ಬೈಕ್‌ ಜಾಥಾ ಮೂಲಕ ಕಾನೂನು ಅರಿವು

193

Get real time updates directly on you device, subscribe now.

ತುಮಕೂರು: ಪ್ಯಾನ್‌ ಇಂಡಿಯಾ ಅಮೃತ ಮಹೋತ್ಸವದ ಅಂಗವಾಗಿ ಜಿಲ್ಲಾದ್ಯಾಂತ ಕಾನೂನಿನ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾಂಗ, ಜಿಲ್ಲಾಡಳಿತ, ಪೊಲೀಸ್‌ ಇಲಾಖೆ, ಜಿಲ್ಲಾ ವಕೀಲರ ಸಂಘ ಹಾಗೂ ಜಿಲ್ಲಾ ಪಂಚಾಯತಿಯ ಸಹಯೋಗದಲ್ಲಿ ನ್ಯಾಯಾಲಯದ ಆವರಣದಲ್ಲಿ ಹಮ್ಮಿಕೊಂಡಿದ್ದ ಬೈಕ್‌ ಜಾಥಾ ಕಾರ್ಯಕ್ರಮಕ್ಕೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಜಿ.ಎಸ್‌.ಸಂಗ್ರೇಶಿ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.
ಈ ವೇಳೆ ಕಾರ್ಯಕ್ರಮದಲ್ಲಿ ಮಾತನಾಡಿದ ಹಿರಿಯ ಸಿವಿಲ್‌ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯಕಾರ್ಯದರ್ಶಿ ರಾಘವೇಂದ್ರ ಶೆಟ್ಟಿಗಾರ್‌ ಅವರು ಕಾನೂನು ಸೇವೆಗಳ ಪ್ರಾಧಿಕಾರ ಪ್ರಾಧಿಕಾರ ಪ್ರಾರಂಭವಾಗಿ 25ನೇ ವರ್ಷಾಚರಣೆ ಹಾಗೂ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಪ್ಯಾನ್‌ ಇಂಡಿಯಾ ಕಾನೂನಿನ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಪ್ರತಿಯೊಬ್ಬ ವ್ಯಕ್ತಿಗೂ ಕಾನೂನಿನಡಿ ರಕ್ಷಣೆ ಹಾಗೂ ಅರಿವು ಅಗತ್ಯ. ಸಂವಿಧಾನದ ಆಶಯದಂತೆ ಅಸ್ತಿತ್ವಕ್ಕೆ ಬಂದಿರುವ ಪ್ರಾಧಿಕಾರವು ಜನರಿಗೆ ಉಚಿತವಾಗಿ ಕಾನೂನಿನ ಅರಿವು ಮೂಡಿಸಲು ಬದ್ದವಾಗಿದೆ ಎಂದು ತಿಳಿಸಿದರು.
ಬೈಕ್‌ ಜಾಥಾದಲ್ಲಿ ನ್ಯಾಯಾಂಗ ಇಲಾಖೆ ನೌಕರರು ಜಿಲ್ಲೆಯ ಪ್ರತಿ ಹಳ್ಳಿ ಹಳ್ಳಿಗೆ ಭೇಟಿ ನೀಡಿ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಧ್ಯೇಯೋದ್ದೇಶ ಹಾಗೂ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಯೋಜನೆಗಳ ಮಾಹಿತಿಯುಳ್ಳ ಕರಪತ್ರ ಹಂಚುವ ಮೂಲಕ ಕಾನೂನಿನ ಅರಿವು ಮೂಡಿಸಲಿದ್ದಾರೆ ಎಂದರು.
ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ದೊಡ್ಡ ಮನೆ ಗೋಪಾಲಗೌಡ ಮಾತನಾಡಿ, ಪ್ರಾಧಿಕಾರದಿಂದ ಜನಸಾಮಾನ್ಯರಿಗಾಗಿ ಹಮ್ಮಿಕೊಂಡಿರುವ ವಿಶೇಷ ಕಾನೂನಿನ ಅರಿವು ಅಭಿಯಾನ ಕಾರ್ಯ ಶ್ಲಾಘನೀಯವಾಗಿದ್ದು, ದುರ್ಬಲರ ರಕ್ಷಣೆಗೆ ಕಾನೂನು ಸೇವೆಗಳ ಪ್ರಾಧಿಕಾರ ದಿಟ್ಟ ಹೆಜ್ಜೆ ಇಟ್ಟಿದೆ ಎಂದರು.
ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ ರಾಷ್ಟ್ರದ ಎಲ್ಲೆಡೆ ಪ್ರಥಮ ಬಾರಿಗೆ ನ್ಯಾಯಾಂಗದ ನೌಕರರನ್ನು ಬಳಸಿಕೊಂಡು ಜಿಲ್ಲೆಯ ಪ್ರತಿ ಹಳ್ಳಿ ಹಳ್ಳಿಗೂ ಕಾನೂನಿನ ಅರಿವು ಮೂಡಿಸುತ್ತಿರುವುದು ಉತ್ತಮ ಕೆಲಸವಾಗಿದೆ ಎಂದರು.
ನಂತರ ವಿವಿಧ ಇಲಾಖೆಯ ಯೋಜನೆಗಳ ಭಿತ್ತಿ ಪತ್ರದೊಂದಿಗೆ ಕಾನೂನು ಅರಿವಿನ ಘೋಷವಾಕ್ಯಗಳನ್ನು ಹೊತ್ತು ಬೈಕ್‌ ಜಾಥ ಹೊರಟಿತು.

Get real time updates directly on you device, subscribe now.

Comments are closed.

error: Content is protected !!