. ನಗರದಲ್ಲಿರುವ ಕುಡಿಯುವ ನೀರಿನ ಕೆರೆಗಳನ್ನು ಅಭಿವೃದ್ಧಿಗೊಳಿಸಬೇಕು. ಅಮಾನಿಕೆರೆಯ ಅಭಿವೃದ್ಧಿ ಕಾರ್ಯವೂ ಸುಸಜ್ಜಿತವಾಗಿ ನಡೆಯಬೇಕು ಎಂದರು.
ಸ್ಮಾರ್ಟ್‌ ಸಿಟಿ ಯೋಜನೆಯಡಿ ಪೊಲೀಸ್‌ ಇಲಾಖೆ ನಿರ್ವಹಣೆಯಲ್ಲಿ ನಗರದ ಪ್ರಮುಖ ಪ್ರದೇಶದಲ್ಲಿ ಸಿಸಿ ಟಿವಿ ಅಳವಡಿಸಿದಲ್ಲಿ ಅಪರಾಧ ಕೃತ್ಯಗಳನ್ನು ಕಡಿಮೆಗೊಳಿಸಬಹುದು ಹಾಗೂ ಟ್ರಾಫಿಕ್‌ ಕಂಟ್ರೋಲ್‌ ಮಾಡಲು ಅನುಕೂಲವಾಗುತ್ತದೆ ಎಂದು ತಿಳಿಸಿದರು.
ಉಳಿದಂತೆ ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಚರ್ಚಿಸಲಾಯಿತು.

Get real time updates directly on you device, subscribe now.

Comments are closed.

error: Content is protected !!