ಪಾರದರ್ಶಕ ಮತದಾನಕ್ಕೆ ಆದ್ಯತೆ ನೀಡಿ: ಡೀಸಿ

259

Get real time updates directly on you device, subscribe now.

ತುಮಕೂರು: ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಡಿಸೆಂಬರ್‌ 10 ರಂದು ನಡೆಯಲಿರುವ ರಾಜ್ಯ ವಿಧಾನ ಪರಿಷತ್‌ ಚುನಾವಣೆಯನ್ನು ನಿಷ್ಪಕ್ಷಪಾತ, ಪ್ರಾಮಾಣಿಕ ಹಾಗೂ ಪಾರದರ್ಶಕವಾಗಿ ನಡೆಸಲು ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ ವೈ.ಎಸ್‌.ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಗುಬ್ಬಿ ವೀರಣ್ಣ ರಂಗಮಂದಿರದಲ್ಲಿ ಜರುಗಿದ ಮತಗಟ್ಟೆ ಅಧ್ಯಕ್ಷಾಧಿಕಾರಿಗಳು ಹಾಗೂ ಮತಗಟ್ಟೆ ಅಧಿಕಾರಿಗಳ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿ, ವಿಧಾನ ಪರಿಷತ್‌ ಚುನಾವಣೆ ಸಂಬಂಧ ಈಗಾಗಲೇ ಎಲ್ಲಾ ತಾಲೂಕುಗಳಲ್ಲಿ ಮತಗಟ್ಟೆ ಅಧಿಕಾರಿಗಳನ್ನು ನೇಮಕ ಮಾಡಲಾಗಿದ್ದು, ತರಬೇತಿ ಪಡೆದು ಯಾವುದೇ ಲೋಪ ದೋಷಗಳಿಲ್ಲದಂತೆ ಹಾಗೂ ಯಾವುದೇ ಅಹಿತಕರ ಘಟನೆಗೆ ಆಸ್ಪದ ಮಾಡಿಕೊಡದಂತೆ ಚುನಾವಣೆಯನ್ನು ಶಾಂತಿಯುತ ಹಾಗೂ ಯಶಸ್ವಿಯಾಗಿ ನಡೆಸಬೇಕು ಎಂದು ಜಿಲ್ಲಾ ಉಪ ವಿಭಾಗಾಧಿಕಾರಿಗಳು ಹಾಗೂ ತಹಸೀಲ್ದಾರ್ ಗಳಿಗೆ ಸೂಚನೆ ನೀಡಿದರು.
ಈ ಚುನಾವಣೆಯಲ್ಲಿ 6 ಮಂದಿ ಅಭ್ಯರ್ಥಿಗಳು ಸ್ಪರ್ಧಿಸಿದ್ದು, ಒಟ್ಟು 5559 ಮತದಾರರು ಮತ ಚಲಾವಣೆ ಮಾಡಲಿದ್ದಾರೆ. ಎಂದಿನಂತೆ ನಡೆಯುವ ಸಾರ್ವತ್ರಿಕ ಚುನಾವಣೆ ವಿಧಾನಕ್ಕಿಂತ ವಿಧಾನ ಪರಿಷತ್‌ ಚುನಾವಣಾ ವಿಧಾನ ಭಿನ್ನವಾಗಿದ್ದು, ಅತ್ಯಂತ ಜಾಗರೂಕತೆಯಿಂದ ಕಾರ್ಯ ನಿರ್ವಹಿಸಬೇಕು ಎಂದರಲ್ಲದೆ, ಚುನಾವಣೆಯ ದಿನ ಬೆಳಗ್ಗೆ 8 ರಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದ್ದು, ಸಂಬಂಧಿಸಿದ ಅಧಿಕಾರಿಗಳು ಕಡ್ಡಾಯವಾಗಿ ಪೂರ್ಣ ಸಮಯದವರೆಗೆ ಮತ ಕೇಂದ್ರಗಳಲ್ಲಿ ಹಾಜರಿದ್ದು, ಕಾರ್ಯ ನಿರ್ವಹಿಸಬೇಕು ಎಂದರು.
