ವಿಧಾನಸಭಾ ಚುನಾವಣೆ ಯಾವಾಗ ಬೇಕಾದರೂ ಬರಬಹುದು: ಸಲೀಂ ಅಹಮದ್

ಎಲೆಕ್ಷನ್‌ ಎದುರಿಸಲು ಕೈ ಕಾರ್ಯಕರ್ತರು ಸಿದ್ಧರಾಗಲಿ

192

Get real time updates directly on you device, subscribe now.

ತುಮಕೂರು: ಪ್ರಸ್ತುತ ರಾಜಕೀಯ ವಿದ್ಯಮಾನಗಳನ್ನು ಗಮನಿಸಿದರೆ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಯಾವಾಗ ಬೇಕಾದರೂ ಬರಬಹುದು, ಹಾಗಾಗಿ ಕಾರ್ಯಕರ್ತರು, ಮುಖಂಡರು ಚುನಾವಣೆ ಎದುರಿಸಲು ಸಿದ್ಧರಾಗಬೇಕಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್‌ ತಿಳಿಸಿದ್ದಾರೆ.
ನಗರದ ಜಿಲ್ಲಾ ಕಾಂಗ್ರೆಸ್‌ ಕಚೇರಿಗೆ ಆಗಮಿಸಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ, ಮುಂದಿನ ಕೆಲವೇ ದಿನಗಳಲ್ಲಿ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ ಎದುರಾಗಲಿವೆ, ಇದರ ಜೊತೆಗೆ ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಯಾಗುವ ವಿಧಾನಪರಿಷತ್‌ ಚುನಾವಣೆಯೂ ಎದುರಾಗಲಿದೆ. ಹಾಗಾಗಿ ಪಕ್ಷದ ಕಾರ್ಯಕರ್ತರು, ಮುಖಂಡರು, ಹೋಬಳಿ ಮತ್ತು ಬೂತ್‌ ಮಟ್ಟದಲ್ಲಿ ಯುವ ಕಾರ್ಯಪಡೆ ರಚಿಸಿಕೊಂಡು ಪಕ್ಷದ ಪರ ಕೆಲಸ ಮಾಡುವ ಮೂಲಕ ಅತಿ ಹೆಚ್ಚು ಸ್ಥಾನ ಪಡೆಯುವಂತೆ ಮಾಡಬೇಕಾಗಿದೆ ಎಂದರು.
ಒಂದು ಕಾಲದಲ್ಲಿ ಜಿಲ್ಲೆಯಲ್ಲಿ ಪಕ್ಷ 13 ರಲ್ಲಿ 9 ಸ್ಥಾನಗಳನ್ನು ಗೆದ್ದ ಉದಾಹರಣೆ ಇದೆ, ಈಗಲೂ ಪಕ್ಷ ಸದೃಢವಾಗಿದೆ, ಪಕ್ಷದ ಪರವಾಗಿ ಮುಖಂಡರಾದ ಡಾ.ಜಿ.ಪರಮೇಶ್ವರ್‌, ಟಿ.ಬಿ.ಜಯಚಂದ್ರ, ಕೆ.ಎನ್‌.ರಾಜಣ್ಣ ಸೇರಿದಂತೆ ಎಲ್ಲಾ ನಾಯಕರು ತಮ್ಮ ಶಕ್ತಿ ಮೀರಿ ದುಡಿಯುತ್ತಿದ್ದಾರೆ. ಅವರ ಹಾದಿಯಲ್ಲಿಯೇ ಇತರೆ ನಾಯಕರು ಸಹ ಪಕ್ಷವನ್ನು ಬಲಪಡಿಸಲು ಪ್ರಯತ್ನ ನಡೆಸುತ್ತಿದ್ದಾರೆ. ಇದರ ಫಲವಾಗಿ ಮುಂಬರುವ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸಲಿದ್ದಾರೆ ಎಂಬ ವಿಶ್ವಾಸವಿದೆ. ನಾವು ನೀವುಗಳೆಲ್ಲರೂ ಒಗ್ಗೂಡಿ ಈ ಕಾರ್ಯವನ್ನು ಯಶಸ್ವಿಗೊಳಿಸುವ ಗುರುತರ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಸಲೀಂ ಅಹಮದ್‌ ನುಡಿದರು.
