ಮಕ್ಕಳು ಪರೀಕ್ಷೆ ಬರೆಯಲು ಸುರಕ್ಷತಾ ವಾತಾವರಣ ಕಲ್ಪಿಸಿ: ಸಚಿವ ಮಾಧುಸ್ವಾಮಿ

ಯಾವ ವಿದ್ಯಾರ್ಥಿಯೂ ಎಕ್ಸಾಂಗೆ ಗೈರಾಗಬಾರದು

143

Get real time updates directly on you device, subscribe now.

ತುಮಕೂರು: ಯಾವೊಬ್ಬ ವಿದ್ಯಾರ್ಥಿಯೂ ಪರೀಕ್ಷೆಗೆ ಗೈರು ಹಾಜರಾಗದಂತೆ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ತುಮಕೂರು ತಾಲೂಕಿಗೆ ಸಂಬಂಧಿಸಿದಂತೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಪೂರ್ವ ಸಿದ್ಧತೆ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಎಲ್ಲಾ ವಿದ್ಯಾರ್ಥಿಗಳು ಬೆಳಗ್ಗೆ 8 ಗಂಟೆಯೊಳಗೆ ಪರೀಕ್ಷಾ ಕೇಂದ್ರಕ್ಕೆ ಹಾಜರಾಗುವಂತೆ ನೋಡಿಕೊಳ್ಳಬೇಕು, ನಿಗದಿತ ಸಮಯಕ್ಕೆ ಸರಿಯಾಗಿ ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರಕ್ಕೆ ಕರೆದೊಯ್ಯಲು ಸಾರಿಗೆ ವ್ಯವಸ್ಥೆ ಕಲ್ಪಿಸಬೇಕು ಎಂದು ನಿರ್ದೇಶಿಸಿದರು.
ಕಾರಣಾಂತರಗಳಿಂದ ಪರೀಕ್ಷಾ ಕೇಂದ್ರಕ್ಕೆ ಹಾಜರಾಗಲು ಸಮಸ್ಯೆ ಉಂಟಾದ ಮಕ್ಕಳನ್ನು ಸರ್ಕಾರಿ ವಾಹನದಲ್ಲಿಯೇ ಕೇಂದ್ರಕ್ಕೆ ಕರೆತರಬೇಕು. ಸಕಾರಣವಿಲ್ಲದೆ ಮಕ್ಕಳು ಪರೀಕ್ಷೆಗೆ ಗೈರು ಹಾಜರಾದರೆ ಸಂಬಂಧಿಸಿದ ಶಾಲಾ ಮುಖ್ಯೋಪಾಧ್ಯಾಯರನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು. ಗೈರು ಹಾಜರಾಗಲು ಸಕಾರಣ ಇದ್ದರೆ ಅಂತಹ ಮಕ್ಕಳ ಪಟ್ಟಿಯನ್ನು ಡಿಡಿಪಿಐ ಅಥವಾ ಬಿಇಒಗಳಿಗೆ ಒದಗಿಸಬೇಕು. ಇಂತಹ ಮಕ್ಕಳು ಹಾಗೂ ಅವರ ಪೋಷಕರಿಗೆ ಮನವರಿಕೆ ಮಾಡಿ ವಿದ್ಯಾರ್ಥಿಗಳನ್ನು ಪರೀಕ್ಷೆ ಬರೆಯಲು ಕರೆತರಬೇಕು ಎಂದು ತಿಳಿಸಿದರು.
ಮಕ್ಕಳು ಪರೀಕ್ಷಾ ಕೇಂದ್ರಕ್ಕೆ ತಡವಾಗಿ ಆಗಮಿಸಿದರೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಬೇಕು. ಯಾರನ್ನೂ ಪರೀಕ್ಷೆಯಿಂದ ವಂಚಿತರನ್ನಾಗಿ ಮಾಡಬಾರದು. ಎಲ್ಲಾ ಮಕ್ಕಳು ಪರೀಕ್ಷೆ ಬರೆಯಲು ಸುರಕ್ಷತಾ ವಾತಾವರಣ ಕಲ್ಪಿಸಬೇಕೆಂದು ಸೂಚನೆ ನೀಡಿದರು.