ಚುನಾವಣೆಯಲ್ಲಿ ಗ್ರಾಪಂ, ಪಟ್ಟಣ ಪಂಚಾಯ್ತಿ, ಪುರಸಭೆ, ನಗರಸಭೆ, ಪಾಲಿಕೆಯ ಚುನಾಯಿತ ಸದಸ್ಯರು ಮತದಾರರಾಗಿದ್ದು, ಪಾಲಿಕೆ ಸೇರಿದಂತೆ ಸರ್ಕಾರಿ ಕಚೇರಿಗಳು ಮತ ಕೇಂದ್ರಗಳಾಗಿರುತ್ತವೆ. ಪ್ರತಿ ಮತ ಕೇಂದ್ರಗಳಲ್ಲಿ ಸೂಕ್ಷ್ಮ ವೀಕ್ಷಕರನ್ನು ನೇಮಕ ಮಾಡಲಾಗಿದೆ. ಈ ಸಂದರ್ಭದಲ್ಲಿ ಯಾವುದೇ ರೀತಿಯ ವೈಯಕ್ತಿಕ ಆಸಕ್ತಿಗಳಿಗೆ ಎಡೆ ಮಾಡಿಕೊಡದೆ ಮತದಾನ ನಡೆಯುವಂತೆ ನೋಡಿಕೊಳ್ಳಬೇಕು. ಮತಗಟ್ಟೆಗಳಲ್ಲಿ ಸಂಪೂರ್ಣ ಜವಾಬ್ದಾರಿ ಹಾಗೂ ಅಧಿಕಾರವನ್ನು ಪ್ರಿಸೈಡಿಂಗ್‌ ಅಧಿಕಾರಿ ಹಾಗೂ ಪೋಲಿಂಗ್‌ ಅಧಿಕಾರಿಗಳಿಗೆ ವಹಿಸಲಾಗಿದೆ. ಅಲ್ಲಿನ ಪಿಡಿಒ ಅಥವಾ ಕಾರ್ಯದರ್ಶಿಗಳು ಮತದಾರರನ್ನು ಗುರುತಿಸುವ ಅಧಿಕಾರ ಹೊಂದಿರುತ್ತಾರೆ. ಚುನಾವಣಾ ಸಮಿತಿಯ ನಿಯಮಗಳನ್ನು ಉಲ್ಲಂಘನೆ ಮಾಡಿದಲ್ಲಿ ಅಂಥವರ ವಿರುದ್ಧ ಕಾನೂನು ರೀತ್ಯಾ ಕ್ರಮ ಜರುಗಿಸಲಾಗುವುದು ಎಂದು ಸೂಚನೆ ನೀಡಿದರು.
ನಂತರ ಚುನಾವಣೆಗೆ ಸಂಬಂಧಿಸಿದಂತೆ ಮತದಾನ ಪೂರ್ವ ಹಾಗೂ ಮತದಾನ ನಂತರದ ಮತಗಟ್ಟೆಗಳ ಸಿದ್ಧತೆ, ನಮೂನೆಗಳ ಸಿದ್ಧಪಡಿಕೆ, ಸಹಿ- ಮೊಹರು, ಮತಪೆಟ್ಟಿಗೆಗಳ ಸೀಲಿಂಗ್‌, ಸಿಂಧು ಮತ್ತು ಅಸಿಂಧು ಮತಗಳು, ಮತದಾರರೊಂದಿಗೆ ಬರುವ ಅನುಮತಿಸಿದ ವ್ಯಕ್ತಿಗಳ ಹಕ್ಕುಗಳು, ಪಿಆರ್‌ಒ ಹಾಗೂ ಎಪಿಆರ್‌ಒ ಅಧಿಕಾರಿಗಳ ಜವಾಬ್ದಾರಿ ಸೇರಿದಂತೆ ಸಂಪೂರ್ಣ ಮಾಹಿತಿ ನೀಡಲಾಯಿತು.
ತರಬೇತಿಯಲ್ಲಿ ಅಪರ ಜಿಲ್ಲಾಧಿಕಾರಿ ಪೂಜಾರ್‌ ವೀರಮಲ್ಲಪ್ಪ, ಮಧುಗಿರಿ ಉಪ ವಿಭಾಗಾಧಿಕಾರಿ ಸೋಮಪ್ಪ ಕಡಕೋಳ, ಡಯಟ್‌ ಪ್ರಿನ್ಸಿಪಲ್‌ ಮಂಜುನಾಥ್‌, ಮಾಸ್ಟರ್‌ ಟ್ರೈನರ್‌ ರಂಗಧಾಮಯ್ಯ, ಎಲ್ಲಾ ತಾಲೂಕಿನ ಪ್ರಿಸೈಡಿಂಗ್‌ ಅಧಿಕಾರಿ ಹಾಗೂ ಪೋಲಿಂಗ್‌ ಅಧಿಕಾರಿಗಳು, ಶಿಕ್ಷಕರು ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!