ಕೊರೊನದಂತಹ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರು, ಮುಖಂಡರು ಕಾಂಗ್ರೆಸ್‌ ಪಕ್ಷದ ಸಹಾಯಹಸ್ತ, ಆರೋಗ್ಯ ಹಸ್ತ ಕಾರ್ಯಕ್ರಮದ ಮೂಲಕ ಜನರ ಸಂಕಷ್ಟಗಳಿಗೆ ಸ್ಪಂದಿಸಿ ಕೆಲಸ ಮಾಡಿದ್ದಾರೆ. ತಾವು ಮಾಡಿರುವ ಕೆಲಸ ಮತ್ತು ಸಂಗ್ರಹಿಸಿರುವ ಮಾಹಿತಿಗಳನ್ನು ಅದಷ್ಟು ಬೇಗ ಕೆಪಿಸಿಸಿಗೆ ಸಲ್ಲಿಸಬೇಕಿದೆ. ಇದು ಸರಕಾರದ ವಿರುದ್ದ ವಿರೋಧ ಪಕ್ಷಕ್ಕೆ ಸಿಗುವ ದೊಡ್ಡ ಸಾಕ್ಷವಾಗಿದೆ, ಕೊರೊನ ಸಾವು, ನೋವು, ಔಷಧಿ ಹಂಚಿಕೆ, ಫುಡ್‌ ಕಿಟ್‌ ಹಂಚಿಕೆ ಸೇರಿದಂತೆ ಎಲ್ಲಾ ವಿಭಾಗಗಳಲ್ಲಿಯೂ ಸರಕಾರ ಸುಳ್ಳು ಮಾಹಿತಿ ನೀಡುತ್ತಿದೆ. ಇಂತಹ ಹಸಿ ಸುಳ್ಳು ಹೇಳಿದ ಸರಕಾರದ ವಿರುದ್ಧ ಹೋರಾಡಲು ಕಾರ್ಯಕರ್ತರು ನೀಡುವ ಈ ಮಾಹಿತಿ ಪ್ರಬಲ ಅಸ್ತ್ರವಾಗಲಿದೆ ಎಂದರು.
ರಾಜ್ಯದಲ್ಲಿ ಅಧಿಕಾರದಲ್ಲಿರುವ ಸರಕಾರಕ್ಕೆ ಜೀವವೇ ಇಲ್ಲ, ಇದೊಂದು ನಿರ್ಜೀವ ಸರಕಾರ, ಮಹಿಳೆಯರು, ಮಕ್ಕಳ ಮೇಲಿನ ಅತ್ಯಾಚಾರ ಏರು ಮುಖವಾಗಿದೆ, ಅಲ್ಲದೆ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಇದನ್ನು ತಹಬದಿಗೆ ತರಬೇಕಾದ ಗೃಹ ಸಚಿವರು ಉಡಾಫೆ ಉತ್ತರ ನೀಡುತ್ತಾ ಕಾಲ ಕಳೆಯುತ್ತಿದ್ದಾರೆ. ಈ ಎಲ್ಲಾ ಅಂಶಗಳನ್ನು ಜನರ ಮುಂದಿಡುವ ಕೆಲಸವನ್ನು ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತರು ಮಾಡಬೇಕಾಗಿದೆ ಎಂದು ಸಲೀಂ ಅಹಮದ್‌ ತಿಳಿಸಿದರು.
ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಆರ್‌.ರಾಮಕೃಷ್ಣ ಮಾತನಾಡಿ, ಕೆಪಿಸಿಸಿ ಕಾರ್ಯಾಧ್ಯಕ್ಷರು ತಿಳಿಸಿರುವಂತೆ ಕೊರೊನ ಸಂದರ್ಭದಲ್ಲಿ ಪಕ್ಷದ ವತಿಯಿಂದ ಕೈಗೊಂಡ ಸಹಾಯಹಸ್ತ, ಆರೋಗ್ಯ ಹಸ್ತ, ಕಾರ್ಯಕ್ರಮಗಳು ಆಡಳಿತ ಪಕ್ಷದ ವಿರುದ್ಧ ಹೋರಾಟ ನಡೆಸಲು ಪ್ರಬಲ ಅಸ್ತ್ರವಾಗಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಹಸ್ತ, ಸಹಾಯ ಹಸ್ತ, ಪಂಚಾಯಿತಿ ಕಮಿಟಿ, ವಾರ್ಡು ಕಮಿಟಿ ರಚನೆ ಇವುಗಳ ಜವಾಬ್ದಾರಿ ಹೊತ್ತಿರುವ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರು ಕೂಡಲೇ ಮಾಹಿತಿಯನ್ನು ಪಕ್ಷದ ಕಚೇರಿಗೆ ಸಲ್ಲಿಸಬೇಕು. ಇಲ್ಲದಿದ್ದ ಪಕ್ಷದಲ್ಲಿ ಅಂತಹ ಅಧ್ಯಕ್ಷರ ವಿರುದ್ಧ ಶಿಸ್ತು ಕ್ರಮಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ತುಮಕೂರು ತಾಲೂಕು ಹಿರೇಹಳ್ಳಿ ಸಮೀಪದ ಚಿಕ್ಕಹಳ್ಳಿಯಲ್ಲಿ ನಡೆದಿರುವ ರೈತ ಮಹಿಳೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ ಆರೋಪಿಗಳನ್ನು ಬಂಧಿಸದ ಪೊಲೀಸ್‌ ಇಲಾಖೆಯ ಕಾರ್ಯ ವೈಖರಿಯನ್ನು ಖಂಡಿಸಿ ಸೆಪ್ಟಂಬರ್‌ 02 ರಂದು 10 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಎದುರು ಕಾಂಗ್ರೆಸ್‌ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುವುದು. ಎಲ್ಲಾ ಮುಖಂಡರು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳು ವಂತೆ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಆರ್‌.ರಾಮಕೃಷ್ಣ ಮನವಿ ಮಾಡಿದರು.
ವಿಧಾನಪರಿಷತ್‌ನ ಸ್ಥಳೀಯ ಸಂಸ್ಥೆಗಳಿಂದ ನಡೆಯುವ ಚುನಾವಣೆಗೆ ಕಾಂಗ್ರೆಸ್‌ ಪಕ್ಷದಲ್ಲಿ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿದ್ದು, ಈಗಾಗಲೇ ಕೆಲವರು ಅರ್ಜಿ ಸಲ್ಲಿಸಿದ್ದಾರೆ. ಪರಿಶಿಷ್ಟ ಜಾತಿ ಎಡಗೈ ಸಮುದಾಯದಿಂದ ಜಿಲ್ಲಾ ಪಂಚಾಯಿತಿ ಸದಸ್ಯರಾದ ಕೆಂಚಮಾರಯ್ಯ, ಒಕ್ಕಲಿಗ ಸಮಾಜದಿಂದ ಒಕ್ಕಲಿಗರ ಸಂಘದ ಮಾಜಿ ನಿರ್ದೇಶಕ ಆಡಿಟರ್‌ ಯಲಚವಾಡಿ ನಾಗರಾಜು, ವಾಲ್ಮೀಕಿ ಸಮುದಾಯದಿಂದ ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದ ಮಾಜಿ ನಿರ್ದೇಶಕ ಸಿ.ಬಿ.ನರಸಿಂಹಯ್ಯ ಅವರು ಕೆಪಿಸಿಸಿ ಕಾರ್ಯಾಧ್ಯಕ್ಷರು ಮತ್ತು ನನಗೆ ಅರ್ಜಿ ಸಲ್ಲಿಸಿದ್ದಾರೆ. ಇನ್ನೂ ಕೆಲವರು ಅರ್ಜಿ ಸಲ್ಲಿಸುವುದಾಗಿ ತಿಳಿಸಿದ್ದಾರೆ. ಬಂದ ಅರ್ಜಿಗಳನ್ನು ಪಕ್ಷದ ಹೈಕಮಾಂಡ್‌ಗೆ ಕಳುಹಿಸಲಾಗುವುದು. ಜಿಲ್ಲೆಯ ಮುಖಂಡರು ಮತ್ತು ಹೈಕಮಾಂಡ್‌ ತೆಗೆದುಕೊಳ್ಳುವ ನಿರ್ಧಾರಕ್ಕೆ ಸ್ವಾಗತವಿದೆ ಎಂದು ಜಿಲ್ಲಾಧ್ಯಕ್ಷ ಆರ್‌.ರಾಮಕೃಷ್ಣ ತಿಳಿಸಿದರು.
ಜಿಲ್ಲಾ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ಎಸ್‌.ಷಪಿಅಹಮದ್‌, ಮಾಜಿ ಶಾಸಕ ಡಾ.ರಫಿಕ್‌ ಅಹಮದ್‌, ಕೆಪಿಸಿಸಿ ವಕ್ತಾರರಾದ ಮುರುಳೀಧರ ಹಾಲಪ್ಪ, ಕೆಂಚಮಾರಯ್ಯ, ಹೊನ್ನಗಿರಿಗೌಡ, ಯಲಚವಾಡಿ ನಾಗರಾಜು, ಚಂದ್ರಶೇಖರ ಗೌಡ, ಮರಿಚನ್ನಮ್ಮ, ಸುಜಾತ, ಪುಟ್ಟರಾಜು, ರೇವಣ್ಣಸಿದ್ದಯ್ಯ ಮತ್ತಿತರರು ಇದ್ದರು.

Get real time updates directly on you device, subscribe now.

Comments are closed.

error: Content is protected !!