ಕೋವಿಡ್‌ ಸೋಂಕಿತ ಮಕ್ಕಳು ಹಾಗೂ ಲಕ್ಷಣಗಳುಳ್ಳ ಮಕ್ಕಳನ್ನು ಪ್ರತ್ಯೇಕವಾಗಿ ಪರೀಕ್ಷೆ ಬರೆಯುವ ವ್ಯವಸ್ಥೆ ಮಾಡಬೇಕು. ಕೋವಿಡ್‌ ಲಕ್ಷಣಗಳಿರುವ ಅನುಮಾನ ಕಂಡುಬಂದರೆ ಅಂತಹ ವಿದ್ಯಾರ್ಥಿಗಳನ್ನು ಕೋವಿಡ್‌ ಪರೀಕ್ಷೆಗೆ ಒಳಪಡಿಸಬೇಕು. ಪರೀಕ್ಷೆಗೆ ಹಾಜರಾದ ಮಕ್ಕಳಲ್ಲಿ ಲಕ್ಷಣಗಳು ಕಂಡುಬಂದರೆ ಪ್ರತ್ಯೇಕವಾಗಿ ಪರೀಕ್ಷೆ ಬರೆಸಬೇಕು, ಕೋವಿಡ್‌ ಹೊರತುಪಡಿಸಿ ಯಾವುದೇ ರೋಗವಿದ್ದರೂ ಪ್ರತ್ಯೇಕ ವ್ಯವಸ್ಥೆಯೊಂದಿಗೆ ಪರೀಕ್ಷೆ ಬರೆಯಲು ಶ್ರಮಿಸಬೇಕು ಎಂದು ನಿರ್ದೇಶನ ನೀಡಿದರು.
ಅಗತ್ಯವಿರುವ ವಿದ್ಯಾರ್ಥಿಗಳಿಗೆ ಸಮೀಪದ ಹಾಸ್ಟೆಲ್ ನಲ್ಲಿ ಉಪಹಾರ ತಯಾರಿಸಿ ನೀಡಬೇಕು. ಯಾವುದೇ ಕಾರಣಕ್ಕೂ ಹೊರಗಡೆಯಿಂದ ಉಪಹಾರದ ವ್ಯವಸ್ಥೆ ಮಾಡಬಾರದು. ವಿದ್ಯಾರ್ಥಿಗಳಿಗೆ ಕುಡಿಯಲು ಕಡ್ಡಾಯವಾಗಿ ಬಿಸಿ ನೀರನ್ನೇ ಕೊಡಬೇಕು, ಚಾಕೊಲೇಟ್‌ ಸೇರಿದಂತೆ ಯಾವುದೇ ತಿನಿಸು ತಿಂಡಿಗಳನ್ನು ಪರೀಕ್ಷಾ ಕೇಂದ್ರಕ್ಕೆ ಕೊಂಡೊಯ್ಯಲು ಅವಕಾಶ ಮಾಡಿಕೊಡಬಾರದು ಎಂದು ಸೂಚಿಸಿದರು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಎಸ್‌ಒಪಿ ಮಾರ್ಗಸೂಚಿ ಅನ್ವಯವೇ ಪರೀಕ್ಷೆ ನಡೆಸಬೇಕು, ಕಟ್ಟುನಿಟ್ಟಾಗಿ ಕೋವಿಡ್‌ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು, ಪರೀಕ್ಷಾ ಕೇಂದ್ರವನ್ನು ಪರೀಕ್ಷಾ ಮುನ್ನಾ ದಿನವೇ ಸ್ಯಾನಿಟೈಸ್‌ ಮಾಡಬೇಕು, ಜೊತೆಗೆ ನೀರಿನ ವ್ಯವಸ್ಥೆಯನ್ನೂ ಸಮರ್ಪಕವಾಗಿ ಮಾಡಬೇಕು. ಶೌಚಾಲಯಗಳನ್ನು ಸ್ವಚ್ಛಗೊಳಿಸಿ ಬಳಕೆಗೆ ಯೋಗ್ಯವಾಗಿರುವಂತೆ ನೋಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.
ಪ್ರತಿಯೊಂದು ಪರೀಕ್ಷಾ ಕೇಂದ್ರಕ್ಕೂ ಆರೋಗ್ಯ ಇಲಾಖೆಯಿಂದ ಇಬ್ಬರು ಆರೋಗ್ಯ ಕಾರ್ಯಕರ್ತರನ್ನು ನೇಮಿಸಬೇಕು, ಪರೀಕ್ಷೆಗೆ ಹಾಜರಾಗುವ ಮಕ್ಕಳನ್ನು ಥರ್ಮಲ್‌ ಸ್ಕ್ಯಾನಿಂಗ್‌ ಹಾಗೂ ಆಕ್ಸಿಮೀಟರ್‌ ತಪಾಸಣೆಗೆ ಒಳಪಡಿಸಬೇಕು. ಮುಂಜಾಗ್ರತಾ ಕ್ರಮವಾಗಿ ತುರ್ತು ಸೇವೆಗಾಗಿ ಆ್ಯಂಬುಲೆನ್ಸ್ ಗಳನ್ನು ಸಿದ್ಧವಾಗಿಟ್ಟುಕೊಳ್ಳಬೇಕು, ಎಲ್ಲಿಯೂ ಯಾವುದೆ ಕೊರತೆಯಾಗದಂತೆ ಪರೀಕ್ಷೆ ನಡೆಸುವಂತೆ ನಿರ್ದೇಶಿಸಿದರು.
