ವೈದ್ಯರ ಕರ್ತವ್ಯಕ್ಕೆ ಅಡ್ಡಿ- ಕ್ರಮ ಕೈಗೊಳ್ಳಲು ಒತ್ತಾಯ

220

Get real time updates directly on you device, subscribe now.

ಕುಣಿಗಲ್‌: ಇಬ್ಬರು ವ್ಯಕ್ತಿಗಳು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯಶಬ್ದಗಳಿಂದ ನಿಂದಿಸಿದ್ದರಿಂದ ಬೇಸತ್ತ ಸಾರ್ವಜನಿಕ ಆಸ್ಪತ್ರೆಯ ವೈದ್ಯರು, ಅರೆ ವೈದ್ಯಕೀಯ ಸಿಬ್ಬಂದಿ ಸಾಮೂಹಿಕವಾಗಿ ಪೊಲೀಸ್‌ ಠಾಣೆಗೆ ಆಗಮಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ ಘಟನೆ ನಡೆಯಿತು.
ಸೋಮವಾರ ಆಡಳಿತ ವೈದ್ಯಾಧಿಕಾರಿ ಡಾ.ಗಣೇಶಬಾಬು ನೇತೃತ್ವದಲ್ಲಿ ಠಾಣೆಗೆ ಆಗಮಿಸಿದ ಆಸ್ಪತ್ರೆಯಲ್ಲಿ ಕರ್ತವ್ಯದ ಮೇಲಿದ್ದ ವೈದ್ಯರು, ಅರೆ ವೈದ್ಯಕೀಯ ಸಿಬ್ಬಂದಿ ಡಿವೈಎಸ್ಪಿ ರಮೇಶ್‌ ಅವರನ್ನು ಭೇಟಿ ಕರ್ತವ್ಯನಿರತ ವೈದ್ಯರು, ಅರೆ ವೈದ್ಯಕೀಯ ಸಿಬ್ಬಂದಿಯ ರಕ್ಷಣೆಗೆ ಆಗ್ರಹಿಸಿ, ಘಟನೆಗೆ ಸಂಬಂಧಿಸಿದಂತೆ ದೂರು ನೀಡಿದರು. ದೂರಿನಲ್ಲಿ ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಗಣೇಶ್ ಬಾಬು ರೋಗಿಗಳ ತಪಾಸಣೆ ನಡೆಸುತ್ತಿದ್ದ ಸಮಯದಲ್ಲಿ ಸ್ಥಳಕ್ಕೆ ಆಗಮಿಸಿ ಹೊನ್ನೇನಹಳ್ಳಿ ಗ್ರಾಮದ ಚಿಕ್ಕೇಗೌಡ, ಕುಂದೂರು ಗ್ರಾಮದ ಚಂದ್ರಶೇಖರ ಎಂಬುವರು ಏಕಾಏಕಿ ಜಗಳ ತೆಗೆದು ಅವಾಚ್ಯ ಶಬ್ದಗಳಿಂದ ನಿಂದಿಸಿ, ವೈದ್ಯರ ಮೇಲೆ ಹಲ್ಲೆ ಮಾಡಲು ಮುಂದಾಗಿದ್ದು, ಸ್ಥಳದಲ್ಲಿದ್ದ ಇತರೆ ಸಿಬ್ಬಂದಿ ಹಾಗೂ ಅರೆವೈದ್ಯಕೀಯ ಸಿಬ್ಬಂದಿ ಮಧ್ಯಪ್ರವೇಶಿಸಿ ಜಗಳ ಬಿಡಿಸಿದರೂ ಸಮಾಧಾನಗೊಳ್ಳದ ಗಲಭೆಕೋರರು, ಸರ್ಕಾರಿ ಆಸ್ಪತ್ರೆ ವೈದ್ಯರೆಲ್ಲಾ ಹೆಚ್ಚುಕೊಂಡಿದ್ದೀರಾ, ನಿಮಗೆ ಗತಿ ಕಾಣಿಸುತ್ತೇವೆಂದು ಅಬ್ಬರಿಸಿ ಬೆದರಿಕೆ ಹಾಕಿದ್ದಾರೆ. ಇಬ್ಬರು ದಿನಾಲೂ ಆಸ್ಪತ್ರೆಗೆ ಆಗಮಿಸಿ ಆಸ್ಪತ್ರೆ ಸಿಬ್ಬಂದಿ, ಅರೆ ವೈದ್ಯಕೀಯ ಸಿಬ್ಬಂದಿ, ವೈದ್ಯರು ಕರ್ತವ್ಯ ನಿರ್ವಹಿಸಲು ಅಡಚಣೆ ಮಾಡುತ್ತಿದ್ದು ಇವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.
ವೈದ್ಯರು ನೀಡಿದ ದೂರಿನ ಮೇರೆಗೆ ಕುಣಿಗಲ್‌ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Get real time updates directly on you device, subscribe now.

Comments are closed.

error: Content is protected !!