ಪೌರ ಕಾರ್ಮಿಕರಿಗೆ ವಸತಿ ಕಲ್ಪಿಸಿ: ಜಿಲ್ಲಾಧಿಕಾರಿ

346

Get real time updates directly on you device, subscribe now.

ತುಮಕೂರು: ಜಿಲ್ಲೆಯಲ್ಲಿರುವ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸೇವೆ ಸಲ್ಲಿಸುತ್ತಿರುವ ವಸತಿ ರಹಿತ ಪೌರ ಕಾರ್ಮಿಕರಿಗೆ ಶೀಘ್ರ ವಸತಿ ಸೌಲಭ್ಯ ಕಲ್ಪಿಸಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ವೈ.ಎಸ್‌.ಪಾಟೀಲ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜರುಗಿದ ಸಫಾಯಿ ಕರ್ಮಚಾರಿಗಳಿಗೆ ಸರ್ಕಾರದಿಂದ ದೊರೆಯಬಹುದಾದ ಸೌಲಭ್ಯಗಳು ಹಾಗೂ ಮ್ಯಾನ್ಯುಯಲ್‌ ಸ್ಕ್ಯಾವೆಂಜರ್ ಗಳ ನಿಷೇಧ, ನಿಯೋಜನೆ ಮತ್ತು ಪುನರ್ವಸತಿ ಅಧಿನಿಯಮ 2013ರ ಬಗ್ಗೆ ಅರಿವು ಮೂಡಿಸಲು ಜಿಲ್ಲಾ ಮಟ್ಟದ ವಿಜಿಲೆನ್ಸ್ ಕಮಿಟಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಪೌರ ಕಾರ್ಮಿಕರಿಗೆ ವಸತಿ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಸ್ಥಳ ಗುರುತಿಸಿ ತ್ವರಿತವಾಗಿ ನಿವೇಶನ ಹಂಚಿ ಮನೆ ನಿರ್ಮಾಣ ಮಾಡಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಜಿಲ್ಲೆಯ ಎಲ್ಲಾ ಪಟ್ಟಣ ಪಂಚಾಯತಿ, ಪುರಸಭೆ, ನಗರಸಭೆ, ಪಾಲಿಕೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಪೌರಕಾರ್ಮಿಕರಿಗೆ ವಸತಿ ಹಂಚಿಕೆಗಾಗಿ ಈಗಾಗಲೇ ಗುರುತಿಸಿರುವ ಜಮೀನಿನನ್ನು ನಗರ ಯೋಜನಾ ಪ್ರಾಧಿಕಾರದಿಂದ ವಿನ್ಯಾಸಗೊಳಿಸಿ ನೀರು, ರಸ್ತೆ ಚರಂಡಿ, ವಿದ್ಯುತ್‌ ಪೂರೈಕೆ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯ ಒದಗಿಸಲು ಸೂಕ್ತ ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಪೌರ ಕಾರ್ಮಿಕರಿಗಾಗಿ ಈಗಾಗಲೇ ಗುರುತಿಸಿರುವ ಜಮೀನಿನಲ್ಲಿ ನಿವೇಶನ ರಹಿತವಾಗಿ ವಾಸವಿರುವ ಅಲೆಮಾರಿ, ಹಂದಿ ಜೋಗಿ, ದೊಂಬಿದಾಸ, ಮತ್ತು ಸುಡುಗಾಡು ಸಿದ್ಧ ಜನಾಂಗದವರ ಕುಟುಂಬಗಳಿಗೆ ವಿಶೇಷ ವಸತಿ ಯೋಜನೆಯಡಿ ನಿವೇಶನ ಮತ್ತು ವಸತಿ ಸೌಲಭ್ಯ ಸೇರಿದಂತೆ ಇತರೆ ಮೂಲಭೂತ ಸೌಕರ್ಯ ಒದಗಿಸಬೇಕೆಂದರು.
