ಲಸಿಕೆ ಸ್ಟಾಕ್‌ ಇಟ್ಟುಕೊಳ್ಳದೆ ವಿತರಿಸಿ: ವೈ.ಎಸ್‌.ಪಾಟೀಲ

186

Get real time updates directly on you device, subscribe now.

ತುಮಕೂರು: ಸರ್ಕಾರದಿಂದ ಪೂರೈಕೆಯಾಗಿ ಜಿಲ್ಲಾಡಳಿತದಿಂದ ತಾಲೂಕುವಾರು ಹಂಚಿಕೆಯಾಗುವ ಲಸಿಕೆಯನ್ನು ಸ್ಟಾಕ್‌ ಇಟ್ಟುಕೊಳ್ಳದೆ ಅಂದಿನ ಲಸಿಕೆಯನ್ನು ಅಂದೇ ಸಂಪೂರ್ಣವಾಗಿ ವಿತರಣೆ ಮಾಡಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್‌.ಪಾಟೀಲ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವೀಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಕೋವಿಡ್‌-19 ಕುರಿತ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ಲಸಿಕೆ ನೀಡುವಲ್ಲಿ ಯಾವುದೇ ನಿರ್ಲಕ್ಷ್ಯ ತೋರದೆ ಬೇಡಿಕೆ ಹೆಚ್ಚಿರುವ ಪ್ರದೇಶಗಳಲ್ಲಿ ಲಸಿಕೆ ನೀಡಲು ಸೂಕ್ತ ಕ್ರಮ ವಹಿಸಬೇಕು. ಹೆಚ್ಚು ಜಾಗೃತಿ ಮೂಡಿಸುವ ಮೂಲಕ ಗ್ರಾಮೀಣ ಭಾಗದಲ್ಲಿ ಲಸಿಕೆ ಪ್ರಮಾಣ ಹೆಚ್ಚಿಸಬೇಕು ಎಂದು ನಿರ್ದೇಶಿಸಿದರು.
ಲಸಿಕೆ ವಿತರಣೆ ಕುರಿತು ತಾಲೂಕುವಾರು ಪ್ರಗತಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿಗಳು, ಕಡಿಮೆ ಪ್ರಮಾಣದಲ್ಲಿ ಲಸಿಕೆ ವಿತರಣೆಯಾಗಿರುವ ತಾಲೂಕುಗಳಲ್ಲಿ ಲಸಿಕೆ ಪ್ರಮಾಣ ಹೆಚ್ಚಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಮೊದಲ ಡೋಸ್‌ ಲಸಿಕೆ ಪಡೆದು ಎರಡನೇ ಡೋಸ್‌ ಲಸಿಕೆ ಪಡೆಯುವ ಫಲಾನುಭವಿಗಳಿಗೆ ಲಸಿಕೆ ನೀಡಲು ಮೊದಲಾದ್ಯತೆ ನೀಡಬೇಕು. ಉಳಿದ ಎಲ್ಲಾ ಕೆಲಸಗಳಿಗಿಂತ ಲಸಿಕೆ ವಿತರಣಾ ಕಾರ್ಯಕ್ಕೆ ಆದ್ಯತೆ ನೀಡಬೇಕು ಎಂದು ತಿಳಿಸಿದರು.

ಕೋವಿಡ್‌ ಪರೀಕ್ಷೆ ಹೆಚ್ಚಿಸಿ
ಕೋವಿಡ್‌ ಸೋಂಕಿನ ಸಂಪೂರ್ಣ ನಿಯಂತ್ರಣಕ್ಕಾಗಿ ಕೋವಿಡ್‌ ಪರೀಕ್ಷಾ ಪ್ರಮಾಣ ಹೆಚ್ಚಿಸಬೇಕು. ಹೆಚ್ಚು ಕೋವಿಡ್‌ ಪ್ರಕರಣಗಳು ಕಂಡು ಬರುವ ಪ್ರದೇಶಗಳಲ್ಲಿ ಕೋವಿಡ್‌ ಪರೀಕ್ಷೆಗಳನ್ನು ಹೆಚ್ಚಾಗಿ ನಡೆಸಬೇಕು. ಅಧಿಕಾರಿಗಳು ಸಮನ್ವಯ ಸಾಧಿಸಿಕೊಂಡು ಕೋವಿಡ್‌ ಪರೀಕ್ಷೆಗಳನ್ನು ಗರಿಷ್ಟ ಮಟ್ಟದಲ್ಲಿ ನಡೆಸಲು ಕ್ರಮ ವಹಿಸಬೇಕು ಎಂದು ನಿರ್ದೇಶಿಸಿದರು.

ಹೋಂ ಐಸೋಲೇಷನ್‌ ಸೋಂಕಿತರ ಭೇಟಿ ಕಡ್ಡಾಯ
ಅಪರ ಜಿಲ್ಲಾಧಿಕಾರಿ ಕೆ.ಚೆನ್ನಬಸಪ್ಪ ಮಾತನಾಡಿ, ಕೋವಿಡ್‌ ದೃಢಪಟ್ಟು ಮನೆಯಲ್ಲಿ ಹೋಂ ಐಸೋಲೇಷನ್‌ನಲ್ಲಿ ಚಿಕಿತ್ಸೆ ಪಡೆಯುವವರನ್ನು ಕಡ್ಡಾಯವಾಗಿ ಭೇಟಿ ಮಾಡಿ ಆರೋಗ್ಯ ಹಾಗೂ ಚಿಕಿತ್ಸಾ ವಿಧಾನದ ಬಗ್ಗೆ ಪರಿಶೀಲಸಬೇಕು. ಅಲ್ಲದೆ, ಸೋಂಕಿತರ ಪತ್ತೆ ಕಾರ್ಯವನ್ನೂ ಸಮರ್ಪಕವಾಗಿ ನಡೆಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಉಪವಿಭಾಗಾಧಿಕಾರಿ ಅಜಯ್‌, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗೇಂದ್ರಪ್ಪ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ವೀರಭದ್ರಯ್ಯ ಸೇರಿದಂತೆ ಇತರೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.

Get real time updates directly on you device, subscribe now.

Comments are closed.

error: Content is protected !!