ಭಯದ ವಾತಾವರಣವಿಲ್ಲದಂತೆ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಸುರಕ್ಷಿತ ವಾತಾವರಣ ಸೃಷ್ಟಿಮಾಡಬೇಕು, ಪರೀಕ್ಷೆಯ ಬಗ್ಗೆ ಮಕ್ಕಳಿಗೆ ಆತಂಕ ಹುಟ್ಟಿಸಬಾರದು. ಹೊಸ ಪರೀಕ್ಷಾ ವಿಧಾನದ ಬಗ್ಗೆ ವಿದ್ಯಾರ್ಥಿಗಳಿಗೆ ಅರ್ಥ ಮಾಡಿಸಿ, ಭಯವಿಲ್ಲದೆ ಪರೀಕ್ಷೆ ಬರೆಯುವಂತೆ ಮಾರ್ಗದರ್ಶನ ನೀಡಬೇಕೆಂದು ಸೂಚನೆ ನೀಡಿದರು.
ಮುಂದಿನ ಶೈಕ್ಷಣಿಕ ಬದುಕಿನ ಆಯ್ಕೆಗಾಗಿ ಪರೀಕ್ಷೆ ಅನಿವಾರ್ಯವಾಗಿದ್ದು, ಯಾರೂ ಉದಾಸೀನ ತೋರದೆ ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು, ಶಿಕ್ಷಣ ಇಲಾಖೆ ಮಾತ್ರವಲ್ಲದೆ ಸಂಬಂಧಿಸಿದ ಎಲ್ಲಾ ಇಲಾಖೆಗಳು ಸಮನ್ವಯದಿಂದ ಪರೀಕ್ಷೆ ಯಶಸ್ವಿಯಾಗಿ ನಡೆಸಬೇಕು ಎಂದು ನಿರ್ದೇಶಿಸಿದರು.
ಜಿಲ್ಲೆಯಲ್ಲಿ ಪರೀಕ್ಷೆ ಬರೆಯುತ್ತಿರುವ ಎಲ್ಲಾ ಮಕ್ಕಳಿಗೂ ಮಾಸ್‌್ಕ ಮತ್ತು ಸ್ಯಾನಿಟೈಸ್‌ ವ್ಯವಸ್ಥೆಯನ್ನು ಸರ್ಕಾರವೇ ಮಾಡುತ್ತಿದೆ. ಆದ್ದರಿಂದ ದಾನಿಗಳಿಂದ ನೆರವು ಪಡೆಯುವ ಅವಶ್ಯಕತೆಯಿಲ್ಲ ಎಂದು ತಿಳಿಸಿದರು.
ಪರೀಕ್ಷೆಗೆ ತೆರಳಲು ಅಗತ್ಯವಿರುವ ವಿದ್ಯಾರ್ಥಿಗಳಿಗೆ ಕೊರತೆಯಾಗದಂತೆ ಉಚಿತ ಸಾರಿಗೆ ವ್ಯವಸ್ಥೆ ಒದಗಿಸುವಂತೆ ಕೆಸ್ಸಾರ್ಟಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ವೈ.ಎಸ್‌.ಪಾಟೀಲ ಮಾತನಾಡಿ, ಹೊಸ ಪರೀಕ್ಷಾ ವಿಧಾನದ ಬಗ್ಗೆ ಮಕ್ಕಳಲ್ಲಿ ಆತಂಕ ಉಂಟು ಮಾಡದೆ ಧೈರ್ಯವಾಗಿ ಪರೀಕ್ಷೆ ಬರೆಯುವಂತೆ ಆತ್ಮಸ್ಥೈರ್ಯ ತುಂಬಬೇಕು, ಆರೋಗ್ಯ ತಪಾಸಣೆಗಾಗಿ ಬಳಸುವ ಥರ್ಮಲ್‌ ಸ್ಕ್ಯಾನರ್‌ ಹಾಗೂ ಆಕ್ಸಿಮೀಟರ್‌ಗಳು ಹಾಗೂ ಪರೀಕ್ಷಾ ಕೇಂದ್ರಗಳ ಕೊಠಡಿಗಳಲ್ಲಿರುವ ಗಡಿಯಾರಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು ಎಂದು ಹೇಳಿದರು.
