ದೌರ್ಜನ್ಯ ತಡೆಗಟ್ಟಲು ಕ್ರಮ ಕೈಗೊಳ್ಳಿ: ವೈ.ಎಸ್‌.ಪಾಟೀಲ

155

Get real time updates directly on you device, subscribe now.

ತುಮಕೂರು: ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ಮೇಲಿನ ದೌರ್ಜನ್ಯ ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಬೇಕು, ದೌರ್ಜನ್ಯ ನಡೆದ ತಕ್ಷಣವೇ ಪ್ರಕರಣ ದಾಖಲಿಸಿಕೊಂಡು ಸಂತ್ರಸ್ಥರಿಗೆ ಪರಿಹಾರ ಒದಗಿಸುವಂತೆ ಮತ್ತು ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ಸೂಕ್ತ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಜಾಗೃತಿ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಪರಿಶಿಷ್ಟ ಜನಾಂಗದವರ ಮೇಲೆ ದೌರ್ಜನ್ಯ ನಡೆದ ತಕ್ಷಣವೇ ಸಂಬಂಧಿಸಿದ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪೊಲೀಸ್‌ ಇಲಾಖೆಯೊಂದಿಗೆ ಸಮನ್ವಯ ಸಾಧಿಸಿ ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ ನೊಂದ ಸಂತ್ರಸ್ಥರಿಗೆ ಸೂಕ್ತ ರಕ್ಷಣೆ ಒದಗಿಸಲು ಕ್ರಮ ವಹಿಸಬೇಕು ಎಂದು ತಿಳಿಸಿದರು.
ಜಿಲ್ಲೆಯಲ್ಲಿ 2021ರ ಫೆಬ್ರವರಿಯಿಂದ ಜುಲೈ ಮಾಹೆಯ ಅಂತ್ಯದವರೆಗೆ ನಡೆದ ದೌರ್ಜನ್ಯ ಪ್ರಕರಣಗಳಲ್ಲಿ ನೊಂದ ಪರಿಶಿಷ್ಟ ಜಾತಿಯ 37 ಪ್ರಕರಣಗಳ ಪೈಕಿ 76 ಸಂತ್ರಸ್ಥರಿಗೆ ಸೂಕ್ತ ಪರಿಹಾರ ಒದಗಿಸಿದ್ದು, ಬಾಕಿ ಉಳಿದ ಪ್ರಕರಣಗಳಲ್ಲಿಯೂ ಪರಿಹಾರ ಒದಗಿಸಬೇಕು ಎಂದು ನಿರ್ದೇಶಿಸಿದರು.
ನಕಲಿ ಜಾತಿ ಪ್ರಮಾಣಪತ್ರ ಸೃಷ್ಟಿಸಿಕೊಂಡು ಪರಿಶಿಷ್ಟ ಜಾತಿ, ವರ್ಗದ ಸೌಲಭ್ಯ ಪಡೆದಿರುವ ಹಾಗೂ ನಕಲಿ ಪ್ರಮಾಣ ಪತ್ರದಿಂದ ಸೌಲಭ್ಯ ಪಡೆದಿರುವುದು ದಾಖಲೆಗಳಿಂದ ಸಾಬೀತಾದಲ್ಲಿ ಅಂತಹವರ ವಿರುದ್ಧ ಶಿಸ್ತು ಕ್ರಮಕೈಗೊಳ್ಳಬೇಕು. ದೌರ್ಜನ್ಯ ಪ್ರಕರಣಗಳನ್ನು ಕಾಲ ಕಾಲಕ್ಕೆ ಇತ್ಯರ್ಥ ಪಡಿಸುವ ಮೂಲಕ ಅನ್ಯಾಯಕ್ಕೆ ಒಳಗಾದವರಿಗೆ ನ್ಯಾಯ ಸಿಗುವಂತಾಗಬೇಕು ಎಂದು ಸೂಚಿಸಿದರು.
ಜಿಲ್ಲಾ ಜಾಗೃತಿ ಉಸ್ತುವಾರಿ ಸಮಿತಿ ಸಭೆಯ ಸದಸ್ಯರು ಮಾತನಾಡಿ, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದವರ ಮೇಲೆ ನಡೆದ ಕೆಲವು ದೌರ್ಜನ್ಯ ಪ್ರಕರಣಗಳನ್ನು ತಕ್ಷಣವೇ ದಾಖಲಿಸಿಕೊಳ್ಳುವುದಿಲ್ಲ. ಹಾಗಾಗಿ ಪ್ರಕರಣ ನಡೆದ ವಿಚಾರ ಗಮನಕ್ಕೆ ಬಂದ ಮರುಕ್ಷಣವೇ ಪ್ರಕರಣ ದಾಖಲಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.
ಇದಕ್ಕೆ ಪ್ರತಿಕ್ರಿಯೆ ನೀಡಿದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರಾಹುಲ್‌ ಕುಮಾರ್‌ ಶಹಪುರವಾಡ್‌, ದೌರ್ಜನ್ಯ ನಡೆದ ತಕ್ಷಣವೇ ಪ್ರಕರಣ ದಾಖಲಿಕೊಂಡು ಮುಂದಿನ ಕ್ರಮ ಕೈಗೊಳ್ಳುವ ಕಾರ್ಯ ಸೂಕ್ತ ರೀತಿಯಲ್ಲಿ ನಡೆಯುತ್ತಿದೆ. ದಾಖಲಿಸಿಕೊಳ್ಳದ ದೌರ್ಜನ್ಯ ಪ್ರಕರಣಗಳನ್ನು ಗಮನಕ್ಕೆ ತಂದರೆ ಸೂಕ್ತ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಡಾ.ಬಿ.ಆರ್‌.ಅಂಬೇಡ್ಕರ್‌ ಅಭಿವೃದ್ಧಿ ನಿಗಮ ಕುರಿತು ಚರ್ಚೆ ನಡೆಯಿತು. ಈ ವೇಳೆ ಜಿಲ್ಲಾಧಿಕಾರಿ ಮಾತನಾಡಿ, ವಿವಿಧ ಸೌಲಭ್ಯಗಳ ವಿತರಣೆಯಲ್ಲಿ ಹಗರಣ ನಡೆದಿದೆ ಎನ್ನಲಾದ ಆರೋಪ ಕೇಳಿ ಬಂದಿದ್ದು, ಡಾ.ಬಿ.ಆರ್‌.ಅಂಬೇಡ್ಕರ್‌ ಅಭಿವೃದ್ಧಿ ನಿಗಮ ವ್ಯಾಪ್ತಿಯಲ್ಲಿ ಅರ್ಹ ಫಲಾನುಭವಿಗಳಿಗೆ ಸೌಲಭ್ಯಗಳು ಪಾರದರ್ಶಕ ರೀತಿಯಲ್ಲಿ ದೊರೆಯುವಂತೆ ನೋಡಿಕೊಳ್ಳಬೇಕು. ಹಗರಣ ನಡೆದಿದೆ ಎನ್ನಲಾದ ಆರೋಪ ಕುರಿತು ಸೂಕ್ತ ಕ್ರಮ ವಹಿಸಬೇಕು ಎಂದು ನಿರ್ದೇಶಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಉಪವಿಭಾಗಾಧಿಕಾರಿ ಅಜಯ್‌, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಪ್ರೇಮಾ ಇತರೆ ಅಧಿಕಾರಿಗಳು ಇದ್ದರು.

Get real time updates directly on you device, subscribe now.

Comments are closed.

error: Content is protected !!