ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಶಾಲೆಗೆ ಕರೆತನ್ನಿ: ಎಡಿಸಿ

120

Get real time updates directly on you device, subscribe now.

ತುಮಕೂರು: ಜಿಲ್ಲೆಯಲ್ಲಿ ವಿವಿಧ ಕಾರಣಗಳಿಂದ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಶಾಲೆಗೆ ಕರೆತರಲು ಕ್ರಮ ಕೈಗೊಳ್ಳಬೇಕೆಂದು ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಪ್ರಧಾನ ಮಂತ್ರಿಗಳ 15 ಅಂಶಗಳ ಕಾರ್ಯಕ್ರಮಗಳ ಪರಿಶೀಲನಾ ಸಭೆಯಲ್ಲಿ ಮಾತನಾಡಿ, 16 ವರ್ಷದೊಳಗಿನ ಶಾಲೆ ಬಿಟ್ಟ ಹಾಗೂ ಬಾಲಕಾರ್ಮಿಕ ಮಕ್ಕಳ ಮನವೊಲಿಸಿ ಮರಳಿ ಶಾಲೆಗೆ ಬರುವಂತೆ ಜಾಗೃತಿ ಮೂಡಿಸಬೇಕು, ಯಾವುದೇ ಮಗು ಶಾಲಾ ಶಿಕ್ಷಣದಿಂದ ವಂಚಿತರಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ನಿರ್ದೇಶನ ನೀಡಿದರು.
ಪ್ರಧಾನ ಮಂತ್ರಿಗಳ ಆವಾಜ್‌ ಯೋಜನೆಗೆ ಸಂಬಂಧಿಸಿದಂತೆ ಮನೆ ಮನೆಗೆ ಭೇಟಿ ನೀಡಿ ಜನ ಜಾಗೃತಿ ಮೂಡಿಸಬೇಕು. ಪ್ರತಿ ಶಾಲಾ- ಕಾಲೇಜುಗಳಿಗೆ ಕೌಶಲ್ಯಾಭಿವೃದ್ಧಿ ಬಗ್ಗೆ ಮಾಹಿತಿ ನೀಡಬೇಕು, ಪ್ರಧಾನ ಮಂತ್ರಿಗಳ ಜನವಿಕಾಸ ಯೋಜನೆಗೆ ಸಂಬಂಧಿಸಿದಂತೆ ಮಾಹಿತಿ ಕೇಂದ್ರಗಳಲ್ಲಿ, ಜನರಿಗೆ ಬೇಕಾದ ಮಾಹಿತಿಯನ್ನು ಸಮರ್ಪಕವಾಗಿ ಒದಗಿಸಬೇಕು ಎಂದರು.
ಪ್ರಧಾನ ಮಂತ್ರಿಯವರು ಜಾರಿಗೆ ತಂದ ಜನ್‌ ಧನ್‌ ಯೋಜನೆಯಡಿ 15 ವರ್ಷದೊಳಗಿನ ಎಲ್ಲಾ ಮಕ್ಕಳು ಕಡ್ಡಾಯವಾಗಿ ಖಾತೆ ತೆರೆಯಬೇಕು. ಮಕ್ಕಳ ಖಾತೆ ತೆರೆಯಲು ಬ್ಯಾಂಕಿನ ವ್ಯವಸ್ಥಾಪಕರು, ಶಾಲೆಯ ಮುಖ್ಯ ಶಿಕ್ಷಕರು ತಕಾರಾರು ಮಾಡಿದಲ್ಲಿ ಅಂತಹವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದರು.
ನಿರುದ್ಯೋಗಿ ಯುವಕ ಯುವತಿಯರಿಗೆ ಬ್ಯಾಂಕ್ ಗಳಿಂದ ಸಾಲ ಸೌಲಭ್ಯ ಕಲ್ಪಿಸುವ ಮೂಲಕ ಸ್ವಯಂ ಉದ್ಯೋಗ ಕೈಗೊಳ್ಳಲು ಉತ್ತೇಜಿಸಬೇಕು. ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೀದಿ ಬದಿ ವ್ಯಾಪಾರಸ್ಥರ ಸಮೀಕ್ಷೆ ನಡೆಸಿ, ಗುರುತಿನ ಚೀಟಿ ನೀಡಿ ಅಗತ್ಯ ಇರುವವರಿಗೆ ಸಾಲ ಸೌಲಭ್ಯ ಒದಗಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಶಬೀರ್‌ ಅಹಮ್ಮದ್‌, ಪ್ರಧಾನ ಮಂತ್ರಿಗಳ 15 ಅಂಶಗಳ ಕಾರ್ಯಕ್ರಮದ ಸದಸ್ಯರಾದ ಜೆಫಿನ್‌ ಜಾಯ್‌ ಹಾಗೂ ಶೀತಲ್‌ ಕುಮಾರ್‌ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!