ಬೆಲೆ ಹೆಚ್ಚಳ ಮಾಡಿದ್ದೇ ಬಿಜೆಪಿ ಸಾಧನೆ: ನಾಯ್ಡು

211

Get real time updates directly on you device, subscribe now.

ತುಮಕೂರು: ಅಗತ್ಯ ವಸ್ತುಗಳ ಬೆಲೆ ಹೆಚ್ಚಳ ಮಾಡುವ ಮೂಲಕ ಬಿಜೆಪಿ ಪಕ್ಷದ ಜನಸಾಮಾನ್ಯರ ಜೀವನದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಕೆಪಿಸಿಸಿ ಸಾಮಾಜಿಕ ಜಾಲತಾಣ ವಿಭಾಗದ ಅಧ್ಯಕ್ಷ ಬಿ.ಆರ್‌.ನಾಯ್ಡು ತಿಳಿಸಿದ್ದಾರೆ.
ನಗರದ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಸಾಮಾಜಿಕ ಜಾಲತಾಣ ವಿಭಾಗದ ಮುಖಂಡರ ಸಭೆಯಲ್ಲಿ ಮಾತನಾಡಿ, ಬಿಜೆಪಿ ಪಕ್ಷದ ಮುಖಂಡರು ನೀಡಿದ ಆಶ್ವಾಸನೆಗಳನ್ನು ನಂಬಿ ಮೋದಿ ಮೋದಿ ಎಂದು ಯಾಮಾರಿದ ಯುವ ಜನತೆ ಇಂದು ಒಂದೆಡೆ ಉದ್ಯೋಗವಿಲ್ಲದೆ, ಇನ್ನೊಂದೆಡೆ ದುಡಿಯಲು ಕೆಲಸವೂ ಇಲ್ಲದೆ ಪರಿತಪಿಸುತ್ತಿದ್ದಾರೆ. ಈ ವಿಚಾರವನ್ನು ಪ್ರತಿಯೊಬ್ಬರು ಕಾಂಗ್ರೆಸ್‌ ಕಾರ್ಯಕರ್ತರು ಮನೆ ಮನೆಗೆ ತಿಳಿಸುವ ಮೂಲಕ ಬಿಜೆಪಿ ಪಕ್ಷದಿಂದ ಆಗಿರುವ ಮೋಸವನ್ನು ಬಯಲಿಗೆ ಎಳೆಯಬೇಕೆಂದರು.
ಕೆಪಿಸಿಸಿ ರಾಜ್ಯ ವಕ್ತಾರ ನಿಖೇತ್ ರಾಜ್‌ ಮೌರ್ಯ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರಕಾರಗಳು ಜನರಿಗೆ ಸುಳ್ಳು ಹೇಳಿ ಜನರನ್ನು ದಿಕ್ಕು ತಪ್ಪಿಸುತ್ತಿವೆ. ಇಂಧನ ಬಾಂಡ್ ಗಳ ಹೆಸರಿನಲ್ಲಿ ಸಾಕಷ್ಟು ತೆರಿಗೆ ವಸೂಲಿ ಮಾಡಿ, ಜನರ ಜೇಬಿಗೆ ಕತ್ತರಿ ಹಾಕಿದೆ. ಇಂಧನ ಬೆಲೆಗಳ ಜೊತೆಗೆ ದಿನಸಿ ಬೆಲೆ ಹೆಚ್ಚಳವಾಗಿದೆ. ಇದರ ಪರಿಣಾಮ ಪ್ರಯಾಣ ದರವೂ ಹೆಚ್ಚಳವಾಗಿ ಜನಸಾಮಾನ್ಯರು ಪರದಾಡುವಂತಾಗಿದ್ದಾರೆ. ಕಾಂಗ್ರೆಸ್‌ನ ಸಾಮಾಜಿಕ ಜಾಲತಾಣದ ಕಾರ್ಯಕರ್ತರು ಇದನ್ನು ಹೆಚ್ಚು ಹೆಚ್ಚು ಪ್ರಚಾರ ಮಾಡುವ ಮೂಲಕ ಸತ್ಯವನ್ನು ಜನತೆಗೆ ತಿಳಿಸುವಂತೆ ಮನವಿ ಮಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಆರ್‌.ರಾಮಕೃಷ್ಣ ಮಾತನಾಡಿ, ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಾಗು ವಿಧಾನಪರಿಷತ್‌ ಚುನಾವಣೆಗಳನ್ನು ಪಕ್ಷದ ಕಾರ್ಯಕರ್ತರು ಬಹಳ ಗಂಭೀರವಾಗಿ ಪರಿಗಣಿಸಬೇಕಾಗಿದೆ. ಜನರಿಗೆ ಒಂದು ಸುಳ್ಳನ್ನು ನೂರು ಬಾರಿ ಹೇಳಿ ಸತ್ಯವೆಂದು ಬಿಂಬಿಸಲು ಹೊರಟಿರುವ ಬಿಜೆಪಿ ಕಾರ್ಯಕರ್ತರಿಗೆ ಪ್ರತಿಯಾಗಿ ಸತ್ಯವನ್ನು ಜನರಿಗೆ ತಿಳಿಸುವ ಕೆಲಸವನ್ನು ಕಾಂಗ್ರೆಸ್‌ ಪಕ್ಷ ಮಾಡಬೇಕಾಗಿದೆ. ಹಿಂದೆ ಒಂದು ವಿಷಯವನ್ನು ಜನರಿಗೆ ತಲುಪಿಸಲು ಕಷ್ಟ ಪಡಬೇಕಾಗಿತ್ತು. ಆದರೆ ಪರಿಸ್ಥಿತಿ ಬದಲಾಗಿದೆ, ಸಾಮಾಜಿಕ ಜಾಲತಾಣಗಳು ಸಕ್ರಿಯವಾಗಿದ್ದು, ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತರು ಇದರ ಸದುಪಯೋಗ ಪಡೆದು ಜನರಿಗೆ ಪ್ರಚಲಿತ ವಿದ್ಯಮಾನಗಳನ್ನು ತಿಳಿಸಬೇಕೆಂದರು.
ವೇದಿಕೆಯಲ್ಲಿ ಜಿಲ್ಲಾ ಕಾಂಗ್ರೆಸ್‌ ಸಾಮಾಜಿಕ ಜಾಲತಾಣದ ಜಿಲ್ಲಾಧ್ಯಕ್ಷ ವೆಂಕಟೇಶಬಾಬು, ಬೆಂಗಳೂರು ವಿಭಾಗದ ಅಧ್ಯಕ್ಷ ವಾಸುದೇವ ಮೂರ್ತಿ ಮತ್ತಿತರರು ಇದ್ದರು.

Get real time updates directly on you device, subscribe now.

Comments are closed.

error: Content is protected !!