ಪೌರ ಕಾರ್ಮಿಕರಿಗೆ ಸುರಕ್ಷತಾ ಪರಿಕರಗಳ ವಿತರಣೆ ಮತ್ತು ಅವುಗಳ ಉಪಯೋಗ ಕುರಿತಂತೆ ಅರಿವು ಮೂಡಿಸುವುದರ ಜೊತೆಗೆ ಸಕಾಲಕ್ಕೆ ಸುರಕ್ಷತಾ ಪರಿಕರಗಳಾದ ಕೈಗವಸು, ಮಾಸ್ಕ್, ಗಮ್‌ ಬೂಟ್‌, ಸೇಪ್ಟಿ ಷೂ, ಸಮವಸ್ತ್ರಗಳನ್ನು ಸಕಾಲಕ್ಕೆ ವಿತರಿಸಬೇಕು ಎಂದರಲ್ಲದೆ, ನಗರ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುವ ನೇರ ಪಾವತಿ ಪೌರ ಕಾರ್ಮಿಕರಿಗೆ ಪ್ರತಿ ಮಾಹೆಯ ವೇತನದಲ್ಲಿ ಕಟಾಯಿಸಲಾದ ಇ.ಎಸ್.ಐ ಮತ್ತು ಪಿಎಫ್‌ ಹಣವನ್ನು ನೇರವಾಗಿ ಅವರ ಬ್ಯಾಂಕ್‌ ಖಾತೆಗೆ ಪಾವತಿಸಬೇಕು ಎಂದು ಸೂಚಿಸಿದರು.
ಎಲ್ಲಾ ಪೌರಕಾರ್ಮಿಕರಿಗೆ ಶುಚಿ ರುಚಿಯಾದ ಬೆಳಗಿನ ಉಪಹಾರ, ಮಧ್ಯಾಹ್ನದ ಊಟ ನೀಡಬೇಕು. ಮೊದಲು ಸಂಬಂಧಿಸಿದ ಅಧಿಕಾರಿಗಳು ಉಪಹಾರ ಸೇವಿಸಿದ ನಂತರ ಕಾರ್ಮಿಕರಿಗೆ ನೀಡುವ ಜೊತೆಗೆ ಕಾರ್ಮಿಕರು ಕಾರ್ಯ ನಿರ್ವಹಿಸುವ ಸ್ಥಳದಲ್ಲಿ ಶೌಚಾಲಯ ಸೇರಿದಂತೆ ಮೂಲಭೂತ ಸೌಕರ್ಯ ಒದಗಿಸಬೇಕು. ಪಾಲಿಕೆ, ಪಟ್ಟಣ ಪಂಚಾಯತಿ, ನಗರ, ಪುರ ಸಭೆಯ ಆವರಣದಲ್ಲಿ ವಿಶ್ರಾಂತಿ ಗೃಹ, ಸ್ನಾನ ಗೃಹ, ಕುಡಿಯುವ ನೀರು ಸೇರಿದಂತೆ ಶೌಚಾಲಯ ನಿರ್ಮಾಣ ಮಾಡಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಿಲ್ಲಾ ಮಟ್ಟದ ವಿಜಿಲೆನ್ಸ್ ಸಮಿತಿ ಸದಸ್ಯ ಡಾ.ಬಿ.ಕೆ.ಓಬಳೇಶ ಮಾತನಾಡಿ ಸ್ವಯಂ ಘೋಷಣೆ ಮಾಡಿದ ಪೌರಕಾರ್ಮಿಕರ ಸರ್ವೇ ಕಾರ್ಯ ಪ್ರಗತಿಯಲ್ಲಿದೆ ಎಂದು ಸಭೆಗೆ ಮಾಹಿತಿ ನೀಡಿದರಲ್ಲದೆ, ಪೌರಕಾರ್ಮಿಕರ ಅವಲಂಬಿತ ಕುಟುಂಬಕ್ಕೆ ಸರ್ಕಾರದ ಯೋಜನೆಗಳ ಬಗ್ಗೆ ಅರಿವಿಲ್ಲ, ಅಧಿಕಾರಿಗಳು ಸರ್ಕಾರಿ ಯೋಜನೆಗಳ ಬಗ್ಗೆ ಪ್ರಚುರಪಡಿಸಿ ಪೌರಕಾರ್ಮಿಕರ ಅವಲಂಬಿತ ಕುಟುಂಬಗಳ ಆರ್ಥಿಕ ನೆರವು ಒದಗಿಸಬೇಕು, ಅಕಾಲಿಕ ಮರಣಕ್ಕೆ ತುತ್ತಾದ ಪೌರಕಾರ್ಮಿಕರ ಕುಟುಂಬ ಸದಸ್ಯರಿಗೆ ಉದ್ಯೋಗ ನೀಡುವ ವ್ಯವಸ್ಥೆಯಾಗಬೇಕು. ಈ ಬಗ್ಗೆ ಜಿಲ್ಲಾಧಿಕಾರಿಗಳು ಮೇಲ್ವಿಚಾರಣೆ ಮಾಡಬೇಕು ಎಂದು ವಿನಂತಿಸಿದರು.
ಸಭೆಯಲ್ಲಿ ಜಿಲ್ಲಾ ಮಟ್ಟದ ವಿಜಿಲೆನ್ಸ್ ಸಮಿತಿ ಸದಸ್ಯ ಕದರಪ್ಪ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಪ್ರೇಮಾ, ಲೀಡ್‌ ಬ್ಯಾಂಕ್‌ ಮ್ಯಾನೇಜರ್‌ ಯಲ್ಲೂರ್ಕರ್‌ ಸೇರಿದಂತೆ ನಗರ ಸ್ಥಳೀಯ ಸಂಸ್ಥೆಗಳ ವಿವಿಧ ಅಧಿಕಾರಿಗಳು ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!