ಪರೀಕ್ಷೆಯನ್ನು ಸುಗಮವಾಗಿ ನಡೆಸುವ ದೃಷ್ಟಿಯಿಂದ ಪರೀಕ್ಷಾ ಕೇಂದ್ರಗಳ 200 ಮೀಟರ್‌ ವಾಪ್ತಿಯಲ್ಲಿ ಸೆಕ್ಷನ್‌ 144 ನಿಷೇಧಾಜ್ಞೆ ಜಾರಿಗೆ ತರಲಾಗುವುದು. ಅಧಿಕೃತ ವ್ಯಕ್ತಿಗಳನ್ನು ಹೊರತುಪಡಿಸಿ ನಿರ್ಬಂಧಿತ ಪ್ರದೇಶಗಳಿಗೆ ಯಾರಿಗೂ ಪ್ರವೇಶಾವಕಾಶ ಇರುವುದಿಲ್ಲ, ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ಅನಾನುಕೂಲತೆ ಆಗಬಾರದು, ನಿಯೋಜಿತ ಅಧಿಕಾರಿ, ಸಿಬ್ಬಂದಿ ತಪ್ಪಿನಿಂದ ಗೊಂದಲ ಸೃಷ್ಟಿಯಾಗದಂತೆ ಕ್ರಮ ವಹಿಸಬೇಕು. ಪ್ರತಿ ಪರೀಕ್ಷಾ ಕೇಂದ್ರಕ್ಕೆ ನೋಡಲ್‌ ಅಧಿಕಾರಿಗಳನ್ನು ನೇಮಕ ಮಾಡಲಾಗಿದ್ದು, ಯಾವುದೇ ಸಮಸ್ಯೆ ಇದ್ದರೆ ಅವರನ್ನು ಸಂಪರ್ಕಿಸಬೇಕು ಎಂದರು.
ಪರೀಕ್ಷಾ ಮಾರ್ಗಸೂಚಿಯ ಅನ್ವಯವೇ ಪರೀಕ್ಷೆ ನಡೆಸಬೇಕು, ಮಾರ್ಗಸೂಚಿ ಉಲ್ಲಂಘನೆಯಾಗಿ ಪರೀಕ್ಷೆಯಲ್ಲಿ ತೊಂದರೆ ಉಂಟಾದರೆ ಸಂಬಂಧಿಸಿದವರನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ಶಾಸಕ ಜಿ.ಬಿ.ಜ್ಯೋತಿಗಣೇಶ್‌ ಮಾತನಾಡಿ, ಯಾವುದೇ ಸಮಸ್ಯೆ ಉಂಟಾಗದಂತೆ ಸಕಲ ಸಿದ್ಧತೆಗಳನ್ನು ಕೈಗೊಂಡು ಪರೀಕ್ಷೆ ನಡೆಸಬೇಕು. ತುಮಕೂರು ನಗರ ಹಾಗೂ ಗ್ರಾಮಾಂತರ ಸೇರಿ ಸುಮಾರು 10 ಸಾವಿರ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಣಿ ಮಾಡಿಕೊಂಡಿದ್ದು, ಪರೀಕ್ಷೆ ನಡೆಸಲು ಅವಶ್ಯವಿರುವ ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ನಿರ್ದೇಶಿಸಿದರು.
ತುಮಕೂರು ಕ್ಷೇತ್ರ ಶಿಕ್ಷಣಾಧಿಕಾರಿ ಹನುಮನಾಯಕ ಮಾತನಾಡಿ, ತುಮಕೂರು ತಾಲೂಕಿನಲ್ಲಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳು ಹಾಗೂ ಪರೀಕ್ಷಾ ಕೇಂದ್ರದ ಸಿದ್ಧತೆಗಳ ಬಗ್ಗೆ ಮಾಹಿತಿ ಒದಗಿಸಿದರು.
ಸಭೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸಿ.ನಂಜಯ್ಯ ಸೇರಿದಂತೆ ಮಂಜುನಾಥ್‌, ಕ್ಷೇತ್ರ ಶಿಕ್ಷಣಾಧಿಕಾರಿಗಳು, ವಿವಿಧ ಶಾಲಾ ಮುಖ್ಯೋಪಾಧ್ಯಾಯರು, ಅಧೀಕ್ಷಕರು ಇತರರಿದ್ದರು.

Get real time updates directly on you device, subscribe now.

Comments are closed.

error: Content is protected !!